AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ರೈತರಿಗೆ ಅನ್ಯಾಯ ಎಸಗಿದ ಬಿಜೆಪಿಯನ್ನ ಯಾಕೆ ಬೆಂಬಲಿಸಬೇಕು?: ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ, ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಎಂದಿದ್ದಾರೆ. ಅಲ್ಲದೆ, ರೈತರಿಗೆ ಸಾಲು ಸಾಲು ಅನ್ಯಾಯ ಎಸಗಿದ ಬಿಜೆಪಿಯನ್ನು ರೈತರು ಯಾಕೆ ಬೆಂಬಲಿಸಬೇಕು ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ರೈತರಿಗೆ ಅನ್ಯಾಯ ಎಸಗಿದ ಬಿಜೆಪಿಯನ್ನ ಯಾಕೆ ಬೆಂಬಲಿಸಬೇಕು?: ಸಿದ್ದರಾಮಯ್ಯ ಪ್ರಶ್ನೆ
ರಾಜ್ಯದ ರೈತರಿಗೆ ಅನ್ಯಾಯ ಎಸಗಿದ ಬಿಜೆಪಿಯನ್ನ ಯಾಕೆ ಬೆಂಬಲಿಸಬೇಕು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ
Follow us
Anil Kalkere
| Updated By: Rakesh Nayak Manchi

Updated on:Mar 18, 2024 | 2:39 PM

ಬೆಂಗಳೂರು, ಮಾ.18: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ (Siddaramaiah), ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಎಂದಿದ್ದಾರೆ. ಅಲ್ಲದೆ, ರೈತರಿಗೆ ಸಾಲು ಸಾಲು ಅನ್ಯಾಯ ಎಸಗಿದ ಬಿಜೆಪಿಯನ್ನು (BJP) ರೈತರು ಯಾಕೆ ಬೆಂಬಲಿಸಬೇಕು ಎಂದು ಪ್ರಶ್ನಿಸಿದ್ದಾರೆ.

ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಪ್ರಶ್ನಿಸಿದ್ದಾರೆ.

ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್‌ ಪ್ರಿಂಟ್‌ ಮಾಡುವ ಮೆಷಿನ್‌ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಕೇಳಿದ್ದಾರೆ.

2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬಿ. ಆರ್. ಶೆಟ್ಟಿ ಆಸ್ಪತ್ರೆ ಖಾಸಗೀಕರಣ? ಸಿದ್ದರಾಮಯ್ಯ ಸರಕಾರದ ವಿರುದ್ದ ಹಾಜಿ ಅಬ್ಧುಲ್ಲಾ ಚಾರಿಟೇಬಲ್ ಟ್ರಸ್ಟ್ ಕಿಡಿ

ರಾಜ್ಯದಲ್ಲಿ ಬರ ಘೋಷಣೆ ಮಾಡಿ ಆರು ತಿಂಗಳುಗಳ ಕಳೆದಿವೆ. 18,177 ಕೋಟಿ ರೂ. ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಳ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದರೂ ಈ ವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ ನಲ್ಲಿ ರೂ.5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ ಈ ವರೆಗೆ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ ಎಂದರು.

ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿವೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ನಾಡಿನ‌ ರೈತರನ್ನು ಕೈಬಿಟ್ಟಿತ್ತು. ರಾಜ್ಯದ ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು ಎಂದು ಪ್ರಶ್ನಿಸಿದರು.

ದೇಶದ ಕೃಷಿ ಕ್ಷೇತ್ರವನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳ ಕೈಗಿಡುವ ದುಷ್ಟ ಆಲೋಚನೆಯೊಂದಿಗೆನ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ 3 ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿತು. ಈ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಹೋರಾಟ ಮಾಡುತ್ತಿದ್ದ 750ಕ್ಕೂ ಹೆಚ್ಚು ರೈತರು ಅನಾರೋಗ್ಯ, ಹವಾಮಾನ ವೈಪರಿತ್ಯ, ಪೊಲೀಸ್‌ ದೌರ್ಜನ್ಯಗಳಿಗೆ ಬಲಿಯಾದರು. ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ ನರೇಂದ್ರ ಮೋದಿ ಅವರೇ?

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Mon, 18 March 24