ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿದ ಕರ್ನಾಟಕ ಸರ್ಕಾರ

|

Updated on: Mar 09, 2023 | 10:00 AM

Uttara Kannada: ಉತ್ತರ ಕನ್ನಡ ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರ್ನಾಟಕ ಸರ್ಕಾರ ಕೊನೆಗೂ ಸ್ಥಳ ಮಂಜೂರು ಮಾಡಿದೆ. ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದ ಜಾಗವನ್ನೇ ಮಂಜೂರು ಮಾಡಿದೆ.

ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿದ ಕರ್ನಾಟಕ ಸರ್ಕಾರ
ವಿಧಾನಸೌಧ
Follow us on

ಉತ್ತರ ಕನ್ನಡ: ಕರ್ನಾಟಕ ವಿಧಾಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಕರ್ನಾಟಕ ಬಿಜೆಪಿ ಸರ್ಕಾರ (Karnataka Govt) ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ (Super Speciality Hospital, Uttara Kannada) ಜಾಗ ಮಂಜೂರು ಮಾಡಿದೆ. ಕುಮಟಾ (Kumta) ನಗರದ ಕೇಂದ್ರ ಭಾಗದಲ್ಲಿ ಸರ್ವೆ ನಂ.440ರಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ (Ekalavya Model Residential School) ನಿರ್ಮಾಣಕ್ಕೆ ಮೀಸಲಿಟ್ಟಿದ್ದ 15.35 ಎಕರೆ ಜಾಗವನ್ನೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು ಮಾಡಿ ಸಮಾಜ ಕಲ್ಯಾಣ ಇಲಾಖೆ (Department of Social Welfare) ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕೆ ಪರ್ಯಾಯ ಜಾಗ ಒದಗಿಸುವ ಷರತ್ತಿನ ಮೇಲೆ ಒಟ್ಟು 17.14 ಎಕರೆ ಜಾಗದಲ್ಲಿ 15.35 ಎಕರೆ ಜಾಗ ಆಸ್ಪತ್ರೆಗೆ ಸ್ಥಳ ಮಂಜೂರು ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಕಳೆದ ಮೂರು ವರ್ಷಗಳಿಂದ ಹೋರಾಟ, ಪ್ರತಿಭಟನೆಗಳು ತೀವ್ರಗೊಂಡಿದ್ದವು. ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜಿನಿಂದ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಕಳಿಸಲಾಗಿತ್ತು. ಈ ಪ್ರಸ್ತಾವವನ್ನೇ ಆರ್ಥಿಕ ಇಲಾಖೆ ತಿರಸ್ಕರಿಸಿತ್ತು. ತದನಂತರ ತೀವ್ರ ಒತ್ತಡಕ್ಕೆ ಮಣಿದ ಸರ್ಕಾರ ಆಸ್ಪತ್ರೆ ನಿರ್ಮಾಣಕ್ಕೆ ಅಸ್ತು ಎಂದಿತ್ತು. ಇದೀಗ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡಿ ಆದೇಶಿಸಲಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೀಸಿದ ಬಿಸಿಗಾಳಿ, ದೇಶದಲ್ಲೇ ಮೊದಲು

ಆರಂಭದಲ್ಲಿ ಸರ್ಕಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅಸ್ತು ಎಂದಿತ್ತಾದರೂ ಎಲ್ಲಿ ನಿರ್ಮಾಣ ಮಾಡಬೇಕು ಎಂಬ ಪ್ರಶ್ನೆ ಉದ್ಭವಿಸಿತ್ತು. ಆಸ್ಪತ್ರೆ ನಿರ್ಮಾಣದ ಬಿಸಿಬಿಸಿ ಚರ್ಚೆ ವೇಳೆ ಕಾರವಾರ ಮತ್ತು ಕುಮಟಾ ಹೆಸರು ಮುನ್ನಲೆಗೆ ಬಂದಿತ್ತು. ಅಲ್ಲದೆ, ಕಾರವಾರದಲ್ಲಿ ಈಗಿರುವ ಆಸ್ಪತ್ರೆಯನ್ನೇ ಮೇಲ್ದರ್ಜೆಗೆ ಏರಿಸುವುದಾ ಅಥವಾ ಕುಮಟಾದಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾ ಎಂದು ಚರ್ಚೆ ನಡೆದಿತ್ತು. ಇನ್ನು ಕಾರವಾರದಲ್ಲಿನ ವೈದ್ಯಕೀಯ ಕಾಲೇಜಿಗೆ ಸೇರಿದ ಸ್ಥಳಗಳು ಬೇರೆಬೇರೆ ಇಲಾಖೆಗಳಿಗೆ ಸೇರಿದ್ದರಿಂದ ಇದರ ಆವರಣದಲ್ಲಿ ಆಸ್ಪತ್ರೆ ನಿರ್ಮಾಣ ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ಬರಲಾಗಿತ್ತು.

ತದನಂತರ ನಡೆದಿದ್ದ ಸಭೆಯಲ್ಲಿ ಆಸ್ಪತ್ರೆ ನಿರ್ಮಾಣದ ಪ್ರಸ್ತಾವನೆಗೆ ಸರ್ಕಾರ ಒಪ್ಪಿಕೊಂಡಿತ್ತು. ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗವಾದ ಕುಮಟಾದ ಆಸುಪಾಸಿನಲ್ಲಿ ಆಸ್ಪತ್ರೆ ಮಾಡಬೇಕೆಂಬ ಪ್ರಸ್ತಾವನೆಗೆ ಸರ್ಕಾರ ಮತ್ತು ಮಂತ್ರಿಗಳು ಒಪ್ಪಿಕೊಂಡಿತ್ತು. ಅದರಂತೆ ಈಗ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಮೀಸಲಿರಿಸಿ ಸರ್ಕಾರ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Thu, 9 March 23