
ಬೆಂಗಳೂರು:ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಭೆಯಲ್ಲಿ ಹಾನಿಗೊಳಗಾದ ವಸ್ತುಗಳ ನಷ್ಟವನ್ನು ಅಂದಾಜಿಸಲು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗೆ ಹೊಣೆಗಾರಿಕೆ ನೀಡಲು ಚಿಂತನೆ ನಡೆಸಲಾಗುತ್ತಿದೆ.
ಕ್ಲೈಂ ಕಮಿಷನರ್ ಆಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸಲು ಈ ಹಿಂದೆ ರಾಜ್ಯ ಸರ್ಕಾರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಹೀಗಾಗಿ ಹೈಕೋರ್ಟ್ನ ರಿಜಿಸ್ಟ್ರಾರ್ ನಿವೃತ್ತ ನ್ಯಾಯಮೂರ್ತಿಗಳ ಸಮ್ಮತಿ ಕೇಳಿದ್ದಾರೆ.
ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾ. ಕೆ.ಎನ್.ಫಣೀಂದ್ರ ಅಥವಾ ನ್ಯಾ. ಪಿ.ಜಿ.ಎಂ.ಪಾಟೀಲ್ ನೇಮಕ ಮಾಡುವ ಸಾಧ್ಯತೆಗಳಿವೆ. ಇದೇ ವೇಳೆ, ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 28 ಕ್ಕೆ ಮುಂದೂಡಿದೆ.