
ಬೆಂಗಳೂರು, ಜೂನ್ 23: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಕರಾವಳಿಯ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ, ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ (ಗಂಟೆಗೆ 30-40 ಕಿ.ಮೀ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯ ಇನ್ನುಳಿದ ಭಾಗಗಳಿಗೆ ಎಚ್ಚರಿಕೆಯ ಭಾಗವಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಹಾಗೂ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಹಾವೇರಿ, ಗದಗ ಮತ್ತು ಬಾಗಲಕೋಟೆ ಭಾಗದ ಹಲವು ಪ್ರದೇಶಗಳಲ್ಲಿ ಸಾಧಾರಣ ಪ್ರಮಾಣದ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ನಿರೀಕ್ಷೆಯಿದೆ.
ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದ್ದು, ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.
ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್ ಇರುವುದರಿಂದ ಹಾಗೂ ರಾಜ್ಯದ ಉಳಿದೆಡೆ ಯೆಲ್ಲೋ ಅಲರ್ಟ್ ಘೋಷಿಸಿರುವುದರಿಂದ ಸಾರ್ವಜನಿಕರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಗುಡುಗು-ಮಿಂಚಿನ ಸಂದರ್ಭದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ