ಅಯ್ಯೋ ಕಂದ! ಎಂಟು ತಿಂಗಳ ಮಗುವನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟು ಹೋದ ತಾಯಿ

ಕಾಲ ಎಷ್ಟೇ ಬದಲಾದರೂ ಸಮಾಜದಲ್ಲಿ ಜನರ ಮನಸ್ಥಿತಿ ಇನ್ನೂ ಬದಲಾಗಿಲ್ಲ ಎನ್ನಬಹುದು. ಶೈಕ್ಷಣಿಕ, ವೈಜ್ಞಾನಿಕವಾಗಿ ಎಷ್ಟೇ ಸಾಧನೆ ಮಾಡಿದ್ದರೂ ಇಂದಿಗೂ ಹೆಣ್ಣು, ಹುಣ್ಣು ಎಂದೇ ಭಾವಿಸಲಾಗುತ್ತಿದೆ. ನೆಲದಿಂದ ನಭದವರೆಗೂ ಮಹಿಳೆ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದರೂ ಹಿಂದಿನ ಮನಸ್ಥಿತಿ ಇನ್ನೂ ಬದಲಾವಣೆಯೇ ಆಗಿಲ್ಲ. ವಿಜಯಪುರ ನಗರದಲ್ಲಿ ಇಂದು ನಡೆದ ಘಟನೆಯೇ ಇದಕ್ಕೆ ಸಾಕ್ಷಿಯಾಗಿದೆ. ಏಳರಿಂದ ಎಂಟು ತಿಂಗಳ ಹೆಣ್ಣು ಮಗುವನ್ನು ಬಟ್ಟೆಯಲ್ಲಿ ಸುತ್ತಿ ಮಗುವಿನ ತಾಯಿ, ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟು ಹೋಗಿದ್ದಾರೆ. ಪೋಷಕರ ಮನಸ್ಥಿತಿಗೆ ಜನರು ಹಿಡಿ ಹಿಡಿ ಶಾಪ ಹಾಕಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಅಯ್ಯೋ ಕಂದ! ಎಂಟು ತಿಂಗಳ ಮಗುವನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟು ಹೋದ ತಾಯಿ
ಎಂಟು ತಿಂಗಳ ಮಗುವನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟು ಹೋದ ತಾಯಿ
Edited By:

Updated on: Aug 23, 2024 | 3:37 PM

ವಿಜಯಪುರ, ಆ.23: ನಗರದ ಪದ್ಮಾವತಿ ಕಾಲೋನಿ 2 ರಲ್ಲಿ ನಿರ್ಮಾಣ ಹಂತದ ಕಟ್ಟಡದ ಕಾಂಪೌಂಡ್​ನಲ್ಲಿಂದು ಸುಮಾರು 7 ರಿಂದ 8 ತಿಂಗಳ ವಯಸ್ಸಿನ ಹೆಣ್ಣು ಮಗು ಪತ್ತೆಯಾಗಿದೆ. ಬಟ್ಟೆಯಲ್ಲಿ ಮಗುವನ್ನು ಇಟ್ಟು ತಾಯಿ ಅಲ್ಲಿಂದ ಪರಾರಿಯಾಗಿದ್ದಾರೆ. ಹೆಣ್ಣು ಮಗುವನ್ನು ಯಾರು ಇಟ್ಟು ಹೋಗಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಇಂದು ನಸುಕಿನ ಜಾವ ಇದೇ ಕಾಲೋನಿಯ ನಿವಾಸಿ ಸಂತೋಷ್​ ನಾಗೂರ ಎಂಬ ಯುವಕ, ನಿರ್ಮಾಣ ಹಂತದ ಕಟ್ಟಡ ಕಾಂಪೌಂಡ್​ನಲ್ಲಿ ಹೆಣ್ಣು ಮಗು ಇರುವುದನ್ನು ಕಂಡಿದ್ದಾರೆ. ಸುತ್ತಮುತ್ತಲಿನ ಜನರನ್ನು ವಿಚಾರಿಸಿದ ಬಳಿಕ ಸಂತೋಷ್​, ಕಟ್ಟಡದ ಮಾಲೀಕ ಕೃಷ್ಣಪ್ಪ ಬಡಿಗೇರಗೆ ಮಾಹಿತಿ ನೀಡಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕಾಂಪೌಂಡ್​ನಲ್ಲಿ ಹೆಣ್ಣು ಮಗು ಸಿಕ್ಕ ವಿಚಾರ ತಿಳಿಯುತ್ತಿದಂತೆ ಸ್ಥಳೀಯರೆಲ್ಲರೂ ನೆರೆದಿದ್ದರು. ಅಳುತ್ತಿದ್ದ ಮಗುವನ್ನು ಸಂತೈಸಿ ಹಾಲುಣಿಸಿದ್ದಾರೆ. ಬಳಿಕ ಕೃಷ್ಣಪ್ಪ, ಆದರ್ಶ ನಗರ ಪೊಲೀಸರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆದರ್ಶನಗರ ಪೊಲೀಸರು, ಪರಿಶೀಲನೆ ಮಾಡಿ ಅಂಬ್ಯುಲೆನ್ಸ್ ಮೂಲಕ ಮಗುವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಅಮ್ಮನೊಂದಿಗೆ ಬೆಚ್ಚಗೆ ಮಲಗಿದ್ದ 3 ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ!

ಇನ್ನು ಮಗುವಿನ ಬಳಿ ಇತರೆ ಯಾವುದೇ ವಸ್ತುಗಳಾಗಲಿ, ಗುರುತು ಪತ್ತೆ ಹಚ್ಚುವಂತ ಯಾವುದೇ ದಾಖಲೆಗಳು ಸಿಕ್ಕಿಲ್ಲ. ಬಟ್ಟೆಯಲ್ಲಿ ಸುತ್ತಿಟ್ಟು ಹೋಗಿದ್ದು ಮಾತ್ರ ಕಂಡು ಬಂದಿದೆ. ನೆರೆದಿದ್ದವರೆಲ್ಲ ಹೆಣ್ಣು ಮಗುವನ್ನು ಕಂಡು ಮಮ್ಮಲ ಮರುಗಿದರು. ಯಾಕಾಗಿ ಮಗುವಿನ ತಾಯಿ ಬಿಟ್ಟು ಹೋಗಿದ್ದಾಳೆಂದು ಹಿಡಿಶಾಪ ಹಾಕಿದರು. ಶ್ರಾವಣ ಶುಕ್ರವಾರ ಲಕ್ಷ್ಮೀ ಪೂಜೆ ಮಾಡುತ್ತೇವೆ. ಶ್ರದ್ಧಾ ಭಕ್ತಿಯಿಂದ ಲಕ್ಷ್ಮೀ ಪೂಜೆ ಮಾಡುವ ನಾವು ಅದೇ ಮಾತೆಯ ಸ್ವರೂಪಿ ಹೆಣ್ಣನ್ನು ಬಿಟ್ಟು ಹೋಗಿದ್ದು ಸರಿಯಲ್ಲ ಎಂದು ಅಸಮಾಧಾನ ಹೊರ ಹಾಕಿದರು. ಜೊತೆಗೆ ಮಗುವನ್ನು ಬಿಟ್ಟು ಹೋದವರನ್ನು ಪತ್ತೆ ಮಾಡಿ, ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕಂದು ಒತ್ತಾಯ ಮಾಡಿದ್ದಾರೆ.

ಈ ಕುರಿತು ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವನ್ನು ಬಿಟ್ಟು ಹೋದವರ ಪತ್ತೆಗಾಗಿ ಪೊಲೀಸರು ಮುಂದಾಗಿದ್ಧಾರೆ. ಪದ್ಮಾವತಿ ನಗರದಲ್ಲಿರುವ ಹಾಗೂ ಇಲ್ಲಿ ಸಂಪರ್ಕಿಸುವ ರಸ್ತೆಗಳ ಬಳಿಯ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ವೀಕ್ಷಣೆ ಮಾಡಲಾಗುತ್ತಿದೆ. ಅದರ ಆಧಾರದ ಮೇಲೆ ಹೆಣ್ಣು ಮಗುವನ್ನು ಬಿಟ್ಟು ಹೋದವರ ಪತ್ತೆ ಮಾಡಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಿದ ಬಳಿಕ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಸುಪರ್ಧಿಗೆ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Fri, 23 August 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us