Badlapur School Case: ಬದ್ಲಾಪುರ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಇಂಟರ್ನೆಟ್ ಸ್ಥಗಿತ

|

Updated on: Aug 21, 2024 | 2:20 PM

ಬುಧವಾರ, ಸ್ಥಳೀಯ ನ್ಯಾಯಾಲಯವು ಅಕ್ಷಯ್ ಶಿಂಧೆಯ ಪೊಲೀಸ್ ಕಸ್ಟಡಿಯನ್ನು ಆಗಸ್ಟ್ 26 ರವರೆಗೆ ವಿಸ್ತರಿಸಿತು. ಕಳೆದ ವಾರ ಘಟನೆ ನಡೆದ ಶಾಲೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಿಗಿ ಪೊಲೀಸ್ ಭದ್ರತೆಯ ನಡುವೆ ಇಂದು ಬೆಳಗ್ಗೆ ಜಿಲ್ಲೆಯ ಕಲ್ಯಾಣ್‌ನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ.

Badlapur School Case: ಬದ್ಲಾಪುರ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಇಂಟರ್ನೆಟ್ ಸ್ಥಗಿತ
ಬದ್ಲಾಪುರದಲ್ಲಿ ಪ್ರತಿಭಟನೆ
Follow us on

ಮುಂಬೈ ಆಗಸ್ಟ್ 21: ಮಹಾರಾಷ್ಟ್ರ ಥಾಣೆ ಜಿಲ್ಲೆಯ ಬದ್ಲಾಪುರ (Badlapur)ಶಾಲೆಯ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಇಂಟರ್ನೆಟ್ ಸೇವೆಗಳನ್ನುInternet Suspended) ಸ್ಥಗಿತಗೊಳಿಸಲಾಗಿದೆ. ಶಿಶುವಿಹಾರದಲ್ಲಿ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಜನರು ಬದ್ಲಾಪುರ್ ರೈಲು ನಿಲ್ದಾಣದಲ್ಲಿ ನಡೆಸಿದ ಬೃಹತ್ ಪ್ರತಿಭಟನೆ ಒಂದು ದಿನದ ನಂತರ ಇಂದು(ಬುಧವಾರ) ಹೆಚ್ಚಿನ ಶಾಲೆಗಳನ್ನು ಮುಚ್ಚಲಾಗಿದೆ. ಲೈಂಗಿಕ ದೌರ್ಜನ್ಯವೆಸಗಿದ ಶಾಲೆಯ ಸ್ವೀಪರ್, ಆರೋಪಿ ಅಕ್ಷಯ್ ಶಿಂಧೆ ಪ್ರಕರಣವನ್ನು ಕೈಗೆತ್ತಿಕೊಳ್ಳದಿರಲು ಕಲ್ಯಾಣ್ ಬಾರ್ ಅಸೋಸಿಯೇಷನ್ ನಿರ್ಧರಿಸಿದೆ.

ಕಳೆದ ವಾರ ವಾಶ್‌ರೂಮ್‌ನಲ್ಲಿ ಶಾಲಾ ಸ್ವೀಪರ್ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ನಂತರ ಸಾವಿರಾರು ಪ್ರತಿಭಟನಾಕಾರರು ರೈಲು ನಿಲ್ದಾಣದಲ್ಲಿ ರೈಲು ತಡೆದು ಪ್ರತಿಭಟಿಸಿದ್ದು ಮಾತ್ರವಲ್ಲದೆ ಸ್ಥಳೀಯ ಶಾಲಾ ಕಟ್ಟಡಕ್ಕೆ ನುಗ್ಗಿದ ದಾಂಧಲೆ ಮಾಡಿದ್ದಾರೆ. ಮಂಗಳವಾರದ ಈ ಇಡೀ ಬೆಳವಣಿಗೆಯಿಂದ ಬದ್ಲಾಪುರದಲ್ಲಿ ಪರಿಸ್ಥಿತಿ ಬದಲಾಗಿದೆ.


ಲೈಂಗಿಕ ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ಮಾಡಿದ್ದು ಶಾಲಾ ಕಟ್ಟಡವನ್ನು ಧ್ವಂಸಗೊಳಿಸಿದರು. ಪ್ರತಿಭಟನಾಕಾರರನ್ನು ಚದುರಿಸಲು ಮತ್ತು ರೈಲು ಸಂಚಾರಕ್ಕೆ ಹಳಿಗಳನ್ನು ತೆರವುಗೊಳಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.

ದೂರಿನ ಪ್ರಕಾರ ಅಕ್ಷಯ್ ಶಿಂಧೆ ಶಾಲೆಯ ಶೌಚಾಲಯದಲ್ಲಿ ಬಾಲಕಿಯರನ್ನು ನಿಂದಿಸಿದ್ದಾನೆ. ಘಟನೆಯ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಪ್ರಾಂಶುಪಾಲರು, ಶಿಕ್ಷಕಿ ಹಾಗೂ ಮಹಿಳಾ ಅಟೆಂಡರ್‌ನ್ನು ಅಮಾನತುಗೊಳಿಸಿದೆ. ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶಿಸಿದೆ.

ಮಂಗಳವಾರ ಬೆಳಗ್ಗೆ ಶಾಲೆಯ ಹೊರಗೆ ಜಮಾಯಿಸಿದ ಶಾಲಾ ಮಕ್ಕಳ ಪೋಷಕರು ಮತ್ತು ಸ್ಥಳೀಯ ನಾಗರಿಕರು, ಹಲವಾರು ಮಹಿಳೆಯರು ಮತ್ತು ರೈಲ್ವೆ ನಿಲ್ದಾಣದಲ್ಲಿ ‘ರೈಲ್ ರೋಕೋ’ ಪ್ರತಿಭಟನೆ ನಡೆಸಿದರು. ಇವರು ಬೆಳಿಗ್ಗೆ 8.30 ರ ಸುಮಾರಿಗೆ ಸ್ಥಳೀಯ ರೈಲುಗಳ ಮಾರ್ಗವನ್ನು ನಿರ್ಬಂಧಿಸಿದರು. ಮಹಿಳೆಯರು ಸೇರಿದಂತೆ ಕೆಲವು ಪ್ರತಿಭಟನಾಕಾರರು ನಂತರ ಶಾಲೆಯ ಗೇಟ್, ಕಿಟಕಿ ಗಾಜುಗಳು, ಬೆಂಚುಗಳು ಮತ್ತು ಬಾಗಿಲುಗಳನ್ನು ಮುರಿದು ಆಸ್ತಿಯನ್ನು ಹಾನಿಗೊಳಿಸಿದರು. ಘಟನೆ ನಡೆದ ಶಾಲೆಯು ಬದ್ಲಾಪುರದ ಬಿಜೆಪಿ ನಾಯಕನ ಹತ್ತಿರದ ಸಂಬಂಧಿಗೆ ಸೇರಿದೆ.

ಬದ್ಲಾಪುರ್ ಶಾಲೆಯ ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟನೆ: ಇಲ್ಲಿವರೆಗಿನ ಅಪ್ಡೇಟ್ಸ್

ಬುಧವಾರ, ಸ್ಥಳೀಯ ನ್ಯಾಯಾಲಯವು ಅಕ್ಷಯ್ ಶಿಂಧೆಯ ಪೊಲೀಸ್ ಕಸ್ಟಡಿಯನ್ನು ಆಗಸ್ಟ್ 26 ರವರೆಗೆ ವಿಸ್ತರಿಸಿತು. ಕಳೆದ ವಾರ ಘಟನೆ ನಡೆದ ಶಾಲೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಿಗಿ ಪೊಲೀಸ್ ಭದ್ರತೆಯ ನಡುವೆ ಇಂದು ಬೆಳಗ್ಗೆ ಜಿಲ್ಲೆಯ ಕಲ್ಯಾಣ್‌ನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಆಗಸ್ಟ್ 26 ರವರೆಗೆ ಅವರ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಲು ನ್ಯಾಯಾಲಯ ಆದೇಶಿಸಿದೆ, ನಂತರ ಪೊಲೀಸರು ಆತನನ್ನು ವ್ಯಾನ್‌ನಲ್ಲಿ ಕರೆದೊಯ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಯನ್ನು ಆಗಸ್ಟ್ 17 ರಂದು ಪೊಲೀಸರು ಬಂಧಿಸಿದ್ದರು. ದೂರಿನ ಪ್ರಕಾರ ಆತ ಶಾಲೆಯ ಶೌಚಾಲಯದಲ್ಲಿ ಇಬ್ಬರು ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ರೈಲ್ವೆ ನಿಲ್ದಾಣ ಮತ್ತು ಬದ್ಲಾಪುರದ ಇತರ ಭಾಗಗಳಲ್ಲಿ ಕಲ್ಲು ತೂರಾಟದ ಘಟನೆಗಳಲ್ಲಿ ಕನಿಷ್ಠ 17 ನಗರ ಪೊಲೀಸ್ ಸಿಬ್ಬಂದಿ ಮತ್ತು ಸುಮಾರು ಎಂಟು ರೈಲ್ವೆ ಪೊಲೀಸರು ಗಾಯಗೊಂಡಿದ್ದಾರೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು 72 ಜನರನ್ನು ಬಂಧಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಕಾನೂನು ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬದ್ಲಾಪುರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ.  ಪ್ರತಿಭಟನೆ ಮತ್ತು ನಂತರದ ಹಿಂಸಾಚಾರದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಡಿಸಿಪಿ ಸುಧಾಕರ ಪಠಾರೆ ಬುಧವಾರ ತಿಳಿಸಿದ್ದಾರೆ. ಪಟ್ಟಣದ ಪರಿಸ್ಥಿತಿ ಅವಲೋಕಿಸಿದ ಬಳಿಕ ಇಂಟರ್‌ನೆಟ್‌ ಸೇವೆಯನ್ನು ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.  ಪಟ್ಟಣದ ಬಹುತೇಕ ಶಾಲೆಗಳು ಬುಧವಾರ ಮುಚ್ಚಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.

ನಿಷೇಧಾಜ್ಞೆ ಉಲ್ಲಂಘನೆ, ಕಾನೂನುಬಾಹಿರ ಸಭೆ, ಹಲ್ಲೆ, ಸಾರ್ವಜನಿಕ ಆಸ್ತಿ ಹಾನಿ, ಇತರ ಆರೋಪಗಳ ಮೇಲೆ ಪೊಲೀಸರು ಮೂರು ಎಫ್‌ಐಆರ್‌ಗಳನ್ನು ದುಷ್ಕರ್ಮಿಗಳ ವಿರುದ್ಧ ದಾಖಲಿಸಿದ್ದಾರೆ ಎಂದು ಬದ್ಲಾಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಲ್ಲು ತೂರಾಟ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು 40 ಜನರನ್ನು ಇದುವರೆಗೆ ಬಂಧಿಸಲಾಗಿದೆ. ಇತರ ಅಪರಾಧಿಗಳನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ. ಸಿಸಿಟಿವಿ ಕ್ಯಾಮೆರಾ ಫೂಟೇಜ್ ಮತ್ತು ವಿಡಿಯೋ ನ್ಯೂಸ್ ಕ್ಲಿಪ್ಪಿಂಗ್‌ಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Bharat Bandh: ಭಾರತ್ ಬಂದ್: ಪಾಟ್ನಾದಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್

ಬದ್ಲಾಪುರ್ ರೈಲು ನಿಲ್ದಾಣದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಂದು ಎಫ್‌ಐಆರ್ ದಾಖಲಿಸಲಾಗಿದೆ ಮತ್ತು 32 ಜನರನ್ನು ಬಂಧಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ ಕಮಿಷನರ್ (ಜಿಆರ್‌ಪಿ) ರವೀಂದ್ರ ಶಿಶ್ವೆ ತಿಳಿಸಿದ್ದಾರೆ.  ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹಿರಿಯ ಐಪಿಎಸ್ ಅಧಿಕಾರಿ ಅರ್ತಿ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶಿಸಿದ್ದಾರೆ. ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಏಕನಾಥ್ ಶಿಂಧೆ ಬುಧವಾರ ಬದ್ಲಾಪುರದಲ್ಲಿ ನಡೆದ ಪ್ರತಿಭಟನೆಯು ರಾಜಕೀಯ ಪ್ರೇರಿತವಾಗಿದೆ ಮತ್ತು ರಾಜ್ಯ ಸರ್ಕಾರವನ್ನು ಕೆಣಕುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ