
ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರಿನ ಹೊರವಲಯದಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕಂದ್ರದಲ್ಲಿ ನಿರ್ಮಿಸುತ್ತಿರುವ ಕೋವಿಡ್ ಕೇರ್ ಸೆಂಟರ್ ಈಗ ರಾಜ್ಯಕ್ಕೆ ಹೆಮ್ಮೆಯಾಗುವ ಬದಲು ಭ್ರಷ್ಟಾಚಾರದ ಕೇಂದ್ರವಾಗುತ್ತಿದೆಯಾ ಅನ್ನೋ ಅನುಮಾನ ಮೂಡಿದೆ. ಯಾಕಂದ್ರೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಅವರ ಸಂಬಂಧಿಗೆ ಕಾಂಟ್ರಾಕ್ಟ್ ನೀಡಿದ್ದು ಭಾರೀ ಅವ್ಯವಹಾರ ನಡೆದಿದೆಯೆಂದು ಕಾಂಗ್ರೆಸ್ ಆರೋಪಿಸಿದೆ.
ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್, ರಾಜ್ಯ ಸರ್ಕಾರ ಕೊವಿಡ್ ಕೇರ್ ಸೆಂಟರ್ ಉಪಕರಣ ಖರೀದಿ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆಸಿದೆ. ಕೋವಿಡ್ ಕೇರ್ ಗೆ ಬೇಕಾದ ಹಾಸಿಗೆ, ದಿಂಬು, ಹೊದಿಕೆಗಳನ್ನು 100 ದಿನಗಳಿಗೆ ಬಾಡಿಗೆ ಪಡೆಯುವುದರ ಮೂಲಕ 240 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಒಟ್ಟಾರೆ ನಾಲ್ಕು ಜನ ಗುತ್ತಿಗೆದಾರರಿಗೆ ಈ ಸಂಬಂಧ ಗುತ್ತಿಗೆ ನೀಡಲಾಗಿದೆ. ಇವರೆಲ್ಲಾ ಬೆಂಗಳೂರಿನ ಮಂತ್ರಿಗಳ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಕೋವಿಡ್ ಹೆಸರನ್ನು ಹೇಳಿಕೊಂಡು ಬಿಜೆಪಿ ಮುಖಂಡರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಆರೋಪ ಮಾಡುತ್ತಿದ್ದರೂ ಬಿಜೆಪಿಯಿಂದ ಹಣದ ಲೂಟಿ ಮಾತ್ರ ನಿಂತಿಲ್ಲ ಎಂದು ಲಕ್ಷ್ಮಣ್ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಇಷ್ಟೇ ಅಲ್ಲ ಕೋವಿಡ್ ನಿಯಂತ್ರಣ ವಿಚಾರದಲ್ಲಿ ವಿವಿಧ ಇಲಾಖೆಗಳ ಮಂತ್ರಿಗಳ ನಡುವೆ ಹೊಂದಾಣಿಕೆ ಇಲ್ಲದಂತಾಗಿದೆ. ಕೊರೊನಾ ಸೋಂಕಿತರನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ, ಬಿಜೆಪಿ ಮುಖಂಡರು ಕೇವಲ ಹೇಳಿಕೆಗೆ ಮತ್ತು ಪ್ರಚಾರಕ್ಕೆ ಮಾತ್ರ ಸೀಮಿತರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಕಿಡಿಕಾರಿದ್ದಾರೆ.
Published On - 1:29 pm, Thu, 16 July 20