ಉತ್ತರ ಕನ್ನಡದಲ್ಲಿ ಮುಂದುವರಿದ ಮಳೆ ಅಬ್ಬರ: ಈ 5 ತಾಲೂಕುಗಳಲ್ಲಿ ನಾಳೆ ಶಾಲೆಗಳಿಗೆ ರಜೆ
ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದುವರಿದ ಭಾರೀ ಮಳೆಯಿಂದಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಇತ್ತ ಕಳಸ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೂ ರಜೆ ನೀಡಲಾಗಿದೆ.

ಮುಖ್ಯಾಂಶಗಳು
- ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆರ್ಭಟ
- ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
- ನಾಳೆ ಕಳಸ ತಾಲೂಕಿನ ಶಾಲೆಗಳಿಗೂ ರಜೆ
ಕಾರವಾರ, ಜುಲೈ 06: ರಾಜ್ಯದ ಹಲವೆಡೆ ವರುಣ (rain) ಅಬ್ಬರಿಸುತ್ತಿದ್ದಾನೆ. ಮಹಾಮಳೆಯ ಆರ್ಭಟಕ್ಕೆ ಅವಾಂತರಗಳೇ ಸೃಷ್ಟಿಯಾಗಿವೆ. ಇತ್ತ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 7ರಂದು ರಜೆ (Schools Holidays) ಘೋಷಿಸಲಾಗಿದೆ.
ಯಾವೆಲ್ಲಾ ತಾಲೂಕುಗಳಲ್ಲಿ ರಜೆ
ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಡಿಸಿ ಲಕ್ಷ್ಮೀಪ್ರಿಯಾ ಸೋಮವಾರ ಆದೇಶ ಹೊರಡಿಸಿದ್ದಾರೆ.
ಧಾರಾಕಾರ ಮಳೆ: ಅಂಗನವಾಡಿ ಸೇರಿದಂತೆ ಶಾಲೆಗಳಿಗೆ ನಾಳೆ ರಜೆ
ಅದೇ ರೀತಿಯಾಗಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಳೆಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಳಸ ತಾಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೂ ಜುಲೈ 7 ರಜೆ ಘೋಷಿಸಿ ಕಳಸ ತಹಶೀಲ್ದಾರ್ ಮಂಜುನಾಥ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕಳಸ ತಾಲ್ಲೂಕಿನಲ್ಲಿ ಅತೀಯಾದ ಗಾಳಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ತಾಲ್ಲೂಕಿನ ಎಲ್ಲಾ 1ನೇ ತರಗತಿಯಿಂದ 7ನೇ ತರಗತಿಯವರೆಗಿನ ಸರ್ಕಾರಿ ಶಾಲೆ, ಸರ್ಕಾರಿ ಅನುದಾನಿತ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜುಲೈ 07ರಂದು ರಜೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಚೇರಿ ಮೇಲೆ ಬಿದ್ದ ಮರ
ಇನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಗಾಳಿ ಸಹಿತ ಮಳೆಗೆ ಕಾರವಾರ ನಗರಸಭೆ ಪಕ್ಕದಲ್ಲಿರುವ ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿ ಮೇಲೆ ಮರ ಬಿದ್ದಿರುವ ಘಟನೆ ನಡೆದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಕಚೇರಿಯೊಳಗಿದ್ದ ಕಡತಗಳು ಮತ್ತು ದಾಖಲೆಗಳನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




