ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರು 7 ದಿನ ಸಿಸಿಬಿ ವಶಕ್ಕೆ: ರಾಜ್ಯದೆಲ್ಲೆಡೆ ಹೈ ಅಲರ್ಟ್

| Updated By: ಗಂಗಾಧರ​ ಬ. ಸಾಬೋಜಿ

Updated on: Jul 19, 2023 | 4:40 PM

ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಹಿನ್ನೆಲೆ ರಾಜ್ಯದ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ಅಲರ್ಟ್​ ಆದ ಪೊಲೀಸ್ ಇಲಾಖೆ, ರೈಲು ನಿಲ್ದಾಣದಲ್ಲಿ ಬಾಂಬ್ ಪತ್ತೆ ದಳ, ಶ್ವಾನದಳದಿಂದ ತಪಾಸಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರು 7 ದಿನ ಸಿಸಿಬಿ ವಶಕ್ಕೆ: ರಾಜ್ಯದೆಲ್ಲೆಡೆ ಹೈ ಅಲರ್ಟ್
ಪ್ರಾತಿನಿಧಿಕ ಚಿತ್ರ, ವಿಜಯಪುರ ರೈಲು ನಿಲ್ದಾಣದಲ್ಲಿ ತಪಾಸಣೆ
Follow us on

ವಿಜಯಪುರ, ಜುಲೈ 19: ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ (Suspected terrorists) ಬಂಧನ ಹಿನ್ನೆಲೆ ರಾಜ್ಯದ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಅಲರ್ಟ್​ ಆದ ಪೊಲೀಸ್ ಇಲಾಖೆ, ರೈಲು ನಿಲ್ದಾಣದಲ್ಲಿ ಬಾಂಬ್ ಪತ್ತೆ ದಳ, ಶ್ವಾನದಳದಿಂದ ತಪಾಸಣೆ ಮಾಡಲಾಗಿದೆ. ಜೊತೆಗೆ ರೈಲ್ವೆ ಪ್ರಯಾಣಿಕರ ಬ್ಯಾಗ್‌ಗಳನ್ನು ಸಹ ಪರಿಶೀಲಿಸಿದ್ದಾರೆ. ಇದರ ಮಧ್ಯೆ ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದು, 7 ದಿನ ವಶಕ್ಕೆ ನೀಡಲಾಗಿದೆ.

ತನಿಖಾಧಿಕಾರಿ ಎಸಿಪಿ ಕುಮಾರ್​ ನೇತೃತ್ವದಲ್ಲಿ ಬೆಂಗಳೂರಿನ ಎನ್​ಐಎ ವಿಶೇಷ ಕೋರ್ಟ್​ಗೆ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಕೋರ್ಟ್​ ಆವರಣದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಟ್ವೀಟ್​ ಮೂಲಕ ಸಿಸಿಬಿ ಪೊಲೀಸರಿಗೆ ಅಭಿನಂದಿಸಿದ ಸಲ್ಲಿಸಿದ ಸಿಎಂ ಸಿದ್ಧರಾಮಯ್ಯ

ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮೂಲಕ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ  ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಸಂಭವಿಸಬಹುದಾಗಿದ್ದ, ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು.

ಇದನ್ನೂ ಓದಿ: Bengaluru ಐವರು ಶಂಕಿತ ಉಗ್ರರ ಬಂಧನ: ಪ್ರಕರಣವನ್ನು ಎನ್​ಐಎಗೆ ನೀಡುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ-ಡಾ.ಪರಮೇಶ್ವರ್​​

ವಿಧಾನಸಭೆಯಲ್ಲಿ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ. ಕೆಲವರು ಬೇಲ್ ಮೇಲೆ ಬಿಡುಗಡೆಯಾಗಿ ವಿಚಾರಣೆ ಎದುರಿಸ್ತಿದ್ದಾರೆ. ಕೆಲವರು ಕೊಲೆ, ದರೋಡೆ ಸೇರಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಯಾವ ಸಂಘಟನೆ ಜತೆ ಗುರುತಿಸಿಕೊಂಡಿದ್ದರು ಎಂಬ ಬಗ್ಗೆ ತನಿಖೆ ತಿಳಿಯಬೇಕಾಗಿದೆ ಎಂದರು.

ಇದನ್ನೂ ಓದಿ: ಯಡಿಯೂರಪ್ಪರನ್ನ ಭೇಟಿ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಿಟಿ ರವಿ, ಏನು ವಿಶೇಷ..?

ರಾಜ್ಯದ ಹಿತದ ಹಿನ್ನಲೆಯಲ್ಲಿ ಉದಾರತೆ ತೋರಿಸಿ: ಸಿ.ಟಿ.ರವಿ 

ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿದ್ದು, ಈ ಜಾಲವು ಬಹಳ ಆಳವಾಗಿದೆ ಅಂತಾ ಅಂದುಕೊಂಡಿದ್ದೇನೆ. ಇನ್ನೊಬ್ಬ ಉಗ್ರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ತನಿಖೆಯನ್ನು NIAಗೆ ವಹಿಸುವುದು ಸೂಕ್ತ ಎಂದು ಭಾವಿಸುತ್ತೇನೆ. ಬೆಂಗಳೂರಲ್ಲಿ ಹಲವು ಕಡೆ ಬಾಂಬ್ ಸ್ಫೋಟಕ್ಕೆ ಸಂಚು ಮಾಡಿದ್ದಾರೆ. ಕಾಂಗ್ರೆಸ್ಸಿಗರು ಮನಪರಿವರ್ತನೆ ಮಾಡಿಕೊಳ್ಳಿ ಎಂದು ವಿನಂತಿಸುವೆ. ದಯಮಾಡಿ ರಾಜ್ಯದ ಹಿತದ ಹಿನ್ನಲೆಯಲ್ಲಿ ಉದಾರತೆ ತೋರಿಸಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:00 pm, Wed, 19 July 23