Amit Shah: ಶ್ರೀನಗರ- ಶಾರ್ಜಾ ನೇರ ವಿಮಾನ ಸೇವೆಗೆ ಚಾಲನೆ ನೀಡಿದ ಗೃಹ ಸಚಿವ ಅಮಿತ್ ಶಾ

| Updated By: ಸುಷ್ಮಾ ಚಕ್ರೆ

Updated on: Oct 23, 2021 | 7:14 PM

ಶ್ರೀನಗರದ ರಾಜಭವನದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಶ್ರೀನಗರದಿಂದ ಶಾರ್ಜಾಗೆ ನೂತನ ಹಾಗೂ ನೇರ ವಿಮಾನವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ್ದಾರೆ.

Amit Shah: ಶ್ರೀನಗರ- ಶಾರ್ಜಾ ನೇರ ವಿಮಾನ ಸೇವೆಗೆ ಚಾಲನೆ ನೀಡಿದ ಗೃಹ ಸಚಿವ ಅಮಿತ್ ಶಾ
ಶ್ರೀನಗರದಲ್ಲಿ ಅಮಿತ್ ಶಾ
Follow us on

ಶ್ರೀನಗರ: ಜಮ್ಮು ಕಾಶ್ಮೀರದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಇಂದಿನಿಂದ 3 ದಿನಗಳ ಕಾಲ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮೀರದ ಪ್ರವಾಸ ಕೈಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀನಗರದಿಂದ ಶಾರ್ಜಾಗೆ ನೇರ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಅಮಿತ್ ಶಾ ಚಾಲನೆ ನೀಡಿದ್ದಾರೆ. ಶ್ರೀನಗರದ ರಾಜಭವನದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಶ್ರೀನಗರದಿಂದ ಶಾರ್ಜಾಗೆ ನೂತನ ಹಾಗೂ ನೇರ ವಿಮಾನವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ್ದಾರೆ.

ಶ್ರೀನಗರ ಹಾಗೂ ಶಾರ್ಜಾ ನಡುವಿನ ನೇರ ವಿಮಾನಯಾನ ಸೇವೆಗೆ ಇದೀಗ ಚಾಲನೆ ನೀಡಲಾಗಿದೆ. ಇದರಿಂದ ಜಮ್ಮು ಕಾಶ್ಮೀರದ ಪ್ರವಾಸೋದ್ಯಮಕ್ಕೆ ಇನ್ನಷ್ಟು ಪುಷ್ಠಿ ಸಿಗಲಿದೆ. ಹಾಗೇ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೂಡಿಕೆಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ. ಜಮ್ಮು ಕಾಶ್ಮೀರದಲ್ಲಿ ಯಾರು ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೋ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಇದು ಕೇಂದ್ರ ಸರ್ಕಾರದ ಜವಾಬ್ದಾರಿಯೂ ಆಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇಂದಿನಿಂದ 3 ದಿನಗಳ ಕಾಲ ಜಮ್ಮು ಕಾಶ್ಮೀರ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಈ ರಾಜ್ಯದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಮೊದಲ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಆಗಮಿಸುತ್ತಿರುವುದರಿಂದ ಹಾಗೂ ಕಾಶ್ಮೀರ ಕಣಿವೆಯಲ್ಲಿ ಕಳೆದೊಂದು ವಾರದಿಂದ ಉಗ್ರರ ಅಟ್ಟಹಾಸ- ಎನ್​ಕೌಂಟರ್ ಕಾರ್ಯಾಚರಣೆ ಹೆಚ್ಚಾಗಿರುವುದರಿಂದ ಅಮಿತ್​ ಶಾ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ತೆಗೆದುಹಾಕಲಾಗಿದೆ.

ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಕಾಶ್ಮೀರದ ದಾಲ್ ಸರೋವರದ ತೀರದ ಬೌಲೆವರ್ಡ್ ರಸ್ತೆಯಲ್ಲಿ ಸಾರ್ವಜನಿಕ ಓಡಾಟಕ್ಕೆ ಇಂದಿನಿಂದ ಅ. 25ರವರೆಗೆ ನಿಷೇಧ ಹೇರಲಾಗಿದೆ. ಈ ರಸ್ತೆಯ ಬದಲು ಬೇರೆ ಮಾರ್ಗಗಗಳನ್ನು ಬಳಸಲು ಜನರಿಗೆ ಸೂಚಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ವಿಧಿ ಅಡಿಯ ವಿಶೇಷ ಸ್ಥಾನಮಾನವನ್ನು 2019ರ ಆಗಸ್ಟ್ 5ರಂದು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಅಮಿತ್ ಶಾ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ.

ಇಂದು ಬೆಳಗ್ಗೆ ಕಾಶ್ಮೀರಕ್ಕೆ ಆಗಮಿಸಿದ ಅಮಿತ್ ಶಾ ಈ ವರ್ಷದ ಆರಂಭದಲ್ಲಿ ಭಯೋತ್ಪಾದಕರಿಂದ ಹತ್ಯೆಯಾದ ಪೊಲೀಸ್ ಅಧಿಕಾರಿ ಇನ್ಸ್‌ಪೆಕ್ಟರ್ ಪರ್ವೇಜ್ ಅವರ ಕುಟುಂಬವನ್ನು ಭೇಟಿ ಮಾಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾಗೇ, ಅವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದರು. ಇನ್ನೆರಡು ದಿನ ಅಮಿತ್ ಶಾ ಜಮ್ಮು ಕಾಶ್ಮೀರದಲ್ಲಿ ಇರಲಿದ್ದಾರೆ.

ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಇಂದಿನಿಂದ ಜಮ್ಮು-ಕಾಶ್ಮೀರ ಪ್ರವಾಸ; 2 ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಅಡಿಗಲ್ಲು ಸ್ಥಾಪನೆ

ಹಿಂಸಾಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 3 ದಿನಗಳ ಭೇಟಿಗಾಗಿ ಶನಿವಾರ ಕಾಶ್ಮೀರಕ್ಕೆ ಆಗಮಿಸಲಿದ್ದಾರೆ ಅಮಿತ್ ಶಾ

Published On - 7:10 pm, Sat, 23 October 21