
ಶಿಕ್ಷಣಕ್ಕಿರುವ (Education) ಶಕ್ತಿಯೇ ಅಂತಹದ್ದು, ಇದು ಜ್ಞಾನ ಕೌಶಲ್ಯ, ವ್ಯಕ್ತಿತ್ವವನ್ನು ಅಭಿವೃದ್ದಿಪಡಿಸುವುದು ಮಾತ್ರವಲ್ಲದೆ ಒಬ್ಬ ವ್ಯಕ್ತಿಯ ಜೀವನವನ್ನು ಸಕಾರಾತ್ಮಕ ರೀತಿಯಲ್ಲಿ ಬದಲಾಯಿಸುವ ಶಕ್ತಿಶಾಲಿ ಅಸ್ತ್ರವಾಗಿದೆ. ಅಲ್ಲದೆ ಬಡತನವನ್ನು ಹೋಗಲಾಡಿಸುವಲ್ಲಿ, ಸುಸ್ಥಿರ ಸಮಾಜವನ್ನು ರೂಪಿಸುವಲ್ಲಿ, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣವು ಬಹುದೊಡ್ಡ ಪಾತ್ರವನ್ನು ವಹಿಸುತ್ತದೆ. ಶಿಕ್ಷಣದ ಈ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅತ್ಯದ್ಭುತ ಕೊಡುಗೆಗಳನ್ನು ನೀಡಿದ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ಜಯಂತಿಯ ಸವಿನೆಪಿಗಾಗಿ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯಿರಿ.
ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ಜಯಂತಿಯ ಸ್ಮರಣಾರ್ಥ ಪ್ರತಿ ವರ್ಷ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ. ಮೌಲಾನಾ ಅಬುಲ್ ಕಲಾಂ ಆಜಾದ್ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿಯಾಗಿ, ಭಾರತೀಯ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ, ಇವರ ಈ ಅತ್ಯಮೂಲ್ಯ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 2008 ರಲ್ಲಿ ಆಜಾದ್ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವಾಗಿ ಆಚರಿಸಲು ಘೋಷಿಸಿತು. ಅಂದಿನಿಂದ ಪ್ರತಿವರ್ಷ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.
ಇದನ್ನೂ ಓದಿ: ಸಾರ್ವಜನಿಕ ಸಾರಿಗೆಯನ್ನು ಬಳಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಿ
ಭಾರತವು ಇಂದು ದೃಢವಾದ ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದೆ, ಆ ವ್ಯವಸ್ಥೆಗೆ ಅಡಿಪಾಯವನ್ನು ಹಾಕಿದ ಕೀರ್ತಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಸಲ್ಲುತ್ತದೆ. ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾದ ಮೌಲಾನಾ ಆಜಾದ್, ತಮ್ಮ ಅಧಿಕಾರಾವಧಿಯಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ತಂದರು. ಸಮಾಜವನ್ನು ಪರಿವರ್ತಿಸಲು ಮತ್ತು ಜನಸಾಮಾನ್ಯರನ್ನು ಸಬಲಗೊಳಿಸು ಪ್ರಬಲವಾದ ಅಸ್ತ್ರ ಶಿಕ್ಷಣ ಎಂದು ದೃಢವಾಗಿ ನಂಬಿದ್ದ ಆಜಾದ್, ಭಾರತದ ಮೊದಲ ಶಿಕ್ಷಣ ಸಚಿವರಾಗಿ ದೇಶದ ಆಧುನಿಕ ಶಿಕ್ಷಣ ವ್ಯವಸ್ಥೆಗೆ ಅಡಿಪಾಯ ಹಾಕಿದರು.
ಮೌಲಾನ ಅಬುಲ್ ಕಲಾಂ ಆಜಾದ್ ಅವರು ಶಿಕ್ಷಣವನ್ನು ಭಾರತದ ಅಭಿವೃದ್ಧಿಯ ಆಧಾರವೆಂದು ಪರಿಗಣಿಸಿದ್ದರು ಮತ್ತು ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯ ಮತ್ತು ಉಚಿತ ಮಾಡಲು ಪ್ರಸ್ತಾಪಿಸಿದರು. ಭಾರತದಲ್ಲಿ ಗ್ರಾಮೀಣ ಬಡವರು ಮತ್ತು ಹುಡುಗಿಯರಿಗೆ ಶಿಕ್ಷಣವನ್ನು ಒದಗಿಸುವತ್ತ ಗಮನಹರಿಸಿದರು. ಇದಲ್ಲದೆ ಅವರು ಇಂಡಿಯನ್ ಕೌನ್ಸಿಲ್ ಆಫ್ ಸೋಷಿಯಲ್ ಸೈನ್ಸ್ ರಿಸರ್ಚ್ (ICSSR), ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸ್ಥಾಪನೆ ಮಾಡಿದರು. ಇವರು ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಕೌನ್ಸಿಲ್ ಆಫ್ ಸೈಂಟಿಫಿಕ್ ಆಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR), ಇಂಡಿಯನ್ ಕೌನ್ಸಿಲ್ ಆಫ್ ಕಲ್ಚರಲ್ ರಿಲೇಶನ್ಸ್ (ICCR), ಸ್ಕೂಲ್ ಆಫ್ ಪ್ಲಾನಿಂಗ್ ಆಂಡ್ ಆರ್ಕಿಟೆಕ್ಚರ್ ಮತ್ತು ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ಸ್(UGC) ಅನ್ನು ಸ್ಥಾಪಿಸಲಾಯಿತು. ಹೀಗೆ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ, ಆಧುನೀಕರಿಸುವಲ್ಲಿ ಆಜಾದ್ ಅವರ ಕೊಡುಗೆ ಅಪಾರ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ