ಬಿಜೆಪಿ ತೊರೆದು ಹೊಸ ಪಕ್ಷ ಘೋಷಣೆ? ನಾಳೆ ಅಣ್ಣಾಮಲೈ ಮುಂದಿನ ಹೆಜ್ಜೆ ಪ್ರಕಟ
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಪಕ್ಷ ತೊರೆಯುತ್ತಿದ್ದಾರೆ ಎಂಬ ಊಹಾಪೋಹಗಳ ನಡುವೆ ಅವರ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದೆ. ತಮ್ಮ ಪೋಸ್ಟ್ನಲ್ಲಿ ಅವರು ನಾಳೆ ಒಂದು ಪ್ರಮುಖ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಅಣ್ಣಾಮಲೈ ಅವರು ನಾಳೆ ಬಿಜೆಪಿ ತೊರೆಯುವುದಾಗಿ ಘೋಷಿಸಬಹುದು ಎನ್ನಲಾಗಿದೆ. ಜೂನ್ 3ರಂದು, ಅಣ್ಣಾಮಲೈ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಖುದ್ದಾಗಿ ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಹೇಳಲಾಗಿತ್ತು. ಅದರ ನಂತರ, ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಸಹ ಭೇಟಿಯಾದರು. ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ದೆಹಲಿಗೆ ಹೋಗಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.

ಚೆನ್ನೈ, ಜೂನ್ 4: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ರಾಜ್ಯ ಬಿಜೆಪಿ (BJP) ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು ಪಕ್ಷವನ್ನು ತೊರೆಯುವುದು ಬಹುತೇಕ ಖಚಿತವಾಗಿದೆ. ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ಈಗ ಅಧಿಕೃತ ಮುದ್ರೆ ಬಿದ್ದಿದ್ದು, ನಾಳೆ (ಶುಕ್ರವಾರ) ಅವರು ತಮ್ಮ ಮುಂದಿನ ರಾಜಕೀಯ ಆಥವಾ ವೈಯಕ್ತಿಕ ಹೆಜ್ಜೆಯ ಕುರಿತು ಮಹತ್ವದ ಪ್ರಕಟಣೆ ಹೊರಡಿಸಲಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮರುಸಂಘಟನೆ ನಡೆದಿದೆ. ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷದೊಂದಿಗೆ ಕಾಂಗ್ರೆಸ್ ಕೈಜೋಡಿಸಿ ಸರ್ಕಾರ ರಚಿಸಲು ಮುಂದಾದ ಬೆನ್ನಲ್ಲೇ, ತಮಿಳುನಾಡಿನಲ್ಲಿ ಬಿಜೆಪಿಯ ಭವಿಷ್ಯ ಮತ್ತು ಕಾರ್ಯತಂತ್ರದ ಕುರಿತು ಭಿನ್ನಾಭಿಪ್ರಾಯಗಳು ತಲೆದೋರಿದ್ದವು ಎನ್ನಲಾಗಿದೆ. ತಮಿಳುನಾಡಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಅಣ್ಣಾಮಲೈ ತೋರಿದ ಆಕ್ರಮಣಕಾರಿ ಶೈಲಿಗೆ ಸ್ಥಳೀಯವಾಗಿ ಮತ್ತು ಕೇಂದ್ರದ ಕೆಲವು ನಾಯಕರಿಂದ ನಿರೀಕ್ಷಿತ ಬೆಂಬಲ ಸಿಗಲಿಲ್ಲ ಎಂಬ ಅಸಮಾಧಾನವೂ ಈ ನಿರ್ಧಾರದ ಹಿಂದೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಇದನ್ನೂ ಓದಿ: ಅಮಿತ್ ಶಾ ಜೊತೆ ಅಣ್ಣಾಮಲೈ ಮಾತುಕತೆ; ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಕಸರತ್ತು
ಅಣ್ಣಾಮಲೈ ಅವರು ಬಿಜೆಪಿ ತೊರೆಯುವುದು ಖಚಿತವಾದ ಬೆನ್ನಲ್ಲೇ, ಅವರ ಮುಂದಿನ ನಡೆ ಏನು ಎಂಬ ಬಗ್ಗೆ ತೀವ್ರ ಕುತೂಹಲ ಮೂಡಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಅವರು ಈ ಬಗ್ಗೆ ಘೋಷಿಸುವ ನಿರೀಕ್ಷೆಯಿದೆ. ತಮಿಳುನಾಡಿನ ಯುವಜನತೆ ಮತ್ತು ಮತದಾರರಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವ ಅಣ್ಣಾಮಲೈ, ಸ್ವಂತ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ. ಅಥವಾ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಗೆ ಅನುಗುಣವಾಗಿ ಬೇರೆ ಯಾವುದಾದರೂ ಪ್ರಮುಖ ಪಕ್ಷದೊಂದಿಗೆ ಕೈಜೋಡಿಸುವ ನಿರ್ಧಾರವನ್ನೂ ಪ್ರಕಟಿಸಬಹುದು.
நாளைய தினம் மதியம் 12 மணி அளவில், சமூக வலைத்தளங்கள் மூலம் உங்கள் அனைவரையும் சந்தித்து, கருத்துகளைப் பகிர்ந்து கொள்ளவும், மனம் திறந்து உரையாடவும், ஆவலுடன் எதிர்நோக்கி இருக்கிறேன்.https://t.co/CuLt12IkQwhttps://t.co/G6dY3wufzqhttps://t.co/rfti0J7ZsLhttps://t.co/xcD9EKje7B
— K.Annamalai (@annamalai_k) June 4, 2026
ಇಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಣ್ಣಾಮಲೈ, “ನಾಳೆ (ಶುಕ್ರವಾರ) ಮಧ್ಯಾಹ್ನ 12 ಗಂಟೆಗೆ, ಸಾಮಾಜಿಕ ಮಾಧ್ಯಮದಲ್ಲಿ ನಿಮ್ಮೆಲ್ಲರೊಂದಿಗೆ ಸಂವಹನ ನಡೆಸಲು, ನನ್ನ ಆಲೋಚನೆಗಳನ್ನು ಹಂಚಿಕೊಳ್ಳಲು ಮತ್ತು ಪ್ರಾಮಾಣಿಕವಾಗಿ, ಹೃದಯದಿಂದ ಸಂಭಾಷಣೆ ನಡೆಸಲು ನಾನು ಕಾಯುತ್ತಿದ್ದೇನೆ” ಎಂದು ಬರೆದಿದ್ದಾರೆ.
ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಬಿಜೆಪಿಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ
ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಕೆ. ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ನಂತರ ರಾಜ್ಯದಲ್ಲಿ ಪಕ್ಷಕ್ಕೆ ಹೊಸ ಕಳೆ ಬಂದಿತ್ತು. ದ್ರಾವಿಡ ರಾಜಕಾರಣದ ಭದ್ರಕೋಟೆಯಲ್ಲಿ ಬಿಜೆಪಿಯನ್ನು ಪ್ರಮುಖ ಪರ್ಯಾಯ ಶಕ್ತಿಯಾಗಿ ಬೆಳೆಸಲು ಅವರು ತೀವ್ರ ಶ್ರಮವಹಿಸಿದ್ದರು. ಬಳಿಕ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಈಗ ಅವರೇ ಪಕ್ಷದಿಂದ ಹೊರನಡೆಯುತ್ತಿರುವುದು ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಹೋರಾಡುತ್ತಿರುವ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




