ನಿವೃತ್ತ ನ್ಯಾಯಾಧೀಶರ ವಿರೋಧದ ನಡುವೆ ಅಮಿತ್ ಶಾ ಬೆಂಬಲಕ್ಕೆ ನಿಂತ 56 ಜಡ್ಜ್​ಗಳು

ನಿವೃತ್ತ ನ್ಯಾಯಾಧೀಶರ ಗುಂಪೊಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸರ್ಕಾರದ ನಡೆಗಳನ್ನು ಟೀಕಿಸಿದ ನಂತರ ನಿವೃತ್ತ ಸಿಜೆಐಗಳಾದ ಪಿ. ಸದಾಶಿವಂ ಮತ್ತು ರಂಜನ್ ಗೊಗೊಯ್ ಸೇರಿದಂತೆ 56 ನಿವೃತ್ತ ನ್ಯಾಯಾಧೀಶರು ಪ್ರತಿವಾದ ಮಂಡಿಸಿದ್ದಾರೆ. ಅಂತಹ ಹೇಳಿಕೆಗಳನ್ನು "ರಾಜಕೀಯ ಪ್ರೇರಿತ" ಮತ್ತು ನ್ಯಾಯಾಂಗಕ್ಕೆ ಹಾನಿಕಾರಕ ಎಂದು ಅವರು ಕರೆದಿದ್ದಾರೆ.

ನಿವೃತ್ತ ನ್ಯಾಯಾಧೀಶರ ವಿರೋಧದ ನಡುವೆ ಅಮಿತ್ ಶಾ ಬೆಂಬಲಕ್ಕೆ ನಿಂತ 56 ಜಡ್ಜ್​ಗಳು
Amit Shah

Updated on: Aug 26, 2025 | 7:53 PM

ನವದೆಹಲಿ, ಆಗಸ್ಟ್ 26: ಮುಂದಿನ ತಿಂಗಳ ಉಪರಾಷ್ಟ್ರಪತಿ ಚುನಾವಣೆಗೆ (Vice President Elections) ವಿರೋಧ ಪಕ್ಷದ ಅಭ್ಯರ್ಥಿಯಾಗಿರುವ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ‘ನಕ್ಸಲಿಸಂ ಅನ್ನು ಬೆಂಬಲಿಸಲು ಸುಪ್ರೀಂ ಕೋರ್ಟ್ ಅನ್ನು ಬಳಸಿಕೊಂಡಿದ್ದರು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆ ನೀಡಿದ್ದರು. ಇದಕ್ಕೆ ಸುಪ್ರೀಂ ಕೋರ್ಟ್​ನ 18 ನಿವೃತ್ತ ನ್ಯಾಯಮೂರ್ತಿಗಳು ಆಕ್ಷೇಪ ವ್ಯಕ್ತಪಡಿಸಿ, ಇದು ಸುಪ್ರೀಂ ಕೋರ್ಟ್​ಗೆ ಮಾಡಿದ ಅವಮಾನ ಎಂದು ಕರೆದಿದ್ದರು. ಸುದರ್ಶನ್ ರೆಡ್ಡಿ ವಿರುದ್ಧ ನೀಡಿದ ಅಮಿತ್ ಶಾ ಅವರ ಹೇಳಿಕೆ ದುರದೃಷ್ಟಕರ ಮತ್ತು ಪೂರ್ವಗ್ರಹ ಪೀಡಿತ ಎಂದು ಟೀಕಿಸಿದ್ದರು. ಇದಕ್ಕೆ ವಿರುದ್ಧವಾಗಿ ಇದೀಗ 56 ನಿವೃತ್ತ ನ್ಯಾಯಮೂರ್ತಿಗಳ ತಂಡ ಅಮಿತ್ ಶಾ ಅವರ ಬೆಂಬಲಕ್ಕೆ ನಿಂತಿದೆ.

ಇಂದು (ಮಂಗಳವಾರ) ಮಧ್ಯಾಹ್ನ ಬಿಡುಗಡೆ ಮಾಡಿದ ಪತ್ರದಲ್ಲಿ, ಸುಪ್ರೀಂ ಕೋರ್ಟ್​ನ ಇಬ್ಬರು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಪಿ. ಸದಾಶಿವಂ ಮತ್ತು ರಂಜನ್ ಗೊಗೊಯ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ದೆಹಲಿ, ಬಾಂಬೆ, ಕೇರಳ ಹೈಕೋರ್ಟ್‌ಗಳ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಮುಂತಾದ 50 ನ್ಯಾಯಮೂರ್ತಿಗಳು ಈ ಹಿಂದಿನ 18 ನ್ಯಾಯಮೂರ್ತಿಗಳ ಹೇಳಿಕೆಗಳು ನ್ಯಾಯಾಂಗ ಸ್ವಾತಂತ್ರ್ಯದ ಭಾಷೆಯ ಅಡಿಯಲ್ಲಿ ರಾಜಕೀಯ ಪಕ್ಷಪಾತವನ್ನು ಮರೆಮಾಚುವ ಒಂದು ಭಾಗವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಆಯ್ಕೆ


ಭಾರತದ ಇಂಡಿಯ ಬ್ಲಾಕ್ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿರುವ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಅಮಿತ್ ಶಾ ಅವರು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರು ನಕ್ಸಲಿಸಂ ಅನ್ನು ಬೆಂಬಲಿಸುತ್ತಾರೆ ಎಂದು ಆರೋಪಿಸಿದ್ದರು. ಸುಪ್ರೀಂ ಕೋರ್ಟ್ ನ ಸಾಲ್ವಾ ಜುಡುಮ್ ತೀರ್ಪು ಜಾರಿಯಾಗದಿದ್ದರೆ ಎಡಪಂಥೀಯ ಉಗ್ರವಾದ 2020ರ ವೇಳೆಗೆ ಕೊನೆಗೊಳ್ಳುತ್ತಿತ್ತು ಎಂದಿದ್ದರು.

ಇದನ್ನೂ ಓದಿ: ನಕ್ಸಲಿಸಂ ಬೆಂಬಲಿಸಲು ಸುಪ್ರೀಂ ಕೋರ್ಟನ್ನು ಬಳಸಿಕೊಂಡಿದ್ದರು; ವಿಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಸುದರ್ಶನ್ ರೆಡ್ಡಿ ಬಗ್ಗೆ ಅಮಿತ್ ಶಾ ಟೀಕೆ

ಇದಕ್ಕೆ ಪ್ರತಿಯಾಗಿ 56 ನಿವೃತ್ತ ನ್ಯಾಯಮೂರ್ತಿಗಳು ಅಮಿತ್ ಶಾ ವಿರೋಧ ಆರೋಪ ಮಾಡಿದ್ದ ಆ 18 ನ್ಯಾಯಮೂರ್ತಿಗಳ ತಂಡದ ಹೇಳಿಕೆಯನ್ನು ಟೀಕಿಸಿದ್ದಾರೆ. “ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಲಿರುವ ಸುದರ್ಶನ್ ರೆಡ್ಡಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರೂ ಅವರು ಚುನಾವಣೆಗೆ ಸ್ಪರ್ಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗಿದ್ದಾಗ ಅವರು ಬೇರೆ ಸ್ಪರ್ಧಿಗಳಂತೆ ರಾಜಕೀಯ ದಾಳಿಗಳನ್ನು, ಬೇರೆಯವರ ಟೀಕೆಗಳನ್ನು ಎದುರಿಸಬೇಕಾಗುತ್ತದೆ ಮತ್ತು ತಮ್ಮ ಉಮೇದುವಾರಿಕೆಯನ್ನು ಸಮರ್ಥಿಸಿಕೊಳ್ಳಬೇಕಾಗುತ್ತದೆ. ಇದರಲ್ಲಿ ನ್ಯಾಯಾಂಗವನ್ನು ಎಳೆದುತರುವುದು ಸರಿಯಲ್ಲ. ರಾಜಕೀಯ ಅಭ್ಯರ್ಥಿಯ ಟೀಕೆಯಿಂದ ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಬರುವುದಿಲ್ಲ” ಎಂದು 50ಕ್ಕೂ ಹೆಚ್ಚು ನ್ಯಾಯಮೂರ್ತಿಗಳು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ವಿರುದ್ಧ ಇಂಡಿಯ ಬ್ಲಾಕ್​ನ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಸ್ಪರ್ಧಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:52 pm, Tue, 26 August 25

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us