
ಅಪಘಾತಗಳು ಯಾವಾಗ ಬೇಕಾದರೂ ಮತ್ತು ಎಲ್ಲಿ ಬೇಕಾದರೂ ಸಂಭವಿಸಬಹುದು, ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಅಥವಾ ಸಂಭವನೀಯ ಅಪಘಾತಗಳ ಬಗ್ಗೆ ತಿಳಿದಿರುವುದರಿಂದ ಅವುಗಳನ್ನು ತಪ್ಪಿಸಬಹುದು. ಬೆಂಕಿ ಅವಘಡಗಳು, ಕೈಗಾರಿಕಾ ಅಪಘಾತಗಳು, ರಸ್ತೆ ಅಪಘಾತಗಳು ಸೇರಿದಂತೆ ವಿವಿಧ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅಪಘಾತಗಳನ್ನು ತಪ್ಪಿಸಲು ಜನರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತೆ ಸುರಕ್ಷತೆಯ (Safety) ಬಗ್ಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್ 4 ರಂದು ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.
ಸುರಕ್ಷತಾ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದು ಹಾಗೂ ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಕುರಿತು ಅರಿವು ಮೂಡಿಸುವ ಸಲುವಾಗಿ ಭಾರತ ಸರ್ಕಾರದ ಕಾರ್ಮಿಕ ಸಚಿವಾಲಯವು ರಾಷ್ಟ್ರೀಯ ಸುರಕ್ಷತಾ ಮಂಡಳಿಯನ್ನು ಸ್ಥಾಪಿಸಿತು. ರಸ್ತೆ ಸುರಕ್ಷತೆ, ಕೆಲಸದ ಸ್ಥಳದಲ್ಲಿನ ಸುರಕ್ಷತೆ, ಮಾನವ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಈ ಮಂಡಳಿಯ ಗುರಿಯಾಗಿದೆ. ಈ ರಾಷ್ಟ್ರೀಯ ಸುರಕ್ಷತಾ ಮಂಡಳಿ ಪ್ರಾರಂಭವಾದ ಸವಿನೆನಪಿಗಾಗಿ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. ಮೊದಲ ರಾಷ್ಟ್ರೀಯ ಸುರಕ್ಷತಾ ದಿನವನ್ನು 1972 ರಲ್ಲಿ ಆಚರಿಸಲಾಯಿತು. ಕೈಗಾರಿಕಾ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಅಲ್ಲದೆ ಪ್ರತಿವರ್ಷವು ಮಾರ್ಚ್ 6ರಿಂದ 10ರ ವರೆಗೆ ರಾಷ್ಟ್ರದಾದ್ಯಂತ ರಾಷ್ಟ್ರೀಯ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಗುತ್ತದೆ.
ಸುರಕ್ಷತೆಯ ಮಹತ್ವವನ್ನು ಉತ್ತೇಜಿಸಲು ಮತ್ತು ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಜನರು ಕೆಲಸದ ಸ್ಥಳಗಳಲ್ಲಿ, ತಮ್ಮ ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸಲು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಈ ದಿನ ಸುರಕ್ಷತಾ ರ್ಯಾಲಿಗಳು, ಸುರಕ್ಷತಾ ತರಬೇತಿ, ಜಾಗೃತಿ ಅಭಿಯಾನಗಳು ಮತ್ತು ಕೆಲಸದ ಸ್ಥಳದಲ್ಲಿ ಸುರಕ್ಷತಾ ಪ್ರಮಾಣಪತ್ರಗಳ ವಿತರಣೆಯಂತಹ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಇದನ್ನೂ ಓದಿ: ನಮ್ಮಂತೆಯೇ ವನ್ಯಜೀವಿಗಳಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ