ಲೈಂಗಿಕ ಕಿರುಕುಳ ಪ್ರಕರಣ; ಅವಿಮುಕ್ತೇಶ್ವರಾನಂದ ಸ್ವಾಮಿಗೆ ನಿರೀಕ್ಷಣಾ ಜಾಮೀನು
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಇಂದು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅವಿಮುಕ್ತೇಶ್ವರಾನಂದ ಸ್ವಾಮಿ ಮತ್ತು ಅವರ ಶಿಷ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳ ಮೇರೆಗೆ ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಈ ಆದೇಶವನ್ನು ಹೊರಡಿಸಿದ್ದಾರೆ.

ಅಲಹಾಬಾದ್, ಮಾರ್ಚ್ 25: ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿಯವರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರಿಗೆ ಮತ್ತು ಅವರ ಶಿಷ್ಯ ಸ್ವಾಮಿ ಮುಕುಂದಾನಂದ ಗಿರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಲಹಾಬಾದ್ ಹೈಕೋರ್ಟ್ (Allahabad High Court) ಅವರಿಬ್ಬರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಂಗೀಕರಿಸಿದೆ. ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಅವರ ಏಕ ಪೀಠವು ಈ ತೀರ್ಪು ನೀಡಿದೆ.
ಇದಕ್ಕೂ ಮೊದಲು ಫೆಬ್ರವರಿ 27ರಂದು ಅವಿಮುಕ್ತೇಶ್ವರಾನಂದ ಸ್ವಾಮೀಜಿ ಅವರ ಬಂಧನಕ್ಕೆ ತಡೆ ನೀಡಿ ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಆದೇಶ ಹೊರಡುವವರೆಗೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಬಾರದು ಎಂದು ಕೋರ್ಟ್ ನಿರ್ದೇಶಿಸಿತ್ತು. ಈ ವಿಷಯವನ್ನು ಆಲಿಸಿದ ನಂತರ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಹಾಗೇ, ಅರ್ಜಿದಾರರು ತನಿಖೆಗೆ ಸಹಕರಿಸುವಂತೆ ಸೂಚಿಸಿತ್ತು.
ಇದನ್ನೂ ಓದಿ: ನ್ಯಾಯಮೂರ್ತಿ ಯಶವಂತ್ ವರ್ಮಾ ವರ್ಗಾವಣೆ; ನಾಳೆ ಅಲಹಾಬಾದ್ ಹೈಕೋರ್ಟ್ ವಕೀಲರಿಂದ ಮುಷ್ಕರ
ಈ ಮೊದಲು ಪ್ರಯಾಗ್ರಾಜ್ನ ಜಿಲ್ಲಾ ನ್ಯಾಯಾಲಯವು ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಇತರರ ವಿರುದ್ಧ ಅಪ್ರಾಪ್ತ ವಯಸ್ಕನನ್ನು ಒಳಗೊಂಡ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಪೋಕ್ಸೋ ಮತ್ತು ಅತ್ಯಾಚಾರ ವಿಶೇಷ ನ್ಯಾಯಾಲಯದ ಅಧ್ಯಕ್ಷತೆ ವಹಿಸಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವಿನೋದ್ ಕುಮಾರ್ ಚೌರಾಸಿಯಾ ಅವರು ಈ ಆದೇಶವನ್ನು ಹೊರಡಿಸಿದ್ದರು.
ಇದನ್ನೂ ಓದಿ: ಕೃಷ್ಣ ಜನ್ಮಭೂಮಿ ವಿವಾದ: ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ
ತುಳಸಿ ಪೀಠದ ಮುಖ್ಯಸ್ಥ ಸ್ವಾಮಿ ರಾಮಭದ್ರಾಚಾರ್ಯರ ಶಿಷ್ಯ ಅಶುತೋಷ್ ಬ್ರಹ್ಮಚಾರಿ ಅವರು ದೂರು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಝುನ್ಸಿ ಪೊಲೀಸರಿಗೆ ಎಫ್ಐಆರ್ ದಾಖಲಿಸಿ ಈ ವಿಷಯದ ಬಗ್ಗೆ ತನಿಖೆ ಆರಂಭಿಸುವಂತೆ ಸೂಚಿಸಿತ್ತು. ಬಳಿಕ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಸಹಚರ ಮುಕುಂದಾನಂದ ಗಿರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
