D. R. Bendre : ‘ಕಂಡವರಿಗಲ್ಲೊ ಕಂಡವರಿಗಷ್ಟೆ ತಿಳಿತsದ ಇದರ ನೆಲೆಯು’! ನಾಕುತಂತಿಯ ಒಳಹೂರಣ ಸುನಾಥರಿಂದ

|

Updated on: Feb 01, 2022 | 7:22 PM

Naaku Tanti : ‘ನಾಕು ತಂತಿ’ ಕವನದಲ್ಲಿ ನಾಲ್ಕು ಭಾಗಗಳಿವೆ. ಇವು ಒಂದೇ ಭಾಗದ ನಾಲ್ಕು ಮಗ್ಗಲುಗಳು. ಮೊದಲನೆಯ ಭಾಗದಲ್ಲಿ ಧ್ವನಿ ಪ್ರಬಲವಾಗಿದ್ದರೆ, ಎರಡನೆಯ ಭಾಗದಲ್ಲಿ ಪ್ರತಿಮೆಗಳ ಸಾಲಿವೆ. ಮೂರನೆಯ ಭಾಗದಲ್ಲಿ ಒಂದು ‘ಸವಾಲ್-ಜವಾಬ್’ ಇದೆ. ನಾಲ್ಕನೆಯ ಭಾಗ ಮೊದಲನೆಯದರ ಧ್ವನಿಯನ್ನು ಒಡದೇ ಹೇಳುತ್ತದೆ.’ ಸುನಾಥ

D. R. Bendre : ‘ಕಂಡವರಿಗಲ್ಲೊ ಕಂಡವರಿಗಷ್ಟೆ ತಿಳಿತsದ ಇದರ ನೆಲೆಯು’! ನಾಕುತಂತಿಯ ಒಳಹೂರಣ ಸುನಾಥರಿಂದ
ಲೇಖಕ ಸುನಾಥ (ಸುಧೀಂದ್ರ ದೇಶಪಾಂಡೆ)
Follow us on

ದ. ರಾ. ಬೇಂದ್ರೆ | D. R. Bendre | ನಾಕು ತಂತಿ | Naaku Tanti : ‘ಅರಳು ಮರಳು’ ಕಾವ್ಯಸಂಗ್ರಹ ಪ್ರಕಟವಾದಾಗ ಬೇಂದ್ರೆಯವರಿಗೆ 60 ವರ್ಷ. ಅದಕ್ಕೂ ಮೊದಲಿನ ಅವರ ಕಾವ್ಯದಲ್ಲಿ ಅತ್ಯುಚ್ಚ ಮಟ್ಟದ ಕಲಾಕೌಶಲವನ್ನು ಹಾಗೂ ಕುಸುರಿ ಕೆಲಸವನ್ನು ಕಾಣಬಹುದು. ‘ಅರಳು ಮರಳು’ ಕಾವ್ಯದಲ್ಲಿ ಕುಸುರಿ ಕೆಲಸದ ಸ್ಥಾನವನ್ನು ‘ಬಯಲ ಭವ್ಯತೆ’ ಆಕ್ರಮಿಸಿಕೊಂಡಿದೆ. ಬೇಲೂರು ಶಿಲಾಬಾಲಿಕೆಯ ಮೋಹಕ ಚೆಲುವಿನ ಬದಲಾಗಿ ಶ್ರವಣಬೆಳಗೊಳದ ಗೊಮ್ಮಟೇಶ್ವರನ ಭವ್ಯತೆ ಅವರ ಕಾವ್ಯದಲ್ಲಿ ವ್ಯಕ್ತವಾಗುತ್ತದೆ. ‘ಅರಳು ಮರಳು’ ನಂತರ ರಚಿಸಿದ ಕಾವ್ಯವಂತೂ ಪೂರ್ಣವಾಗಿ ಬೇರೊಂದು ರೂಪವನ್ನೇ ಪಡೆದಿದೆ. ಲೌಕಿಕ ಮಾರ್ಗಕ್ಕೆ ವಿಮುಖನಾಗಿ, ಅಲೌಕಿಕ ಮಾರ್ಗದಲ್ಲಿ ಕ್ರಮಿಸುತ್ತಿರುವ ಸಂತಕವಿಯ ಕಾವ್ಯವನ್ನು ಇಲ್ಲಿ ಕಾಣಬಹುದು. ಹೀಗಾಗಿ ಈ ಕಾವ್ಯವು ‘ನಿಗೂಢ ಕಾವ್ಯ’ವಾಗಿದೆ. ಮೈಯಲ್ಲಿ ದೇವರು ಬಂದ ಪೂಜಾರಿಗಳು ಒಡನುಡಿಯುವ ಕಾರ್ಣೀಕವನ್ನು ಈ ನಿಗೂಢ ಕಾವ್ಯಕ್ಕೆ ಹೋಲಿಸಬಹುದು. ಬೇಂದ್ರೆಯವರ ‘ನಾಕು ತಂತಿ’ ಕವನವು ಇಂತಹ ಒಡಪಿನ ರೂಪದ ‘ಕಾರ್ಣಿಕ’ದಲ್ಲಿದೆ. ಬೇಂದ್ರೆಮಾಸ್ತರ ಬರೆದ ಅಡಿಟಿಪ್ಪಣಿಯ ಮೂಲಕ ‘ಅಂಬಿಕಾತನಯದತ್ತ’ನ ಒಡನುಡಿಯ ಒಗಟನ್ನು ಬಿಡಿಸಲು ಪ್ರಯತ್ನಪಡಬೇಕು. ಆದರೂ ನಮಗೆ ಕಾಣುವದು ನಮ್ಮ ಕಣ್ಣಿನ ಪರಿಮಿತಿಗೊಳಪಟ್ಟು. ಇದರ ನೆಲೆಯು! 

ಸುನಾಥ (ಸುಧೀಂದ್ರ ದೇಶಪಾಂಡೆ), ಲೇಖಕರು, ಧಾರವಾಡ

*

‘ಬೆಂದರೇ ಅದು ಬೇಂದ್ರೆ’ ಎನ್ನುವ ಮಾತೊಂದಿದೆ. ಇಲ್ಲಿ ‘ಬೇಯು’ವದಕ್ಕೂ ಎರಡು ಅರ್ಥಗಳಿವೆ. ಬೆಂಕಿಯಲ್ಲಿ ತಪಿಸುವದು ಎನ್ನುವುದು ಒಂದು ಅರ್ಥವಾದರೆ, ಪಕ್ವವಾಗುವುದು ಎನ್ನುವುದು ಎರಡನೆಯ ಅರ್ಥ. ಬೇಂದ್ರೆಯವರು ಬದುಕಿನ ಕಾವಲಿಯಲ್ಲಿ ಬೆಂದಿದ್ದಂತೂ ಸರಿಯೇ. ಜೊತೆಗೇ ಅವರ ಅಂತರಂಗವೂ ಸಹ ಪಕ್ವವಾಗುತ್ತಿತ್ತು. ಇದು ಅವರ ಕಾವ್ಯದಲ್ಲಿಯೂ ಸಹ ವ್ಯಕ್ತವಾಗಿದೆ. ತರುಣ ಬೇಂದ್ರೆ ಬರೆದ ಕಾವ್ಯಕ್ಕೂ ‘ಪಕ್ವ’ ಬೇಂದ್ರೆ ಬರೆದ ಕಾವ್ಯಕ್ಕೂ ಇರುವ ವ್ಯತ್ಯಾಸವು ಈ ತಾಪ ಹಾಗು ತಪಸ್ಸಿನ ಫಲವಾಗಿದೆ.

‘ನಾಕು ತಂತಿ’ ಕವನದಲ್ಲಿ ನಾಲ್ಕು ಭಾಗಗಳಿವೆ. ಇವು ಒಂದೇ ಭಾಗದ ನಾಲ್ಕು ಮಗ್ಗಲುಗಳು. ಮೊದಲನೆಯ ಭಾಗದಲ್ಲಿ ಧ್ವನಿ ಪ್ರಬಲವಾಗಿದ್ದರೆ, ಎರಡನೆಯ ಭಾಗದಲ್ಲಿ ಪ್ರತಿಮೆಗಳ ಸಾಲಿವೆ. ಮೂರನೆಯ ಭಾಗದಲ್ಲಿ ಒಂದು ‘ಸವಾಲ್-ಜವಾಬ್’ ಇದೆ. ನಾಲ್ಕನೆಯ ಭಾಗ ಮೊದಲನೆಯದರ ಧ್ವನಿಯನ್ನು ಒಡದೇ ಹೇಳುತ್ತದೆ.

(ಭಾಗ-1)

ಆವು ಈವಿನ
ನಾವು ನೀವಿಗೆ
ಆನು ತಾನದ
ತನನನಾs

ನಾನು ನೀನಿನ
ಈ ನಿನಾನಿಗೆ
ಬೇನೆ ಏನೋ?
ಜಾಣಿ ನಾs

ಚಾರು ತಂತ್ರಿಯ
ಚರಣ ಚರಣದ
ಘನಘನಿತ ಚತು-
-ರಸ್ವನಾ

ಹತವೊ ಹಿತವೊ
ಆ ಅನಾಹತಾ
ಮಿತಿಮಿತಿಗೆ ಇತಿ
ನನನನಾ

 

ಬೆನ್ನಿನಾನಿಕೆ
ಜನನ ಜಾನಿಕೆ
ಮನನವೇ ಸಹಿ-
ತಸ್ತನಾ

(ಭಾಗ-2)

ಗೋವಿನ ಕೊಡುಗೆಯ
ಹಡಗದ ಹುಡುಗಿ
ಬೆಡಗಿಲೆ ಬಂದಳು
ನಡು ನಡುಗಿ;

ಸಲಿಗೆಯ ಸುಲಿಗೆಯ
ಬಯಕೆಯ ಒಲುಮೆ
ಬಯಲಿನ ನೆಯ್ಗೆಯ
ಸಿರಿಯುಡುಗಿ;

ನಾಡಿಯ ನಡಿಗೆಯ
ನಲುವಿನ ನಾಲಿಗೆ
ನೆನೆದಿರೆ ಸೋಲುವ
ಸೊಲ್ಲಿನಲಿ;

ಮುಟ್ಟದ ಮಾಟದ
ಹುಟ್ಟದ ಹುಟ್ಟಿಗೆ
ಜೇನಿನ ಥಳಿಮಳಿ
ಸನಿಹ ಹನಿ;

ಬೆಚ್ಚಿದ ವೆಚ್ಚವು
ಬಸರಿನ ಮೊಳಕೆ
ಬಚ್ಚಿದ್ದಾವದೊ
ನಾ ತಿಳಿಯೆ.

ಭೂತದ ಭಾವ
ಉದ್ಭವ ಜಾವ
ಮೊಲೆ ಊಡಿಸುವಳು
ಪ್ರತಿಭೆ ನವ.


(ಭಾಗ-3)

‘ಚಿತ್ತೀಮಳಿ ತತ್ತೀ ಹಾಕತಿತ್ತು
ಸ್ವಾತಿ ಮುತ್ತಿನೊಳಗ
ಸತ್ತಿsಯೊ ಮಗನs
ಅಂತ ಕೂಗಿದರು
ಸಾವೀ ಮಗಳು, ಭಾವೀ ಮಗಳು
ಕೂಡಿ’

‘ಈ ಜಗ, ಅಪ್ಪಾ, ಅಮ್ಮನ ಮಗ
ಅಮ್ಮನೊಳಗ ಅಪ್ಪನ ಮೊಗ
ಅಪ್ಪನ ಕತ್ತಿಗೆ ಅಮ್ಮನ ನೊಗ
ನಾ ಅವರ ಕಂದ
ಶ್ರೀ ಗುರುದತ್ತ ಅಂದ.’


(ಭಾಗ-4)
‘ನಾನು’ ‘ನೀನು’
‘ಆನು’ ‘ತಾನು’
ನಾಕೆ ನಾಕು ತಂತಿ,

 

ಸೊಲ್ಲಿಸಿದರು
ನಿಲ್ಲಿಸಿದರು
ಓಂ ಓಂ ದಂತಿ!
ಗಣನಾಯಕ
ಮೈ ಮಾಯಕ
ಸೈ ಸಾಯಕ ಮಾಡಿ
ಗುರಿಯ ತುಂಬಿ
ಕುರಿಯ ಕಣ್ಣು
ಧಾತು ಮಾತು
ಕೂಡಿ.

ಸುನಾಥರ ಕೃತಿ

(ನಾಕುತಂತಿ ಕವನದ ಒಳಹೂರಣವನ್ನು ತಿಳಿಯಲು ಮುಂದಿನ ಭಾಗಕ್ಕಾಗಿ ನಿರೀಕ್ಷಿಸಿ)

ಇದನ್ನು ಓದಿ : D. R. Bendre : ಹಿಟ್ಲರ್ ಬಗ್ಗೆ ಕವಿತೆ ಬರೆದ ಕರ್ನಾಟಕದ ಈ ‘ಹರ್ ಬಂಡರ್’ ಮಹಾಕವಿಗಳೂ ಮತ್ತವರ ಲೀಲಾಪ್ರಸಂಗವೂ 

ಸುನಾಥರ ಈ ಬರಹವನ್ನೂ ಓದಿ : Fatherhood; ಅಪ್ಪನಾಗುವುದೆಂದರೆ: ಉಡಾಳ ಆಗಬೇಕಂತ ಎಷ್ಟ ಪ್ರಯತ್ನ ಮಾಡಿದೆ ಅಂತೀರಿ

Published On - 5:05 pm, Tue, 1 February 22