Bharat Jodo Nyay Yatra: ಆಗ್ರಾದಲ್ಲಿ ರಾಹುಲ್​ ಜತೆ ಹೆಜ್ಜೆ ಹಾಕಲಿದ್ದಾರೆ ಅಖಿಲೇಶ್ ಯಾದವ್

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಇಂದು ಯುಪಿಯ ಆಗ್ರಾದಿಂದ ಹೊರಡಲಿದೆ. ಮಾಹಿತಿ ಪ್ರಕಾರ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕಾಂಗ್ರೆಸ್ ನ ನ್ಯಾಯ ಯಾತ್ರೆಗೆ ಸೇರಲಿದ್ದಾರೆ. ಇಂದು ಆಗ್ರಾದಲ್ಲಿ ರಾಹುಲ್ ಗಾಂಧಿ ಜೊತೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆಗೆ ಅಂತಿಮ ಒಪ್ಪಿಗೆ ನೀಡಿದ ನಂತರ, ಅಖಿಲೇಶ್ ಯಾದವ್ ಯಾತ್ರೆಯಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದ್ದಾರೆ . ಇದೀಗ ಆಗ್ರಾ ಭೇಟಿಯ ವೇಳೆ ರಾಹುಲ್ ಮತ್ತು ಅಖಿಲೇಶ್ ವೇದಿಕೆಯಿಂದಲೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಉತ್ಸುಕರಾಗಿದ್ದಾರೆ.

Bharat Jodo Nyay Yatra: ಆಗ್ರಾದಲ್ಲಿ ರಾಹುಲ್​ ಜತೆ ಹೆಜ್ಜೆ ಹಾಕಲಿದ್ದಾರೆ ಅಖಿಲೇಶ್ ಯಾದವ್
ರಾಹುಲ್ ಗಾಂಧಿ, ಅಖಿಲೇಶ್​ ಯಾದವ್
Image Credit source: ABP Live

Updated on: Feb 25, 2024 | 11:13 AM

ರಾಜಕೀಯದಲ್ಲಿ ಶಾಶ್ವತ ಮಿತ್ರರಾಗಲಿ, ಶತ್ರುವಾಗಲೀ ಇರುವುದಿಲ್ಲ ಎಂಬುದಕ್ಕೆ ರಾಹುಲ್ ಗಾಂಧಿ(Rahul Gandhi), ಅಖಿಲೇಶ್​ ಯಾದವ್(Akhilesh Yadav) ಸಾಕ್ಷಿ. ಏಕೆಂದರೆ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​-ಸಮಾಜವಾದಿ ಪಕ್ಷದ ಹೀನಾಯ ಸೋಲಿನ ನಂತರ ಮುರಿದುಬಿದ್ದ ಸ್ನೇಹ 2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತ್ತೆ ಚಿಗುರುತ್ತಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ರಣತಂತ್ರ ಹೆಣೆಯಲು ಸಿದ್ಧವಾಗಿದ್ದಾರೆ.

ಸೀಟು ಹಂಚಿಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದ ಅಖಿಲೇಶ್​ ಯಾದವ್, ಇಂದು ಆಗ್ರಾದಲ್ಲಿ ನಡೆಯುತ್ತಿರುವ ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಆಗ್ರಾ ಸಮೀಪಿಸುತ್ತಿದ್ದಂತೆ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ ಅಖಿಲೇಶ್​ ಯಾದವ್ ಅವರನ್ನು ಆಹ್ವಾನಿಸಿದ್ದರು.

ಇದೇ ವೇಳೆ ಉತ್ತರ ಪ್ರದೇಶ ಕಾಂಗ್ರೆಸ್​ ಅಧ್ಯಕ್ಷ ಅಜಯ್ ರೈ ಮತ್ತು ಕಾಂಗ್ರೆಸ್​ ನಾಯಕ ಪಿಎಲ್ ಪುನಿಯಾ ಖುದ್ದು ಲಕ್ನೋದಲ್ಲಿರುವ ಎಸ್​ಪಿ ಕೇಂದ್ರ ಕಚೇರಿಗೆ ಆಗಮಿಸಿ ಅಖಿಲೇಶ್​ಗೆ ಆಹ್ವಾನ ಪತ್ರಿಕೆಯನ್ನು ಹಸ್ತಾಂತರಿಸಿದ್ದರು. ಆಗ್ರಾದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ತೆಹ್ರಾ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮತ್ತಷ್ಟು ಓದಿ: ಎಸ್​ಪಿ, ಕಾಂಗ್ರೆಸ್​ ಮೈತ್ರಿ ದೃಢ, ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲಿದ್ದೇವೆ ಎಂದ ಅಖಿಲೇಶ್​ ಯಾದವ್

ಮುಂಬರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಹಾಗೂ ಸಮಾಜವಾದಿ ಪಕ್ಷದ ನಡುವೆ ಮೈತ್ರಿ ಇದೆ. ರಾಯ್​ಬರೇಲಿ, ಅಮೇಥಿ, ಕಾನ್ಪುರ ನಗರ, ಫತೇಪುರ್ ಸಿಕ್ರಿ, ಬನ್ಸ್​ಗಾಂವ್, ಸಹರಾನ್​ಪುರ, ಪ್ರಯಾಗ್​ರಾಜ್, ಮಹಾರಾಜ್​ಗಂಜ್, ವಾರಾಣಸಿ, ಅಮ್ರೋಹಾ, ಝಾನ್ಸಿ, ಬುಲಂದ್​ಶಹರ್, ಗಾಜಿಯಾಬಾದ್, ಮಥುರಾ, ಸೀತಾಪುರ್, ಬಾರಾಬಂಕಿ, ಡಿಯೋರಿಯಾ ಸೇರಿದಂತೆ 17 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಸ್ಪರ್ಧಿಸಲಿದೆ. ಎಸ್​ಪಿ ಹಾಗೂ ಇಂಡಿಯಾ ಒಕ್ಕೂಟದ ಇತರೆ ಅಭ್ಯರ್ಥಿಗಳು ಉಳಿದ 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ. ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಸ್ಥಾನಗಳಿವೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us