ಹೆಮ್ಮೆಯ ಸೇನೆಯನ್ನೂ ಹೀಗಳೆದ ಡಿಸಿಎಂ, ಇದು ದುರ್ದೈವ ಎಂದ ಹೆಚ್​ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಣ ವಾಕ್ಸಮರ ಮುಂದುವರಿದಿದೆ. ಅಂಕೋಲಾ ಭೇಟಿ ವಿಚಾರವಾಗಿ ಉಭಯ ನಾಯಕರ ನಡುವಣ ವಾಕ್ಸಮರ ಮುಂದುವರಿದಿದ್ದು, ಇದೀಗ ಡಿಕೆ ಶಿವಕುಮಾರ್ ಸೇನೆಯನ್ನೇ ಅವಹೇಳನ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹೆಮ್ಮೆಯ ಸೇನೆಯನ್ನೂ ಹೀಗಳೆದ ಡಿಸಿಎಂ, ಇದು ದುರ್ದೈವ ಎಂದ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ

Updated on: Jul 22, 2024 | 11:39 AM

ಬೆಂಗಳೂರು, ಜುಲೈ 22: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತದ ಸಂತ್ರಸ್ತರನ್ನು ಭೇಟಿಯಾಗಲು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತೆರಳಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದರು. ಅದಕ್ಕೆ ಇದೀಗ ತಿರುಗೇಟು ನೀಡಿರುವ ಹೆಚ್​ಡಿ ಕುಮಾರಸ್ವಾಮಿ, ನನ್ನನ್ನು ಹೀಗಳೆಯುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಡಿಸಿಎಂ ಡಿಕೆ ಶಿವಕುಮಾರ್ ಹೀಗಳೆದಿರುವುದು ದುರ್ದೈವದ ಸಂಗತಿ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ಈ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದರು! ಮಿಲಿಟರಿಯನ್ನು ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು. ಅವರೊಬ್ಬರೇ ಬಂದು ಏನು ಮಾಡುತ್ತಾರೆ ಎಂದು ಲಘುವಾಗಿ ಮಾತನಾಡಿದ್ದರು. ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ ಎಂದು ಕುಮಾರಸ್ವಾಮಿ ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರಕಾರವನ್ನೂ ಟೀಕಿಸಿಲ್ಲ. ಆದರೂ, ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ 40ಕ್ಕೂ ಹೆಚ್ಚು ವೀರಯೋಧರು ರಕ್ಷಣಾ ಕಾರ್ಯಕ್ಕೆ ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಡಿಕೆಶಿಗೆ ಹೆಚ್​ಡಿಕೆ ಎಚ್ಚರಿಕೆ

ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ. ಇಷ್ಟು ಸರಳ ಸಾಮರಸ್ಯ ತತ್ತ್ವವೂ ಡಿಸಿಎಂ ಆಗಿರುವ ವ್ಯಕ್ತಿಗೆ ತಿಳಿದಿಲ್ಲ ಎಂದರೆ, ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us