ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ, ರೋಪ್ ವೇ ಬಗ್ಗೆ ಪರಿಶೀಲಿಸಲಾಗುವುದು: ಸಿಎಂ ಸಿದ್ದರಾಮಯ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 13, 2024 | 7:40 PM

ಇಂದು ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ದರ್ಶನ ಪಡೆದುಕೊಂಡಿದ್ದಾರೆ. ಬಳಿಕ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆ ಮಾಡಿದ್ದಾರೆ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ, ರೋಪ್ ವೇ ಬಗ್ಗೆ ಪರಿಶೀಲಿಸಲಾಗುವುದು: ಸಿಎಂ ಸಿದ್ದರಾಮಯ್ಯ
ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ, ರೋಪ್ ವೇ ಬಗ್ಗೆ ಪರಿಶೀಲಿಸಲಾಗುವುದು: ಸಿಎಂ ಸಿದ್ದರಾಮಯ್ಯ
Follow us on

ಬೆಳಗಾವಿ, ಅಕ್ಟೋಬರ್​ 13: ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಸಿದ್ಧವಿದೆ. ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಕ್ಷೇತ್ರದಲ್ಲಿ ರೋಪ್ ವೇ ಸವಲತ್ತು ಕಲ್ಪಿಸುವುದರಿಂದ ಅನುಕೂಲ ಆಗುತ್ತದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇಂದು ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ದರ್ಶನ ಪಡೆದುಕೊಂಡಿದ್ದಾರೆ. ಬಳಿಕ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆ ಮಾಡಿದ್ದಾರೆ.

ಇದನ್ನೂ ಓದಿ: ಮುಡಾ ಕಂಟಕ ಬೆನ್ನಲ್ಲೇ ಪತ್ನಿ ಹೆಸರಲ್ಲಿ ಸಿದ್ದರಾಮಯ್ಯ ವಿಶೇಷ ಪೂಜೆ: ತಾವೇ ಕುಂಕುಮ ಹಚ್ಚಿಸಿಕೊಂಡ ಸಿಎಂ

ಶ್ರೀ ರೇಣುಕಾ ಯಲ್ಲಮ್ಮ ದೇವಿ ಸನ್ನಿದಿಗೆ ಬರುವ ಭಕ್ತರೆಲ್ಲರಿಗೂ ತಾಯಿಯ ದರ್ಶನ ಕಡ್ಡಾಯವಾಗಿ ಸಿಗುವ ವ್ಯವಸ್ಥೆಯನ್ನು ಪ್ರಥಮ ಆಧ್ಯತೆಯಲ್ಲಿ ಒದಗಿಸಬೇಕು. ಭಕ್ತಾದಿಗಳ ಆರೋಗ್ಯಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಶೌಚಾಲಯ, ಕುಡಿಯುವ ನೀರು, ವಿದ್ಯುತ್, ಉಳಿಯಲು ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕಲ್ಪಿಸಬೇಕು. ತಿರುಪತಿ ಮಾದರಿಯಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ಸಮರ್ಪಕ ವ್ಯವಸ್ಥೆ ಕಲ್ಪಿಸಿ ದೇವಿಯ ದರ್ಶನದ ಖಾತ್ರಿ ಆದರೆ ಭಕ್ತರು ಮತ್ತು ಪ್ರವಾಸಿಗರ ಪ್ರಮಾಣ ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು. ಬಡವರು, ಶ್ರಮಿಕರು, ತಳ ಸಮುದಾಯದವರು, ಮಹಿಳೆಯರು ಮತ್ತು ದುಡಿಯುವ ವರ್ಗದವರೇ ಹೆಚ್ಚಾಗಿ ಬರುವ ಕ್ಷೇತ್ರ ಇದು. ಸೌಕರ್ಯ ಅಚ್ಚುಕಟ್ಟಾಗಿದ್ದರೆ ಕ್ಷೇತ್ರದ ಆದಾಯವೂ ಹೆಚ್ಚಾಗುತ್ತದೆ. ಈ ಆದಾಯದಿಂದ ಭಕ್ತರಿಗೆ ಇನ್ನೂ ಹೆಚ್ಚಿನ ಮೂಲಭೂತ ಸವಲತ್ತು ಒದಗಿಸಬಹುದು. ಒಟ್ಟಾರೆ ಕ್ಷೇತ್ರ ಆಕರ್ಷಣೀಯವಾಗಿರಬೇಕು ಎಂದು ಸೂಚನೆ ನೀಡಿದ್ದಾರೆ.

ಎತ್ತಿನಗಾಡಿಯಲ್ಲಿ ಅತಿ ಹೆಚ್ಚು ಪ್ರಮಾಣದ ಭಕ್ತರು ಆಗಮಿಸುವುದರಿಂದ ಕಾರು, ಬೈಕುಗಳ ಜೊತೆಗೆ ಎತ್ತಿನಗಾಡಿ ನಿಲ್ಲಿಸಲು ವ್ಯವಸ್ಥೆ ಕಲ್ಪಿಸಬೇಕು. ಎತ್ತು, ಹಸುಗಳಿಗೆ ಉತ್ತಮ ಮೇವು-ನೀರು-ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಪೂರಕವಾಗಿ ಕಾರ್ಯಯೋಜನೆ ರೂಪಿಸಬೇಕು. ಪ್ರತೀ ವರ್ಷ 1.5 ರಿಂದ 2 ಕೋಟಿ ಭಕ್ತರು ಬರುವುದರಿಂದ ಆರೋಗ್ಯಕರ ದಾಸೋಹ ವ್ಯವಸ್ಥೆ ಮತ್ತು ವೈಜ್ಞಾನಿಕ ಪದ್ಧತಿಯ ಕಸ ವಿಲೇವಾರಿ ವ್ಯವಸ್ಥೆಯನ್ನು ರೂಪಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧವೇ ಶಾಸಕ ರಾಜು ಕಾಗೆ ವಾಗ್ದಾಳಿ!

ಕ್ಷೇತ್ರಕ್ಕೆ ಸೇರಿದ ಜಾಗ, ಜಮೀನನ್ನು ಮೊದಲು ಗುರುತಿಸಿ, ಒತ್ತುವರಿ ಆಗಿದ್ದರೆ ಬಿಡಿಸಿಕೊಳ್ಳಬೇಕು. ಸ್ಥಳದ ಸುತ್ತ ಕಾಂಪೌಂಡ್, ಫೆನ್ಸಿಂಗ್ ಹಾಕಿ ಜಾಗದ ಭದ್ರತೆ ಮಾಡಿಕೊಳ್ಳಬೇಕು. ಭಕ್ತರು ಬರುವ ದೇವಸ್ಥಾನದ ಮಾರ್ಗ ಮತ್ತು ಸುತ್ತಲ ಪ್ರದೇಶಗಳಲ್ಲಿ ಹಾಗೂ ಭಕ್ತರು ಉಳಿಯುವ ಜಾಗದಲ್ಲಿ ಬೀದಿ ದೀಪ, ವಿದ್ಯುತ್ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದ್ದಾರೆ.

ಬಿಜೆಪಿ ವಿರುದ್ಧ ಕಿಡಿ

ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಎಂದು ಬಿಜೆಪಿಯವರು ಭಯಂಕರ ಮಾತನಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ? ದೇವರು-ಧರ್ಮದ ಹೆಸರಲ್ಲಿ ದೇಶವನ್ನು – ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.