
ನವದೆಹಲಿ, (ಆಗಸ್ಟ್ 25): ನಾಸಿಕ್ ನಿಂದ ಕಂದಾ ಎಕ್ಸ್ ಪ್ರೆಸ್ ವಿಶೇಷ ರೈಲುಗಳಲ್ಲಿ 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿ (onion) ಪೂರೈಸಲಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (Union Minister pralhad joshi)
ತಿಳಿಸಿದ್ದಾರೆ.ಆರಂಭಿಕವಾಗಿ ಚೆನ್ನೈ, ಮಧುರೈ, ದೆಹಲಿ, ಎರ್ನಾಕುಲಂ ಮತ್ತು ಗುವಾಹಟಿ ನಗರಗಳಿಗೆ ಕಂದಾ ಎಕ್ಸ್ ಪ್ರೆಸ್ ರೈಲು ಮೂಲಕ ಈರುಳ್ಳಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಇತರೆ ನಗರಗಳಿಗೂ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಬಫರ್ ದಾಸ್ತಾನಿನ ಈರುಳ್ಳಿಯನ್ನು 35 ರೂಪಾಯಿ ಕೆಜಿ ದರದಲ್ಲಿ NCCF, NAFED ಮತ್ತು ಕೇಂದ್ರೀಯ ಭಂಡಾರ್ ಮೂಲಕ ಶೀಘ್ರದಲ್ಲೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿಯನ್ನು ‘ಕಂದಾ ಎಕ್ಸ್ಪ್ರೆಸ್’ ವಿಶೇಷ ರೈಲುಗಳಲ್ಲಿ ನಾಸಿಕ್ನಿಂದ ಸಾಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕಂದಾ ಎಕ್ಸ್ಪ್ರೆಸ್ ರೈಲು ಸುಮಾರು 40 ಟ್ರಕ್ಗಳಿಗೆ ಸಮನಾದ ಸರಕನ್ನು ಸಾಗಿಸುವ ಸಾಮರ್ಥ್ಯ ಹೊಂದಿದ್ದು, ಬೃಹತ್ ಪ್ರಮಾಣದಲ್ಲಿ ಪ್ರಮುಖ ನಗರಗಳ ಮಾರುಕಟ್ಟೆಗಳಿಗೆ ಈರುಳ್ಳಿ ತಲುಪಿಸಲಾಗುತ್ತಿದೆ.
ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಮತ್ತು ಲಭ್ಯತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಬೆಂಬಲ ಬೆಲೆ ನೀಡುವ ಮೂಲಕ ಗ್ರಾಹಕರು ಮತ್ತು ರೈತರ ಹಿತಾಸಕ್ತಿ ಕಾಪಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮಾರುಕಟ್ಟೆಯಲ್ಲಿ ಈರುಳ್ಳಿ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ನಿರಂತರವಾಗಿ ಸಮಯೋಚಿತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.