ಮೇಲ್ನೋಟಕ್ಕೆ ಅಪರಾಧ ಸಾಬೀತಾಗದಿದ್ದರೆ ಮಾತ್ರ ಎಸ್​ಸಿ/ಎಸ್​ಟಿ ಕಾಯ್ದೆಯಡಿ ನಿರೀಕ್ಷಣಾ ಜಾಮೀನು ನೀಡಬಹುದು; ಸುಪ್ರೀಂ ಕೋರ್ಟ್ ಆದೇಶ

ಜಾತಿ ನಿಂದನೆಯ ಅಥವಾ ಎಸ್​ಸಿ/ಎಸ್​ಟಿ ಕಾಯ್ದೆಯಡಿ ಮೇಲ್ನೋಟಕ್ಕೆ ಅಪರಾಧ ಸಾಬೀತಾಗದಿದ್ದಾಗ ಮಾತ್ರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮಹಾರಾಷ್ಟ್ರದ ಜಾತಿ ದೌರ್ಜನ್ಯ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಮೇಲ್ನೋಟಕ್ಕೆ ಅಪರಾಧ ಸಾಬೀತಾಗದಿದ್ದರೆ ಮಾತ್ರ ಎಸ್​ಸಿ/ಎಸ್​ಟಿ ಕಾಯ್ದೆಯಡಿ ನಿರೀಕ್ಷಣಾ ಜಾಮೀನು ನೀಡಬಹುದು; ಸುಪ್ರೀಂ ಕೋರ್ಟ್ ಆದೇಶ
Supreme Court

Updated on: Sep 04, 2025 | 5:09 PM

ನವದೆಹಲಿ, ಸೆಪ್ಟೆಂಬರ್ 4: ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯ ಜಾತಿ ನಿಂದನೆ (ಎಸ್​ಸಿ/ಎಸ್​ಟಿ ಕಾಯ್ದೆಯಡಿ) ಪ್ರಕರಣದ ಆರೋಪಿಗೆ ಬಾಂಬೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ನ್ಯಾಯಪೀಠವು ರದ್ದುಗೊಳಿಸಿದೆ. ದೂರುದಾರರ ಪ್ರಕಾರ, ಆರೋಪಿ ಮತ್ತು ಇತರರು ಅವರನ್ನು “ಮಂಗ್ಟ್ಯಾನೋ” ಎಂಬ ಜಾತಿ ಹೆಸರಿನಿಂದ ನಿಂದಿಸಿದ್ದರು. ಬಳಿಕ ಅವರ ಮೇಲೆ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಆರೋಪಿಯ ಕಡೆಯ ಅಭ್ಯರ್ಥಿಯನ್ನು ಬೆಂಬಲಿಸಲು ನಿರಾಕರಿಸಿದ ನಂತರ ದೂರುದಾರರಿಗೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ಅವರ ಮನೆಯನ್ನು ಸುಟ್ಟುಹಾಕುವುದಾಗಿ ಬೆದರಿಕೆ ಹಾಕಿದ್ದರು. ಅವರ ತಾಯಿ ಮತ್ತು ಚಿಕ್ಕಮ್ಮನ ಮೇಲೆ ಕೂಡ ಇದೇ ರೀತಿಯ ದೌರ್ಜನ್ಯ ಎಸಗಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಬಿಹಾರದ SIR ಕುರಿತು ಸೆ. 30ರ ನಂತರ ಸಲ್ಲಿಕೆಯಾದ ಆಕ್ಷೇಪಣೆಗಳನ್ನೂ ಪರಿಗಣಿಸುತ್ತೇವೆ; ಸುಪ್ರೀಂ ಕೋರ್ಟ್​ಗೆ ಚುನಾವಣಾ ಆಯೋಗ ಮಾಹಿತಿ

ಈ ಬಗ್ಗೆ ತಮ್ಮ ಆದೇಶದಲ್ಲಿ ತಿಳಿಸಿರುವ ಸುಪ್ರೀಂ ಕೋರ್ಟ್ ನ್ಯಾಯಪೀಠ, ಆರೋಪಿ ಬಳಸಿದ ನಿಂದನೀಯ ಪದಗಳು ಜಾತಿವಾದಿ ಸ್ವಭಾವದ್ದಾಗಿದ್ದು, ದೂರುದಾರರ ಜಾತಿ ಗುರುತಿನ ಕಾರಣದಿಂದಾಗಿ ಅವರನ್ನು ಅವಮಾನಿಸುವ ಉದ್ದೇಶವನ್ನು ಹೊಂದಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದು ಹೇಳಿದೆ. “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, 1989ರ ಸೆಕ್ಷನ್ 18 ನಿರೀಕ್ಷಣಾ ಜಾಮೀನಿಗಾಗಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 438ರ ಬಳಕೆಯನ್ನು ಸ್ಪಷ್ಟವಾಗಿ ನಿಷೇಧಿಸುತ್ತದೆ ಎಂದು ನ್ಯಾಯಾಲಯ ಗಮನಸೆಳೆದಿದೆ. ಆದರೆ, ಈ ನಿರ್ಬಂಧವು ಒಂದು ನಿಯಮದೊಂದಿಗೆ ಬರುತ್ತದೆ. “ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಆರೋಪಿ ಅಪರಾಧವನ್ನು ಮಾಡಿಲ್ಲ ಎಂದು ಮೇಲ್ನೋಟಕ್ಕೆ ಕಂಡುಬಂದರೆ ಮತ್ತು ಆರೋಪಗಳು ಪ್ರಾಥಮಿಕ ಅರ್ಹತೆಯನ್ನು ಹೊಂದಿಲ್ಲ ಎಂದು ಕಂಡುಬಂದರೆ ಮಾತ್ರ ಆಗ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ವಿವೇಚನೆಯನ್ನು ಚಲಾಯಿಸಲು ಅವಕಾಶವಿದೆ” ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ