ಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

ಪಶ್ಚಿಮ ಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಕಳೆದ ವರ್ಷ ಕೊಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಇದಾದ ನಂತರ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿತ್ತು. ಇದೀಗ ಮತ್ತೆ ಬಂಗಾಳದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಮತಾ ಬ್ಯಾನರ್ಜಿ ನೇತೃತ್ವದ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ
Harassment

Updated on: Oct 11, 2025 | 8:49 PM

ಕೊಲ್ಕತ್ತಾ, ಅಕ್ಟೋಬರ್ 11: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ (CM Mamata Banerjee) ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಪಶ್ಚಿಮ ಬಂಗಾಳ ರಾಜ್ಯ ಅತ್ಯಾಚಾರಿಗಳಿಗೆ ಸುರಕ್ಷಿತ ಸ್ವರ್ಗವಾಗಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಬಂಗಾಳ ಸರ್ಕಾರವು ಮಹಿಳೆಯರ ಸುರಕ್ಷತೆಯನ್ನು ನಿರ್ವಹಿಸುತ್ತಿರುವ ರೀತಿಗೆ ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಸದ್ಯಕ್ಕೆ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಂಗಾಳ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಬಂಗಾಳ ರಾಜ್ಯದ ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ ಕೂಡ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ಮೇಲೆ ತೀವ್ರ ದಾಳಿ ನಡೆಸಿತು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪದೇ ಪದೇ ಹಾಳಾಗುತ್ತಿದೆ ಎಂದು ಆರೋಪಿಸಿತು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

“ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪುನರಾವರ್ತಿತ ವೈಫಲ್ಯವು ಗೊಂದಲವನ್ನು ಉಂಟುಮಾಡಿದೆ. ಮಮತಾ ಬ್ಯಾನರ್ಜಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಬಿಜೆಪಿ ಒತ್ತಾಯಿಸಿದೆ.

“ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತವಲ್ಲ. ಟಿಎಂಸಿ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವವರೆಗೆ ರಾಜ್ಯಾದ್ಯಂತ ಮಹಿಳೆಯರು ಭಯದಲ್ಲಿ ಬದುಕುತ್ತಲೇ ಇರುತ್ತಾರೆ. ಮಮತಾ ಬ್ಯಾನರ್ಜಿ 2026ರಲ್ಲಿ ಅಧಿಕಾರದಿಂದ ದೂರ ಇರಬೇಕು” ಎಂದು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಖಾಸಗಿ ಕಾಲೇಜಿನ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯನ್ನು ದುರ್ಗಾಪುರದ ಆಸ್ಪತ್ರೆ ಆವರಣದೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಲಾಗಿದೆ. ಈ ಪ್ರಕರಣವು 2024ರ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಘಟನೆಗೆ ಹೋಲುತ್ತದೆ.

ಇದನ್ನೂ ಓದಿ: ಮಧ್ಯಪ್ರದೇಶದ ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಯುವಕನಿಂದ ಅತ್ಯಾಚಾರ!

ಇದೀಗ ಅತ್ಯಾಚಾರಕ್ಕೆ ಒಳಗಾದ ಮಹಿಳೆ ಒಡಿಶಾದ ಜಲೇಶ್ವರ ಮೂಲದವರಾಗಿದ್ದು, ರಾಜ್ಯದ ಅತಿದೊಡ್ಡ ಕೈಗಾರಿಕಾ ಕೇಂದ್ರವಾದ ದುರ್ಗಾಪುರದ ಶೋಭಾಪುರ ಬಳಿಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಓದುತ್ತಿದ್ದಾರೆ. ಇದು ಕೊಲ್ಕತ್ತಾದಿಂದ ಸುಮಾರು 170 ಕಿಲೋಮೀಟರ್ ದೂರದಲ್ಲಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಆ ವಿದ್ಯಾರ್ಥಿನಿ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಸ್ನೇಹಿತನೊಂದಿಗೆ ಕ್ಯಾಂಪಸ್‌ನಿಂದ ಹೊರಬಂದಿದ್ದಳು. ಕ್ಯಾಂಪಸ್ ಗೇಟ್ ಬಳಿ, ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಆಸ್ಪತ್ರೆಯ ಹಿಂದಿನ ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us