SSLC Examination 2021: ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಈಗಿನಿಂದಲೇ ಸಜ್ಜುಗೊಳಿಸಲು ಜಿಲ್ಲಾ ಪಂಚಾಯತಿ ಸಿಇಓ ಸೂಚನೆ
SSLC Examination 2021: ತಾಲೂಕಿಗೆ ಒಂದೊಂದು ವಿಷಯವನ್ನು ಹಂಚಿಕೆ ಮಾಡಿ ಸಂಪನ್ಮೂಲ ಶಿಕ್ಷಕರ ಸಹಾಯದೊಂದಿಗೆ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಫೆಬ್ರವರಿ 1 ರಿಂದ ಮೇ 15 ರೊಳಗೆ ಎಲ್ಲಾ ವಿಷಯಗಳ ಪಠ್ಯಕ್ರಮ ಬೋಧನೆಯನ್ನು ಪೂರ್ಣಗೊಳಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಸಿಇಓ ಲಕ್ಷ್ಮೀಕಾಂತ ರೆಡ್ಡಿ ಎಂದು ತಿಳಿಸಿದರು.

ವಿಜಯಪುರ: ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪೂರ್ವನಿರ್ಧಾರಿತ ಕ್ರಮಗಳನ್ನು ತೆಗೆದುಕೊಳ್ಳುಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸೂಚನೆ ನೀಡಿದ್ದು, ಆ ಮೂಲಕ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲಗಳು ಇರದಂತೆ ನೋಡಿಕೊಳ್ಳಲು ತಿಳಿಸಿದ್ದಾರೆ.
ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಸಭಾಂಗಣದಲ್ಲಿ ನಿನ್ನೆ ಶಿಕ್ಷಣ ಇಲಾಖೆ ಅಧಿಕಾರಿಗಳು ಬಿಆರ್ಸಿ ಮತ್ತು ಸಿ ಆರ್ಪಿಗಳೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಓ ಅವರು ಬಿಆರ್ಸಿ ಮತ್ತು ಸಿಆರ್ಪಿಗಳ ಸಹಕಾರದೊಂದಿಗೆ ಜಿಲ್ಲೆಯ ಎಲ್ಲಾ ನಗರ ಮತ್ತು ಪಟ್ಟಣಗಳ ಮತ್ತು ತಾಲೂಕುಗಳ ಶಾಲಾ ಮಕ್ಕಳು ಶಾಲೆಗೆ ಹಾಜರಾಗುವಂತೆ ಕ್ರಮಗಳನ್ನು ಕೈಗೊಳ್ಳಬೇಕು. ಎಸ್ಎಸ್ಎಲ್ಸಿ ಪರೀಕ್ಷೆಯ ಪೂರ್ವಭಾವಿ ಸಿದ್ಧತೆಯ ಅಂಗವಾಗಿ ಎಲ್ಲಾ ವಿದ್ಯಾರ್ಥಿಗಳು ಶಾಲೆಗಳಿಗೆ ಫೆಬ್ರವರಿ 12 ರೊಳಗಾಗಿ ಹಾಜರಾಗುವಂತೆ ನೋಡಿಕೊಳ್ಳಲು ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸೂಚನೆ ನೀಡಿದರು.
ವಿದ್ಯಾರ್ಥಿಗಳಲ್ಲಿ ಬರಹದ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈಗಾಗಲೇ ಹಂಚಿಕೆ ಮಾಡಿದ ತಾಲೂಕುಗಳ ಸಂಪನ್ಮೂಲ ವ್ಯಕ್ತಿಗಳ ಸಹಕಾರದೊಂದಿಗೆ ಏಪ್ರಿಲ್ 1 ರಿಂದ ಮೇ 15 ರೊಳಗೆ ವಾರಕ್ಕೊಮ್ಮೆ 6 ವಾರಗಳ ಪ್ರಶ್ನೆ ಪತ್ರಿಕೆ ಸಹಿತ, ಉತ್ತರ ಪತ್ರಿಕೆಗಳನ್ನು ವಿಷಯವಾರು ತಯಾರಿಸಿ ಮಕ್ಕಳಿಂದ ಪ್ರತಿವಾರಕ್ಕೊಮ್ಮೆ ಪರೀಕ್ಷೆ ನಡೆಸಿ, ಅವರಲ್ಲಿ ಆತ್ಮವಿಶ್ವಾಸ ತುಂಬುವ ಪ್ರಯತ್ನವನ್ನು ಮಾಡುವಂತೆ ಜಿಲ್ಲಾ ಪಂಚಾಯತಿ ಸಿಇಓ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ
ಇಂತಹ ಪ್ರಯೋಗವನ್ನು ಈಗಾಗಲೇ ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಯಚೂರು ಜಿಲ್ಲೆಯ ಶಾಲೆಗಳಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಳಿಸಿ ಶೇಕಡಾ 8 ರಷ್ಟು ಜಿಲ್ಲೆಯಲ್ಲಿನ ಫಲಿತಾಂಶ ಹೆಚ್ಚಿಸಿರುವುದು ನಮ್ಮ ಮುಂದೆ ಉದಾಹರಣೆ ಇದೆ. ಈ ನಿಟ್ಟಿನಲ್ಲಿ ನಮ್ಮ ಜಿಲ್ಲೆಯಲ್ಲಿಯೂ ಕೂಡ ಶೇಕಡಾ 100 ರಷ್ಟು ಫಲಿತಾಂಶ ತರಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪನ್ಯಾಸಕ ಎಂ.ಎ.ಗುಳೇದಗುಡ್ಡ, ಜಿಲ್ಲೆಯ ಕಳೆದ ಶೈಕ್ಷಣಿಕ ವರ್ಷದ ಫಲಿತಾಂಶ ವಿಶ್ಲೇಷಿಸಿ ಈ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಎದುರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಬೇಕು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕರ ಕಾರ್ಯಾಲಯ ವಿಜಯಪುರ ಸಹಯೋಗದೊಂದಿಗೆ 100 ದಿನಗಳ ಪಠ್ಯಕ್ರಮ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ ಎಂದು ಸಿಇಓ ಲಕ್ಷ್ಮೀಕಾಂತ ರೆಡ್ಡಿ ಹೇಳಿದರು.

ಸಭೆಯ ಚಿತ್ರಣ
ತಾಲೂಕಿಗೆ ಒಂದೊಂದು ವಿಷಯವನ್ನು ಹಂಚಿಕೆ ಮಾಡಿ ಸಂಪನ್ಮೂಲ ಶಿಕ್ಷಕರ ಸಹಾಯದೊಂದಿಗೆ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಫೆಬ್ರವರಿ 1 ರಿಂದ ಮೇ 15 ರೊಳಗೆ ಎಲ್ಲಾ ವಿಷಯಗಳ ಪಠ್ಯಕ್ರಮ ಬೋಧನೆಯನ್ನು ಪೂರ್ಣಗೊಳಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಸರ್ಕಾರ ನಿಗದಿಪಡಿಸಿದ ರೂಪಣಾತ್ಮಕ ಮೌಲ್ಯಮಾಪನ ಪರೀಕ್ಷೆಗಳನ್ನು ಜಿಲ್ಲಾ ಹಂತದಲ್ಲಿ ಕೈಗೊಳ್ಳಲು ನಿರ್ದೇಶಿಸಲಾಗಿದೆ ಸಿಇಓ ಲಕ್ಷ್ಮೀಕಾಂತ ರೆಡ್ಡಿ ಎಂದು ತಿಳಿಸಿದರು.
ಸಭೆಯಲ್ಲಿ ಶಿಕ್ಷಣ ಅಧಿಕಾರಿಗಳಿಗೆ ಪಠ್ಯಕ್ರಮ ಕ್ರಿಯಾಯೋಜನೆ ಕನ್ನಡ, ಇಂಗ್ಲಿಷ್ ಹಾಗೂ ಉರ್ದು ಮಾಧ್ಯಮದ ತಲಾ ಒಂದೊಂದು ಪ್ರತಿಗಳನ್ನು ಜಿಲ್ಲಾಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಸ್ತಾಂತರಿಸಿದರು. ಶಿಕ್ಷಣಾಧಿಕಾರಿ ಎಸ್.ಎ ಮುಜಾವರ್, ಆರ್.ಎಲ್ ಯಲ್ಲಡಗಿ, ಆರ್.ವೈ ಕೊಣ್ಣೂರ, ಜಿಲ್ಲಾ ಮಟ್ಟದ ಶಿಕ್ಷಣಾಧಿಕಾರಿಗಳು ಹಾಗೂ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮನ್ವಯಾಧಿಕಾರಿಗಳು, ಶಿಕ್ಷಣ ಸಂಯೋಜಕರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
SSLC 2021 Examination Timetable ಜೂನ್ 14ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ; ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ