ಕರ್ನಾಟಕದ ಏಕೈಕ ಮಹಿಳಾ ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: Phd, ಸಿಬ್ಬಂದಿ ನೇಮಕಾತಿಯಲ್ಲೂ ಭಾರಿ ಗೋಲ್ಮಾಲ್!

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬೋಧಕೇತರ ಸಿಬ್ಬಂದಿ ನೇಮಕಾತಿ ಹಾಗೂ ಪಿಎಚ್‌ಡಿ ಪದವಿ ಪ್ರದಾನ ವಿಚಾರವಾಗಿ ಗಂಭೀರ ಭ್ರಷ್ಟಾಚಾರ ಮತ್ತು ನಿಯಮಬಾಹಿರ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿಬಂದಿವೆ. ಸರ್ಕಾರದ ಅನುಮತಿ ಪಡೆಯದೆ ಸಿಬ್ಬಂದಿ ನೇಮಕ ಮತ್ತು ಪಿಎಚ್‌ಡಿ ಪ್ರವೇಶದಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ.

ಕರ್ನಾಟಕದ ಏಕೈಕ ಮಹಿಳಾ ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: Phd, ಸಿಬ್ಬಂದಿ ನೇಮಕಾತಿಯಲ್ಲೂ ಭಾರಿ ಗೋಲ್ಮಾಲ್!
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ
Image Credit source: tv9 kannada
Edited By:

Updated on: May 29, 2026 | 6:35 PM

ವಿಜಯಪುರ, ಮೇ 29: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ (vijayapura) ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ’ದಲ್ಲಿ (Karnataka State Akkamahadevi Women University) ಭ್ರಷ್ಟಾಚಾರ ಮತ್ತು ಅಕ್ರಮಗಳ ಸರಣಿ ಆರೋಪ ಕೇಳಿಬಂದಿವೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಪಿಎಚ್‌ಡಿ ಪದವಿ ಪ್ರದಾನ ವಿಚಾರದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ಲಂಚಕ್ಕೆ ಬೇಡಿಕೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಾಂಶಗಳು

  • ಕರ್ನಾಟಕ ಮಹಿಳಾ ವಿವಿ: ಬೋಧಕೇತರ ಸಿಬ್ಬಂದಿ ನೇಮಕಾತಿ ಅಕ್ರಮ
  • ಪಿಹೆಚ್‌ಡಿ ಪ್ರವೇಶಾತಿ ಮತ್ತು ಪದವಿ ಪ್ರದಾನದಲ್ಲಿ ಭ್ರಷ್ಟಾಚಾರ ಆರೋಪ
  • ಅಕ್ರಮಗಳ ಪರಿಹಾರಕ್ಕೆ ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹ

ನೇಮಕಾತಿ ಪ್ರಕ್ರಿಯೆ ನಿಯಮಬಾಹಿರ

ವಿಜಯಪುರ ನಗರದ ಹೊರ ಭಾಗದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆ ಆಧಾರದಲ್ಲಿ 20ಕ್ಕೂ ಅಧಿಕ ಬೋಧಕೇತರ ಸಿಬ್ಬಂದಿ, ಡಾಟಾ ಎಂಟ್ರಿ ಆಪರೇಟರ್‌ಗಳ ನೇಮಕಾತಿ ಪ್ರಕ್ರಿಯೆ ನಿಯಮಬಾಹಿರವಾಗಿ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೋಧಕೇತರ ಸಿಬ್ಬಂದಿ ನೇಮಕಾತಿಗೆ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯದ ಹಣಕಾಸು ಸಮಿತಿಯಿಂದ ಅಗತ್ಯ ಅನುಮತಿ ಪಡೆಯಲಾಗಿಲ್ಲ. ಅಲ್ಲದೇ, ಯಾವುದೇ ಅಧಿಕೃತ ನೋಟಿಫಿಕೇಶನ್ ಹೊರಡಿಸದೆ ಹಾಗೂ ಮೀಸಲಾತಿ ನಿಯಮಾವಳಿ ಅನುಸರಿಸದೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಸರ್ಕಾರದ ಅನುಮತಿ ಪಡೆದು ನಿಯಮಾನುಸಾರ ನೇಮಕಾತಿ ನಡೆಯಬೇಕು ಹಾಗೂ ರೋಸ್ಟರ್ ಪದ್ಧತಿ ಕಡ್ಡಾಯವಾಗಿ ಪಾಲಿಸಬೇಕು. ನಿಯಮಬಾಹಿರ ನೇಮಕ ನಡೆದರೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹಾಲಿ ಮಾಜಿ ಸಿಂಡಿಕೇಟ್ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕಚೇರಿ ಸಮಯ ಬದಲಾವಣೆ: ವಿಜಯಪುರ ಸರ್ಕಾರಿ ಅಧಿಕಾರಿ-ಸಿಬ್ಬಂದಿಗೆ ಹೇಳೋರಿಲ್ಲ, ಕೇಳೋರಿಲ್ಲ

ಇನ್ನು ಪಿಹೆಚ್​​ಡಿ ಪದವಿ ಪ್ರದಾನ ವಿಚಾರದಲ್ಲೂ ಭ್ರಷ್ಟಾಚಾರ, ಕಿರುಕುಳ ಆರೋಪ ಕೇಳಿಬಂದಿವೆ. ಸರ್ಕಾರದ ಹಾಗೂ ಮೀಸಲಾತಿ ನಿಯಮಾವಳಿಗಳಿಗೆ ಅನುಗುಣವಾಗಿ ಪಿಹೆಚ್‌.ಡಿ ಪ್ರವೇಶಾತಿಯನ್ನು ಲಿಖಿತ ಮತ್ತು ಮೌಖಿಕ ಪರೀಕ್ಷೆಗಳ ಮೂಲಕ ನಡೆಸಬೇಕು. ಈ ವರ್ಷ 100ಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ ದಾಖಲಾತಿ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರವೇಶ ಪ್ರಕ್ರಿಯೆಯಲ್ಲಿ ಎಕ್ಸಿಕ್ಯೂಟಿವ್ ಕಮಿಟಿಯನ್ನು ನಿಷ್ಕ್ರಿಯಗೊಳಿಸಿ, ಕೆಲವರಿಗೆ ಅನುಕೂಲವಾಗುವ ರೀತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

ಹಣ, ಚಿನ್ನಕ್ಕೆ ಬೇಡಿಕೆ

ಮಹಾಪ್ರಬಂಧ ಸಲ್ಲಿಕೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಲ್ಲೂ ಗೋಲ್ಮಾಲ್ ನಡೆಯುತ್ತಿವೆ ಎಂದು ಸಂಶೋಧನಾ ವಿದ್ಯಾರ್ಥಿನಿ ಹೇಳಿದ್ದಾರೆ. ಮೌಖಿಕ ಪರೀಕ್ಷೆ ಮತ್ತು ಮಹಾಪ್ರಬಂಧ ಮೌಲ್ಯಮಾಪನವನ್ನು ಬಾಹ್ಯ ತಜ್ಞರ ಸಮಿತಿಯಿಂದ ಸಮರ್ಪಕವಾಗಿ ನಡೆಸದೇ, ಕಾಟಾಚಾರಕ್ಕೆ ಎಂಬಂತೆ ಪ್ರಕ್ರಿಯೆ ನಡೆಯುತ್ತಿದೆಯಂತೆ. ಮಹಾಪ್ರಬಂಧ ಸಲ್ಲಿಕೆಗೆ ವಿಶ್ವವಿದ್ಯಾಲಯ ಅನುಮತಿ ಪತ್ರ ನೀಡುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಹಣ ಹಾಗೂ ಚಿನ್ನಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ವಿವಿ ಕುಲಪತಿ ಪ್ರೊ ವಿಜಯಾ ಕೋರಿಶೆಟ್ಟಿ ಹೇಳಿದ್ದಿಷ್ಟು

ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಸಿಂಡಿಕೇಟ್ ಅನುಮತಿ ನೀಡಲಾಗಿದೆ ಎಂದು ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮಾಹಿತಿ ನೀಡಿದ್ದಾರೆ.

ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲದಂತೆ ನೇಮಕಾತಿ ನಿಯಮಾವಳಿ ಪಾಲಿಸಲಾಗುವುದು. ಜೊತೆಗೆ ಪಿಹೆಚ್‌ಡಿ ಅಧ್ಯಯನಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದರೆ ವಿದ್ಯಾರ್ಥಿನಿಯರು ನೇರವಾಗಿ ನನ್ನ ಗಮನಕ್ಕೆ ತರಬಹುದು. ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದರಾಚೆ ಯಾವುದೇ ಬೇಡಿಕೆಯಿಲ್ಲ, ಇದ್ದರು ಸಹ ನಮ್ಮ ಗಮನಕ್ಕೆ ತರಬೇಕೆಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ಕ ಮಹಾದೇವಿ ಮಹಿಳಾ ವಿವಿ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ; ದಯಾಮರಣಕ್ಕೆ ಸಂತ್ರಸ್ತೆ ಮನವಿ

ಬೋಧಕೇತರ ಸಿಬ್ಬಂದಿ ನೇಮಕಾತಿ ಹಾಗೂ ಪಿಹೆಚ್​​ಡಿ ಪದವಿ ಪ್ರದಾನ ವಿಚಾರದಲ್ಲಿ ವಿಜಯಪುರದ ಮಹಿಳಾ ವಿವಿ ಮೇಲೆ ಆರೋಪಗಳು ಕೇಳಿಬಂದಿವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರು ಹಾಗೂ ಕುಲಾಧಿಪತಿಗಳು ಆಗಿರುವ ರಾಜ್ಯಪಾಲರು ಗಮನ ಹರಿಸಬೇಕಿದೆ. ಸತ್ಯಾಸತ್ಯತೆ ಪರಿಶೀಲಿಸಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us