Weather Today: ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ
Karnataka Weather Tomorrow: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ವಿವಿಧೆಡೆ ನಾಳೆ ಉತ್ತಮ ಮಳೆಯಾಗಲಿದೆ. ಉತ್ತರ ಕನ್ನಡ ಭಾಗದಲ್ಲಿ ಗಾಳಿ ಸಹಿತ ಮಳೆಯಾಗಲಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಮೀನುಗಾರರಿಗೆ ಸಮುದ್ರ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರಲ್ಲಿಯೂ ಸಣ್ಣ ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಅಕ್ಟೋಬರ್ 20: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ (Weather Forecast)ಸಾಧ್ಯತೆಯಿದೆ. ಹವಾಮಾನ ಇಲಾಖೆ ಸುಮಾರು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?
ಕರಾವಳಿ ಪ್ರದೇಶದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಾದ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
ಬೆಂಗಳೂರು ನಗರದಲ್ಲಿಯೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಶೇಕಡಾ 78ರಿಂದ 100ರಷ್ಟು ಮಳೆಯ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 13-15 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 27 ಡುಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




