ಅಹಮದಾಬಾದ್ನಲ್ಲಿ ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧನ
ಅಹಮದಾಬಾದ್ನಲ್ಲಿ ‘ಆಪರೇಷನ್ ಡೆಲ್ಟಾ ಹಂಟ್’ ಕಾರ್ಯಾಚರಣೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಉಳಿದ 150ಕ್ಕೂ ಹೆಚ್ಚು ವ್ಯಕ್ತಿಗಳ ವಿಚಾರಣೆ ನಡೆಯುತ್ತಿದೆ. ಈಗ ಬಾಂಗ್ಲಾದೇಶಿಗರು ಎಂದು ದೃಢಪಟ್ಟಿರುವ 166 ಜನರಲ್ಲಿ ಕೆಲವು ವ್ಯಕ್ತಿಗಳು ವಂಚನೆಯ ಮೂಲಕ ಇಲ್ಲಿನ ಆಧಾರ್ ಕಾರ್ಡ್ಗಳನ್ನು ಪಡೆದುಕೊಂಡಿದ್ದಾರೆ. ಕಳೆದ ವರ್ಷ ಅಕ್ರಮವಾಗಿ ನೆಲೆಸಿದ್ದ 465 ಬಾಂಗ್ಲಾದೇಶಿ ಪ್ರಜೆಗಳನ್ನು ಹೇಗೆ ಗಡಿಪಾರು ಮಾಡಲಾಗಿತ್ತೋ, ಅದೇ ರೀತಿ ಈ ವ್ಯಕ್ತಿಗಳನ್ನೂ ಸಹ ಶೀಘ್ರದಲ್ಲೇ ಗಡಿಪಾರು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಅಹಮದಾಬಾದ್, ಜೂನ್ 3: ಗುಜರಾತ್ನ ಅಹಮದಾಬಾದ್ನಲ್ಲಿ ಭದ್ರತಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತದಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದ ಬರೋಬ್ಬರಿ 166 ಬಾಂಗ್ಲಾದೇಶಿ (Bangladesh) ಪ್ರಜೆಗಳನ್ನು ಬಂಧಿಸಲಾಗಿದೆ. ಅಹಮದಾಬಾದ್ನ ವಿವಿಧ ಭಾಗಗಳಲ್ಲಿ ಇವರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಈ ಜಾಲವನ್ನು ಪತ್ತೆಹಚ್ಚಿದ್ದಾರೆ.
ಅಹಮದಾಬಾದ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ವಿದೇಶಿ ಪ್ರಜೆಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗಿತ್ತು. ನಗರದ ನಿರ್ಮಾಣ ಪ್ರದೇಶಗಳು, ಕೈಗಾರಿಕಾ ವಲಯಗಳು ಮತ್ತು ಬಾಡಿಗೆ ಮನೆಗಳಲ್ಲಿ ಹಲವು ಬಾಂಗ್ಲಾದೇಶಿ ಪ್ರಜೆಗಳು ನಕಲಿ ಗುರುತಿನ ಚೀಟಿಗಳನ್ನು ಬಳಸಿಕೊಂಡು ವಾಸಿಸುತ್ತಿದ್ದಾರೆ ಎಂಬ ರಹಸ್ಯ ಮಾಹಿತಿ ಪೊಲೀಸರಿಗೆ ಲಭಿಸಿತ್ತು.
ಇದನ್ನೂ ಓದಿ: Kerala: ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸ; ಪರೀಕ್ಷೆ ಬರೆದ 20 ವರ್ಷಗಳ ನಂತರ ಬಂದ ನೇಮಕಾತಿ ಪತ್ರ!
ಈ ಮಾಹಿತಿಯ ಆಧಾರದ ಮೇಲೆ ವಿಶೇಷ ಪೊಲೀಸ್ ತಂಡಗಳು ಹಾಗೂ ಅಪರಾಧ ವಿಭಾಗದ ಅಧಿಕಾರಿಗಳು ನಗರದ ಪ್ರಮುಖ ಪ್ರದೇಶಗಳಲ್ಲಿ ಹಠಾತ್ ಜಂಟಿ ತಪಾಸಣೆ ನಡೆಸಿದರು. ಈ ವೇಳೆ ಸಿಕ್ಕಿಬಿದ್ದವರ ಪಾಸ್ಪೋರ್ಟ್ ಹಾಗೂ ವೀಸಾ ದಾಖಲೆಗಳನ್ನು ಪರಿಶೀಲಿಸಿದಾಗ, ಅವೆಲ್ಲವೂ ನಕಲಿ ಅಥವಾ ಯಾವುದೇ ದಾಖಲೆಗಳೇ ಇಲ್ಲದಿರುವುದು ಬೆಳಕಿಗೆ ಬಂದಿದೆ.
ನಕಲಿ ದಾಖಲೆಗಳ ಸೃಷ್ಟಿ:
ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ ಬಾಂಗ್ಲಾದೇಶಿ ಪ್ರಜೆಗಳು ಗಡಿ ದಾಟಿ ಭಾರತದೊಳಗೆ ನುಸುಳಲು ಮತ್ತು ಇಲ್ಲಿ ನೆಲೆಸಲು ದಲ್ಲಾಳಿಗಳ ಸಹಾಯ ಪಡೆದಿದ್ದರು ಎನ್ನಲಾಗಿದೆ. ಭಾರತದಲ್ಲಿ ಸಣ್ಣಪುಟ್ಟ ಕೆಲಸ ಗಿಟ್ಟಿಸಿಕೊಳ್ಳಲು ಇವರು ನಕಲಿ ಆಧಾರ್ ಕಾರ್ಡ್, ವೋಟರ್ ಐಡಿ ಹಾಗೂ ಪ್ಯಾನ್ ಕಾರ್ಡ್ಗಳನ್ನು ಸೃಷ್ಟಿಸಿಕೊಂಡಿದ್ದರು. ಈ ನಕಲಿ ದಾಖಲೆಗಳನ್ನು ಒದಗಿಸಿ ಇವರು ಸ್ಥಳೀಯವಾಗಿ ಮನೆಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ 166 ವಿದೇಶಿ ಪ್ರಜೆಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಇವರಿಗೆ ಭಾರತದ ಗಡಿ ದಾಟಲು ನೆರವು ನೀಡಿದ ಅಂತಾರಾಷ್ಟ್ರೀಯ ದಲ್ಲಾಳಿಗಳು ಮತ್ತು ಸ್ಥಳೀಯವಾಗಿ ನಕಲಿ ದಾಖಲೆಗಳ ವ್ಯವಸ್ಥೆ ಮಾಡಿಕೊಟ್ಟ ಜಾಲದ ಪತ್ತೆಗೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಇದನ್ನೂ ಓದಿ: ಸಿಬಿಎಸ್ಇ ನೂತನ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ಲೋಖಂಡೆ ಸೀತಾರಾಮ್ ನೇಮಕ
ಕಾನೂನು ಪ್ರಕ್ರಿಯೆಗಳು ಮುಗಿದ ನಂತರ, ವಿದೇಶಾಂಗ ಸಚಿವಾಲಯದ ನಿಯಮಾವಳಿಗಳ ಪ್ರಕಾರ ಇವರನ್ನು ಮರಳಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಅಹಮದಾಬಾದ್ ಪೊಲೀಸರು ನಡೆಸಿರುವ ಈ ಕಾರ್ಯಾಚರಣೆ ಅತ್ಯಂತ ಮಹತ್ವದ್ದಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




