ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಅಕ್ರಮಗಳ ಬಗ್ಗೆ ಚಾರ್ಜ್ಶೀಟ್ ಸಲ್ಲಿಸಿದ ಸಿಬಿಐ
ವಾಲ್ಮೀಕಿ ಅಭಿವೃದ್ಧಿ ನಿಗಮದ 89.63 ಕೋಟಿ ರೂ. ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಜನರ ವಿರುದ್ಧ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿದೆ. ಸಚಿವರ ಕುಟುಂಬಸ್ಥರ ಖಾತೆಗಳಿಗೆ 1.20 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿರುವುದು ಹಾಗೂ ಬೆನಾಮಿ ಕಾರು ಖರೀದಿಯ ಬಗ್ಗೆ ಚಾರ್ಜ್ಶೀಟ್ನಲ್ಲಿ ತನಿಖಾ ಸಂಸ್ಥೆ ಉಲ್ಲೇಖಿಸಿದೆ.

ಬೆಂಗಳೂರು, ಜೂನ್ 3: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ (KMVSTDCL) ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಸೇರಿದಂತೆ 30 ಆರೋಪಿಗಳ ವಿರುದ್ಧ ಸಿಬಿಐ (CBI) ಇಲ್ಲಿನ ನ್ಯಾಯಾಲಯಕ್ಕೆ ಮಂಗಳವಾರ ಬೃಹತ್ ದೋಷಾರೋಪ ಪಟ್ಟಿ ಸಲ್ಲಿಸಿದೆ. ನಿಗಮದ ಹಣ ವರ್ಗಾವಣೆಯಲ್ಲಿ ಮಾಜಿ ಸಚಿವರ ಕುಟುಂಬಸ್ಥರು ಹಾಗೂ ಅವರ ಆಪ್ತರು ಶಾಮೀಲಾಗಿರುವುದು ಸಾಬೀತಾಗಿದೆ ಎಂದು ಸಿಬಿಐ ಸ್ಪಷ್ಟಪಡಿಸಿದೆ.
ಮುಖ್ಯಾಂಶಗಳು
- ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಸಿಬಿಐನಿಂದ 3 ಪ್ರತ್ಯೇಕ ಚಾರ್ಜ್ಶೀಟ್ ಸಲ್ಲಿಕೆ.
- ಹಗರಣದ ಮುಖ್ಯ ಸೂತ್ರಧಾರ ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧದ ಆರೋಪಗಳ ಸಾಕ್ಷಿ ಬಗ್ಗೆ ಉಲ್ಲೇಖ.
- ನಕಲಿ ದಾಖಲೆ ಸೃಷ್ಟಿಸಿ ಒಟ್ಟು 89.63 ಕೋಟಿ ರೂ. ಹಣ ದುರುಪಯೋಗಪಡಿಸಿದ್ದರ ಬಗ್ಗೆ ಉಲ್ಲೇಖ.
ವಾಲ್ಮೀಕಿ ನಿಗಮ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (KGTTI) ಈ ಮೂರೂ ಘಟಕಗಳಲ್ಲಿ ನಡೆದಿರುವ ಆರ್ಥಿಕ ದುರುಪಯೋಗದ ತನಿಖೆ ಪೂರ್ಣಗೊಳಿಸಲಾಗಿದ್ದು, ಮೂರರಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ ಎಂದು ಸಿಬಿಐ ತಿಳಿಸಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ಎಂ.ಜಿ. ರೋಡ್ ಶಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಹೈಕೋರ್ಟ್ ಉಸ್ತುವಾರಿಯಲ್ಲಿ ಈ ತನಿಖೆ ನಡೆದಿತ್ತು. ನಂತರ ಹೈಕೋರ್ಟ್ ಆದೇಶದ ಮೇರೆಗೆ ತನಿಖೆಯನ್ನು ಇಲಾಖೆಯ ಇತರೆ ಎರಡು ಘಟಕಗಳಿಗೂ ವಿಸ್ತರಿಸಲಾಗಿತ್ತು.
ಕೋಟ್ಯಂತರ ರೂಪಾಯಿ ಲೂಟಿ ನಡೆದಿದ್ದು ಹೇಗೆ?
ಮಾಜಿ ಸಚಿವ ಬಿ. ನಾಗೇಂದ್ರ, ಅವರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ನಿಗಮದ ಎಂಡಿ ಪದ್ಮನಾಭ ಜಂಟಿಯಾಗಿ ಈ ವ್ಯವಸ್ಥಿತ ಸಂಚು ರೂಪಿಸಿದ್ದರು. ಹೈದರಾಬಾದ್ನ ಸತ್ಯನಾರಾಯಣ ವರ್ಮಾ ಎಂಬಾತ ಈ ಹಿಂದೆ ಛತ್ತೀಸ್ಗಢದಲ್ಲಿ ಮಾಡಿದ ಮಾದರಿಯಲ್ಲೇ ಇಲ್ಲೂ ನಕಲಿ ದಾಖಲೆಗಳನ್ನು ಬಳಸಿ 18 ಬೋಗಸ್ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ. ನಿಗಮದ ಎಂಡಿ ಮತ್ತು ಅಕೌಂಟ್ಸ್ ಆಫೀಸರ್ ಅವರ ನಕಲಿ ರಬ್ಬರ್ ಸ್ಟಾಂಪ್ ಹಾಗೂ ಸಹಿಗಳನ್ನು ಬಳಸಿ, ನಿಗಮದ ಖಾತೆಯಲ್ಲಿದ್ದ 187 ಕೋಟಿ ರೂ. ಪೈಕಿ 89.63 ಕೋಟಿ ರೂ. ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಈ ಹಣವನ್ನು ಸುಮಾರು 600 ಬ್ಯಾಂಕ್ ಖಾತೆಗಳ ಮೂಲಕ ರವಾನಿಸಿ ಕೊನೆಗೆ ನಗದು, ಚಿನ್ನ ಮತ್ತು ಐಷಾರಾಮಿ ಬೆನಾಮಿ ವಾಹನಗಳಾಗಿ ಪರಿವರ್ತಿಸಿಕೊಳ್ಳಲಾಗಿತ್ತು. ಇದಕ್ಕೆ ಬ್ಯಾಂಕ್ ಅಧಿಕಾರಿಗಳೂ ಸಾಥ್ ನೀಡಿದ್ದರು ಎಂಬುದಾಗಿ ಸಿಬಿಐ ಹೇಳಿದೆ.
ಕುಟುಂಬದ ಖಾತೆಗಳಿಗೆ ಸೇರಿದ ಕಮಿಷನ್ ಹಣ
ಸ್ಮಾರ್ಟ್ ಕಂಪ್ಯೂಟರ್ ಲ್ಯಾಬ್ ಹಾಗೂ ರೊಟ್ಟಿ ಮಾಡುವ ಯಂತ್ರಗಳ ಟೆಂಡರ್ ಪ್ರಕ್ರಿಯೆಯಲ್ಲಿ ನೆಕ್ಕಂಟಿ ನಾಗರಾಜ್ ಅವರ ಆಪ್ತನಿಗೆ ಸೇರಿದ ಸಂಸ್ಥೆಗೆ 13.95 ಕೋಟಿ ರೂ. ಟೆಂಡರ್ ನೀಡಲಾಗಿತ್ತು. ಇದರ ಪ್ರತಿಯಾಗಿ ಸಚಿವ ನಾಗೇಂದ್ರ ಅವರಿಗೆ ಸಂದಾಯವಾದ 1.20 ಕೋಟಿ ರೂ. ಅಕ್ರಮ ಹಣವನ್ನು ಅವರ ಸಹೋದರಿ, ಭಾವ, ಪಿಎ ಹಾಗೂ ಬಳ್ಳಾರಿಯ ಫಾರ್ಮ್ಹೌಸ್ ಮಾಲೀಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿತ್ತು ಎಂದು ಸಿಬಿಐ ಉಲ್ಲೇಖಿಸಿದೆ.
ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್: 5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
ಇದಲ್ಲದೆ, ಕೌಶಲಾಭಿವೃದ್ಧಿ ತರಬೇತಿಯ 4.90 ಕೋಟಿ ರೂ. ಕಾಮಗಾರಿಯಲ್ಲೂ ಯಾವುದೇ ಟೆಂಡರ್ ಇಲ್ಲದೆ ಉಪ-ಗುತ್ತಿಗೆ ನೀಡಿ, ನೆಕ್ಕಂಟಿ ನಾಗರಾಜ್ ಕುಟುಂಬಕ್ಕೆ 64 ಲಕ್ಷ ರೂ. ಹಾಗೂ ಇಲಾಖೆಯ ಸೆಕ್ಷನ್ ಆಫೀಸರ್ ಪ್ರಕಾಶ್ ಅವರಿಗೆ 15.50 ಲಕ್ಷ ಲಂಚ ನೀಡಲಾಗಿರುವುದನ್ನು ಪತ್ತೆ ಹಚ್ಚಲಾಗಿದೆ ಎಂದು ಸಿಬಿಐ ಉಲ್ಲೇಖಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




