ವಿಜಯಪುರ: ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರು ಅಸ್ವಸ್ಥ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿದೆ. ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮ ಪಂಚಾಯತಿಯ ನಿರ್ಲಕ್ಷ್ಯ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ವಿಜಯಪುರ, ಜುಲೈ 29: ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿ (Nidagundi) ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ನಡೆದಿದೆ. 20 ಹೆಚ್ಚು ಜನರನ್ನು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಜನರ ಸ್ಥಿತಿ ಗಂಭೀರವಾಗಿದ್ದು, ಇವರನ್ನು ವಿಜಯಪುರ ಹಾಗೂ ಬಾಗಲಕೋಟೆಯ ಖಾಸಗಿ ಮತ್ತು ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಪೈಪ್ ಒಡೆದು ಹೋಗಿದ್ದು, ಮಳೆ ಹಾಗೂ ಚರಂಡಿ ನೀರು ಮಿಶ್ರಣದ ನೀರು ಸರಬರಾಜು ಆಗಿದೆ ಎಂದು ತಿಳಿದುಬಂದಿದೆ.
ಶನಿವಾರ (ಜು.26) ರಾತ್ರಿ ಗ್ರಾಮದ ಕೆಲವರಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ರವಿವಾರ ಹಾಗೂ ಸೋಮವಾರ 25 ಕ್ಕೂ ಅಧಿಕ ಜನರಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಬಗ್ಗೆ ಅಗತ್ಯ ಮಾಹಿತಿ ಪಡೆದುಕೊಂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಿದರು.
ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಬಂದಾಗಿ ಹಲವು ವರ್ಷಗಳೇ ಕಳೆದು ಹೋಗಿವೆ. ಹೀಗಾಗಿ ಕಳೆದ ಕೆಲ ವರ್ಷಗಳಿಂದ ಬ್ಯಾಲಿಹಾಳ ಗ್ರಾಮದ ಹಳ್ಳದಲ್ಲಿರುವ ಬೋರ್ವೆಲ್ ನೀರನ್ನು ಕುಡಿಯಲು ಮನೆ ಮನೆಗೆ ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರು ಸಬರಾಜು ಮಾಡುವ ಪೈಪ್ಗಳು ಅಲ್ಲಲ್ಲಿ ಹೊಡೆದು ಹೋಗಿದ್ದು, ಅದಕ್ಕೆ ಚರಂಡಿ ನೀರು ಸೇರಿಕೊಂಡಿದೆ. ಕಲುಷಿತಗೊಂಡ ನೀರನ್ನು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ.
ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಮೂವರ ಸಾವು, 6 ಜನರ ಸ್ಥಿತಿ ಗಂಭೀರ
ಹಳ್ಳದ ಬೋರ್ವೆಲ್ ನೀರು ಬದಲಿಗೆ ಬೇರೆ ಬೋರ್ವೆಲ್ನಿಂದ ನೀರು ಪೂರೈಕೆ ಮಾಡುವಂತೆ ಗ್ರಾಮಸ್ಥರು ಈ ಮೊದಲೇ ಮನವಿ ಮಾಡಿದ್ದರು. ಅಲ್ಲದೆ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿ ಮಾಡುವಂತೆ ಮನವಿ ಮಾಡಿದ್ದರು. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳದ ಗ್ರಾಮ ಪಂಚಾಯತಿಯವರು, ಅಧಿಕಾರಿಗಳು ಚರಂಡಿ ನೀರು ಸೇರ್ಪಡೆಯಾದ ನೀರನ್ನೇ ಗ್ರಾಮಸ್ಥರಿಗೆ ಸರಬರಾಜು ಮಾಡಿದ್ದಾರೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಒಟ್ಟಿನಲ್ಲಿ ಗ್ರಾಮ ಪಂಚಾಯತಿಯ ಅಧಿಕಾರಿಗಳ ಸಿಬ್ಬಂದಿಗಳ ದಿವ್ಯ ನಿರ್ಲಕ್ಷ್ಯ ಅಲ್ಲಿನ ಜನರು ಸಾವು ಬದುಕಿನ ನಡುವೆ ಹೋರಾಡುವಂತೆ ಮಾಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:18 pm, Tue, 29 July 25







