ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್: ಇಂದಿನಿಂದ 3 ದಿನ ಇಡೀ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮುರಿನಕಟ್ಟೆ ಮರುನಿರ್ಮಾಣ ವಿವಾದದ ಬೆನ್ನಲ್ಲೇ ತೀವ್ರ ಉದ್ವಿಗ್ನತೆ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಭಟ್ಕಳ ಪಟ್ಟಣ ಮತ್ತು ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 25ರಿಂದ ಮೇ 27ರ ವರೆಗೆ ಎರಡು ದಿನಗಳ ಕಾಲ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ. ಐದಕ್ಕೂ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಿ ಭಟ್ಕಳ ಎಸಿ ಮಹೇಶ್ ಆದೇಶ ಹೊರಡಿಸಿದ್ದಾರೆ.

ಭಟ್ಕಳ, ಮೇ 25: ತಣ್ಣಗಾಗಿದ್ದ ಕರಾವಳಿಯ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಮುರಿನಕಟ್ಟೆ ವಿವಾದ (Murinakatte Issue) ಮತ್ತೆ ಕಿಚ್ಚು ಹೊತ್ತಿಸಿದೆ. ಭಟ್ಕಳದ ವೆಂಕಟಾಪುರದ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಪುನರ್ ನಿರ್ಮಾಣ ಮಾಡಲಾಗಿದ್ದ ಮುರಿನಕಟ್ಟೆಯನ್ನು ಭಾನುವಾರ ರಾತ್ರಿ ಅನ್ಯಕೋಮಿನ ಸಾವಿರಾರು ಯುವಕರು ಸೇರಿ ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಭಟ್ಕಳ ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಭಟ್ಕಳ ಪಟ್ಟಣ ಹಾಗೂ ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಿಷೇಧಾಜ್ಞೆ ಹೊರಡಿಸಲಾಗಿದೆ.
ಮುಖ್ಯಾಂಶಗಳು
- ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ.
- ಪಟ್ಟಣ ಹಾಗೂ ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ.
- ಪೊಲೀಸರ ಎದುರೇ ವಿವಾದಿತ ಕಟ್ಟೆ ಧ್ವಂಸಗೊಂಡು ಭಟ್ಕಳದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ.
ಹೆದ್ದಾರಿ ಅಗಲೀಕರಣ ಮತ್ತು ವಿವಾದದ ಹಿನ್ನೆಲೆ
ರಾಷ್ಟ್ರೀಯ ಹೆದ್ದಾರಿ 66ರ ವಿಸ್ತರಣೆ ಕಾಮಗಾರಿ ಆರಂಭವಾದಾಗಿನಿಂದಲೂ ಈ ಮುರಿನಕಟ್ಟೆ ವಿವಾದದ ಕೇಂದ್ರಬಿಂದುವಾಗಿತ್ತು. ನೂರಾರು ವರ್ಷಗಳ ಇತಿಹಾಸ ಹಾಗೂ ಧಾರ್ಮಿಕ ನಂಬಿಕೆ ಹೊಂದಿದ್ದ ಈ ಸ್ಥಳವನ್ನು ಹೆದ್ದಾರಿಗಾಗಿ ಬಿಟ್ಟುಕೊಡಲಾಗಿತ್ತು. ರಸ್ತೆ ಅಗಲೀಕರಣದ ಬಳಿಕ, ಇದನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕೆಂದು ಒಂದು ವರ್ಗದವರು ಒತ್ತಾಯಿಸುತ್ತಿದ್ದರೆ, ಮೂಲ ಸ್ಥಳದಲ್ಲೇ ಮರುನಿರ್ಮಿಸಬೇಕು ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದವು. ಹಲವಾರು ಬಾರಿ ಮನವಿ ಮಾಡಿದರೂ ಇಲಾಖೆಯು ಪುನರ್ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ, ಭಾನುವಾರ ಬೆಳಗ್ಗೆ ಹಿಂದೂ ಸಂಘಟನೆಯ ನೂರಾರು ಕಾರ್ಯಕರ್ತರು ಒಟ್ಟಾಗಿ ಶ್ರದ್ಧಾ ಭಕ್ತಿಯಿಂದ ಕಟ್ಟೆಯನ್ನು ನಿರ್ಮಿಸಿದ್ದರು.
ಪೊಲೀಸರ ಎದುರಲ್ಲೇ ಜಿದ್ದಾಜಿದ್ದಿ, ಕಟ್ಟೆ ಧ್ವಂಸ
ಸಾರ್ವಜನಿಕ ಸ್ಥಳದಲ್ಲಿ ಕಟ್ಟೆ ನಿರ್ಮಾಣವಾಗುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಮತ್ತು ಮಜ್ಜಿಸೆ ಇಸ್ಲಾಹ್ ವ ತಂಝೀಮ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಉಪವಿಭಾಗಾಧಿಕಾರಿ ಜೆ. ಮಹೇಶ್ ಅವರು ಶಾಂತಿ ಸಭೆ ನಡೆಸಿ, ಇದು ಹೆದ್ದಾರಿಯ ಅತಿಕ್ರಮಿತ ಜಾಗ ಎಂದು ತಿಳಿಸಿದ್ದರು. ಅನ್ಯಕೋಮಿನ ಮುಖಂಡರು ಇದಕ್ಕೆ ಒಪ್ಪಿದರೂ, ರಾತ್ರಿ ವೇಳೆಗೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.
ಸಾವಿರಾರು ಯುವಕರು ಸ್ಥಳದಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗುತ್ತಾ ಹೆದ್ದಾರಿ ಬಂದ್ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ದೀಪನ್ ಮತ್ತು DYSP ಗಿರೀಶ್ ಯುವಕರನ್ನು ನಿಯಂತ್ರಿಸಲು ಮಾತುಕತೆ ನಡೆಸುತ್ತಿದ್ದಾಗಲೇ, ಕೆಲ ಯುವಕರು ಪೊಲೀಸರ ಎದುರೇ ಕಬ್ಬಿಣದ ಸಲಾಕೆಗಳಿಂದ ಮುರಿನಕಟ್ಟೆಯನ್ನು ಭಾಗಶಃ ಧ್ವಂಸಗೊಳಿಸಿದ್ದಾರೆ.
ಇದನ್ನೂ ಓದಿ ಕಪ್ಪೆ ಚಿಪ್ಪಿಗಾಗಿ ಹೋದವರು ಜಲಸಮಾಧಿ, ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಇಂದಿನಿಂದ ನಿಷೇಧಾಜ್ಞೆ ಜಾರಿ!
ಸದ್ಯಕ್ಕೆ ಭಟ್ಕಳ ಪಟ್ಟಣ ಹಾಗೂ ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 25ರಿಂದ ಮೇ 27ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಅಥವಾ ಅದಕ್ಕಿಂದ ಹೆಚ್ಚು ಜನರು ಗುಂಪುಗೂಡಬಾರದು ಎಂದು ಭಟ್ಕಳ ಎಸಿ ಮಹೇಶ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




