ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ ಸಿಗಲಿದೆ. ಈ ನಿಟ್ಟಿನಲ್ಲಿ ಅರಮನೆ ನಗರಿ ಮದವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇಂದು ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾಗಲಿದೆ. ಅರಮನೆ ಒಳಾಂಗಣ ಪಾರಂಪರಿಕ ದಸರಾ ಕಾರ್ಯಕ್ರಮಗಳ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.
ಬೆಳಗ್ಗೆ 6.15 ರಿಂದ 6.30ರ ಶುಭ ಮಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆಯಾಗಿದೆ. 7.45ರಿಂದ 8.15ರ ಶುಭ ಮುಹೂರ್ತದಲ್ಲಿ ಯದುವಂಶದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ಗೆ ಕಂಕಣಧಾರಣೆ ಮಾಡಲಾಗುತ್ತೆ. ಬೆಳಗ್ಗೆ 10 ಗಂಟೆಗೆ ಕಳಸ ಪೂಜೆ ಸೇರಿ ಇತರ ಧಾರ್ಮಿಕ ಆಚರಣೆಗಳು ಶುರುವಾಗುತ್ತವೆ. ನಂತರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಐವರು ಕೊರೊನಾ ವಾರಿಯರ್ಸ್ಗೆ ಸನ್ಮಾನ:
ಇನ್ನು ಚಾಮುಂಡಿಬೆಟ್ಟದಲ್ಲಿ ಇಂದು ನಾಡಹಬ್ಬ ದಸರಾ ಉದ್ಘಾಟನೆ ನಡೆಯಲಿದ್ದು, ಇದೇ ವೇಳೆ ಐವರು ಕೊರೊನಾ ವಾರಿಯರ್ಸ್ಗೆ ಸನ್ಮಾನ ಮಾಡಲಾಗುತ್ತೆ. ಆರೋಗ್ಯ ಇಲಾಖೆಯ ಮೆಡಿಕಲ್ ಆಫೀಸರ್ ಡಾ.ನವೀನ್, ಮೈಸೂರು ನಗರದ ಪೊಲೀಸ್ ಕಾನ್ಸ್ಟೇಬಲ್ ಕುಮಾರ್, ಪೌರ ಕಾರ್ಮಿಕರಾದ ಮರಗಮ್ಮ, ಸ್ಟಾಫ್ ನರ್ಸ್ ರುಕ್ಮಿಣಿ,ಸಾಮಾಜಿಕ ಕಾರ್ಯಕರ್ತ ಅಯೂಬ್ ಅಹ್ಮದ್, ಆಶಾಕಾರ್ಯಕರ್ತೆ ನೂರ್ ಜಾನ್ಗೆ ಇಂದು ಸನ್ಮಾನ ಮಾಡಿ ಗೌರವಿಸಲಾಗುತ್ತೆ. ಕೊರೊನಾ ಹಿನ್ನೆಲೆ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 200 ಜನರಿಗೆ ಅವಕಾಶ ನೀಡಲಾಗಿದೆ.
Published On - 7:29 am, Sat, 17 October 20