ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್
ಜಿಲ್ಲೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ. ಹಾಗೂ ದೊರೆಯಬೇಕಾದ ಮೂಲಭೂತ ಸೌಲಭ್ಯಗಳು ಜನರಿಗೆ ನೀಡುವಂತೆ ಅಧಿಕಾರಿಗಳಿಗೆ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ವಿಜಯಪುರದಲ್ಲಿ ಮಾತನಾಡಿದರು.

ವಿಜಯಪುರ: ಸ್ವಚ್ಛ ಹಾಗೂ ಸುಂದರ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ನಿರಂತರವಾಗಿ ಶ್ರಮವಹಿಸಬೇಕು ಈ ಕುರಿತು ಪ್ರತಿ ಗ್ರಾಮಗಳಲ್ಲಿಯೂ ಸ್ವಚ್ಛತೆಯ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ನೆರವೇರಿಸಬೇಕು ಎಂದು ಬಸವನಬಾಗೇವಾಡಿ ತಾಲೂಕಿನಲ್ಲಿ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಮಾತನಾಡಿದರು.
ಜಿಲ್ಲೆಯಲ್ಲಿ ಸ್ವಚ್ಛತೆಗೆ ಪ್ರಥಮ ಆದ್ಯತೆ: ಜಿಲ್ಲೆಯಲ್ಲಿ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು. ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಪಣ ತೊಡಬೇಕು. ಈ ನಿಟ್ಟಿನಲ್ಲಿ ಕರಪತ್ರಗಳ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು. ಸರ್ಕಾರದ ಅನುದಾನದ ಸರಿಯಾಗಿ ಬಳಸಿಕೊಳ್ಳಲು ಸೂಚಿಸಿ. ಈಗಾಗಲೇ ನಿರ್ಮಿಸಿಕೊಂಡ ಶೌಚಾಲಯಗಳನ್ನು ಸರಿಯಾಗಿ ಉಪಯೋಗಿಸದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಕುಡಿಯುವ ನೀರು ಸಾರ್ವಜನಿಕರ ಮೂಲಭೂತ ಹಕ್ಕು: ತಾಲೂಕಿನಲ್ಲಿ ಎಷ್ಟು ಶುದ್ಧನೀರಿನ ಘಟಕಗಳು ಇವೆ ಎಂಬುದನ್ನು ಪರಿಶೀಲಿಸಿ, ಶೀಘ್ರವಾಗಿ ವರದಿ ಸಲ್ಲಿಸಿ. ಕುಡಿಯುವ ನೀರು ಸಾರ್ವಜನಿಕರ ಮೂಲಭೂತ ಹಕ್ಕು. ದುರಸ್ತಿಗೀಡಾಗಿರುವ ನೀರಿನ ಘಟಕಗಳನ್ನು ಸರಿಪಡಿಸಿ ನೀರು ಸಿಗುವಂತಾಬೇಕೆಂದು ಹೇಳಿದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಆಧಿಕಾರಿಗಳಿಗೆ ಸೂಚನೆ: ರೈತರು ಬೆಳೆದ ಬೆಳೆಗಳಿಗೆ ಅನುಸಾರವಾಗಿ ರಸಗೊಬ್ಬರ ಕ್ರಿಮಿನಾಶಕ ಬಳಸಿಕೊಳ್ಳಲು ಸಲಹೆ ಸೂಚನೆ ನೀಡಬೇಕೆಂದು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಆಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕಾಗಿ ಅಧಿಕಾರಿಗಳು ಬಾಗಲಕೋಟೆ ಹಾಗೂ ವಿಜಯಪುರ ಕೃಷಿ ವಿಶ್ವವಿದ್ಯಾಲಯಗಳ ಸಹಕಾರ ಪಡೆದುಕೊಳ್ಳಬೇಕು. ರೈತರು ತಮ್ಮ ಹತ್ತಿರ ಬರಲು ಹಿಂದೇಟು ಹಾಕಬಹುದು ಅದನ್ನು ಗಮನಿಸಿ ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಉಪಯುಕ್ತ ಸಲಹೆ ನೀಡಬೇಕು ಎಂದು ಸೂಚಿಸಿದರು.
ಅಂಗನವಾಡಿ ಮಕ್ಕಳಿಗೆ ಸರಿಯಾದ ರೀತಿಯ ಪೌಷ್ಠಿಕ ಆಹಾರ ದೊರೆಯುತ್ತಿಲ್ಲ: ಅಂಗನವಾಡಿ ಮಕ್ಕಳಿಗೆ ಸರಿಯಾದ ರೀತಿಯ ಪೌಷ್ಠಿಕ ಆಹಾರ ದೊರೆಯುತ್ತಿಲ್ಲ. ಆಹಾರವು ಅನರ್ಹರ ಪಾಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಈ ರೀತಿಯಾಗದಂತೆ ಎಲ್ಲಾ ಅಂಗನವಾಡಿ ಕಾರ್ಯಕರ್ತರು ಎಚ್ಚರವಹಿಸಬೇಕು ಎಂದು ಸೂಚಿಸಿದರು.
ಧಾರವಾಡದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಸಭೆ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
Published On - 6:24 pm, Wed, 13 January 21