ಸಚಿವ ನಾಗೇಂದ್ರ ರಾಜೀನಾಮೆ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ

|

Updated on: Jun 06, 2024 | 4:46 PM

Valmiki Corporation Scam: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಣ ಅಕ್ರಮ ಹಗರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಪಕ್ಷಗಳು ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಕೊನೆಗೂ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ಇಂದು ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ
ನಾಗೇಂದ್ರ
Follow us on

ಬೆಂಗಳೂರು, (ಜೂನ್ 06):  ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂಪಾಯಿ  ಅಕ್ರಮದಲ್ಲಿ (Valmiki Corporation Scam) ಸಚಿವ ನಾಗೇಂದ್ರ (B Nagendra) ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ಅವರು ಇಂದು (ಜೂನ್ 06) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಿದರು. ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಿಂದ ನಿರ್ಗಮಿಸಿದರು. ಆದ್ರೆ, ಸಂಜೆ 4.30ಕ್ಕೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಬಗ್ಗೆ ಒಂದಿಷ್ಟು ಮಾತುಗಳನ್ನಾಡಲಿದ್ದಾರೆ. ಅಲ್ಲದೇ ಈ ಹಗರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಅದಕ್ಕೆ ಸ್ಪಷ್ಟನೆ ನೀಡುವ ಸಾಧ್ಯತೆಗಳಿವೆ.

ಕೆಲ ಸ್ವಲ ಹೊತ್ತಿನ ಹಿಂದೆ ಅಷ್ಟೇ ಕೆಪಿಸಿಸಿ ಅಧ್ಯಕ್ಷ, ಡಿಕೆ ಶಿವಕುಮಾರ್ ಅವರು ನಾಗೇಂದ್ರ ರಾಜೀನಾಮೆ ಖಚಿತಪಡಿಸಿದ್ದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿಕೆಶಿ, ನಾಗೇಂದ್ರ ಜತೆ ನಾನು, ಗೃಹ ಸಚಿವರು ಚರ್ಚೆ ಮಾಡಿದ್ದೇವೆ. ವಾಲ್ಮೀಕಿ ನಿಗಮದ ಅಕ್ರಮದಲ್ಲಿ ನಾಗೇಂದ್ರ ಭಾಗಿಯಾಗಿಲ್ಲ. ಹೀಗಾಗಿ ಸಚಿವ ನಾಗೇಂದ್ರ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು. ಹೀಗಾಗಿ ಸ್ವತಃ ಬಿ.ನಾಗೇಂದ್ರ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದಾದ ಸ್ವಲ್ಪ ಸಮಯದಲ್ಲೇ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ, ಕೇಸ್​ ದಾಖಲಿಸಿಕೊಂಡ ಸಿಬಿಐ: ಸಚಿವ ನಾಗೇಂದ್ರಗೆ ನೋಟಿಸ್ ಸಾಧ್ಯತೆ

ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನಾವು ನಾಗೇಂದ್ರ ರಾಜೀನಾಮೆ ಕೇಳಿರಲಿಲ್ಲ, ಅವರೇ ಕೊಟ್ಟಿದ್ದಾರೆ. ನಾಗೇಂದ್ರ ಅವರೇ ಸ್ವಯಂಪ್ರೇರಿತರಾಗಿ ರಾಜೀನಾಮೆ ಕೊಟ್ಟಿದ್ದಾರೆ . ಯಾವ ಸಚಿವರು ಹಣ ದುರುಪಯೋಗ ಮಾಡಲು ಮುಂದಾಗಲ್ಲ. ಪಾರ್ಟಿಗೆ ನಾನು‌ ಮುಜುಗರ ಮಾಡುವುದಿಲ್ಲ ಎಂದು ಹೇಳಿದ್ದಾರೆ. ರಾಜೀನಾಮೆ ಕೊಡಿ ಎಂದು ನಾಗೇಂದ್ರಗೆ ನಾವು ಹೇಳಿರಲಿಲ್ಲ. ರಾಜೀನಾಮೆಗೆ ಸಿಎಂ ಕೂಡ ಆದೇಶ ಕೊಟ್ಟಿಲ್ಲ ಎಂದು ಹೇಳಿದರು.

ಈ ಬಹುಕೋಟಿ ಪ್ರಕರಣದಲ್ಲಿ ಸಿಬಿಐ ಎಂಟ್ರಿಯಾಗಿದ್ದರಿಂದ ಸರ್ಕಾರಕ್ಕೂ ಮುಜುಗರ, ಸಂಕಷ್ಟ ಎದುರಾಗಲಿದೆ. ಹೀಗಾಗಿ ಅವ್ಯವಹಾರದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಸಚಿವ ಬಿ.ನಾಗೇಂದ್ರಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಹೀಗಾಗಿ ಸಚಿವ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ಸಿಬಿಐ ಎಂಟ್ರಿ ಜೊತೆಗೆ ಮತ್ತೊಂದೆಡೆ ಬಿಜೆಪಿ, ಜೆಡಿಎಸ್​ ಸಹ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲು ಸಜ್ಜಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಮುಜುಗರವಾಗದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ನಿನ್ನೆ ರಾತ್ರಿ (ಜೂನ್ 06) ಅಷ್ಟೇ ನಾಗೇಂದ್ರ ಅವರನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡು ಈ ಪ್ರಕರಣ ಬಗ್ಗೆ ಚರ್ಚಿಸಿದ್ದರು. ಅಲ್ಲದೇ ರಾಜೀನಾಮೆ ಪಡೆಯುವುದು ಅನಿವಾರ್ಯ ಎಂದು ಸಿದ್ದರಾಮಯ್ಯ ನೇರವಾಗಿ ನಾಗೇಂದ್ರಗೆ ಹೇಳಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:21 pm, Thu, 6 June 24