Bhima Koregaon Case: ಭೀಮಾ ಕೋರೆಗಾಂವ್ ಪ್ರಕರಣ; ವರವರ ರಾವ್ ವೈದ್ಯಕೀಯ ಜಾಮೀನು ಅರ್ಜಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
ತಮ್ಮ ಶಾಶ್ವತ ವೈದ್ಯಕೀಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿರುವ 83 ವರ್ಷದ ವರವರ ರಾವ್ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ.

ನವದೆಹಲಿ: ಭೀಮಾ ಕೋರೆಗಾಂವ್- ಎಲ್ಗಾರ್ ಪರಿಷತ್ ಪ್ರಕರಣಕ್ಕೆ (Bhima Koregaon case) ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ವರವರ ರಾವ್ (Varavara Rao) ವೈದ್ಯಕೀಯ ಕಾರಣಗಳಿಗಾಗಿ ನಿಯಮಿತ ಜಾಮೀನು ಕೋರಿ ಸಲ್ಲಿಸಿರುವ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ವೈದ್ಯಕೀಯ ಕಾರಣಗಳ ಆಧಾರದ ಮೇಲೆ ವರವರ ರಾವ್ಗೆ ಜಾಮೀನು ನೀಡಲಾಗಿತ್ತು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಪೀಠವು ಆಗಸ್ಟ್ 10ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.
ಜುಲೈ 12ರಂದು ಮುಂದಿನ ಆದೇಶದವರೆಗೆ ವರವರ ರಾವ್ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿತ್ತು. ತಮ್ಮ ಶಾಶ್ವತ ವೈದ್ಯಕೀಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿರುವ 83 ವರ್ಷದ ವರವರ ರಾವ್ ಪ್ರಸ್ತುತ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ.
2017ರಲ್ಲಿ ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ವರವರ ರಾವ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಇದರಿಂದ ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ಉಂಟಾಯಿತು ಎಂದು ಪೊಲೀಸರು ಹೇಳಿದ್ದಾರೆ. ಮಾವೋವಾದಿ ನಂಟು ಹೊಂದಿರುವವರು ಈ ಸಮಾವೇಶವನ್ನು ಆಯೋಜಿಸಿದ್ದರು ಎಂದು ಪುಣೆ ಪೊಲೀಸರು ಹೇಳಿದ್ದಾರೆ. ನಂತರ ಈ ಪ್ರಕರಣದ ತನಿಖೆಯನ್ನು ಎನ್ಐಎ ವಹಿಸಿಕೊಂಡಿತ್ತು.
ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಬಂಧಿತ ಆರೋಪಿ ರೋನಾ ವಿಲ್ಸನ್ ಲ್ಯಾಪ್ಟಾಪ್ ಹ್ಯಾಕ್ ಮಾಡಿಲ್ಲ ಎಂದ ಎನ್ಐಎ
2018ರ ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಡಾ. ಪಿ. ವರವರ ರಾವ್ ವೈದ್ಯಕೀಯ ಕಾರಣಗಳಿಗಾಗಿ ಶಾಶ್ವತ ಜಾಮೀನು ಕೋರಿದ್ದರು. ಕವಿ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ವರವರ ರಾವ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಾಲಯವು ಇಂದಿಗೆ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಿತ್ತು.
ಈ ವಿಚಾರದಲ್ಲಿ ಶಾಶ್ವತ ವೈದ್ಯಕೀಯ ಜಾಮೀನು ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ನ ಏಪ್ರಿಲ್ 13ರ ಆದೇಶವನ್ನು ವರವರ ರಾವ್ ಪ್ರಶ್ನಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ವರವರ ರಾವ್ ಅವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು, ತಲೋಜಾ ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಮೂರು ತಿಂಗಳ ಕಾಲಾವಕಾಶವನ್ನು ನೀಡಿತ್ತು.
ಇದನ್ನೂ ಓದಿ: Bhima Koregaon Case: ಭೀಮಾ ಕೊರೆಗಾಂವ್ ಪ್ರಕರಣ; ಆರೋಪಿ ವರವರ ರಾವ್ಗೆ ಜಾಮೀನು ವಿಸ್ತರಣೆ
2018ರ ಆಗಸ್ಟ್ 28ರಂದು ವರವರ ರಾವ್ ಅವರನ್ನು ಹೈದರಾಬಾದ್ನಲ್ಲಿರುವ ಅವರ ನಿವಾಸದಿಂದ ಬಂಧಿಸಲಾಗಿತ್ತು. ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು 2018ರ ಜನವರಿ 8ರಂದು ಐಪಿಸಿಯ ವಿವಿಧ ಸೆಕ್ಷನ್ ಮತ್ತು ಯುಎಪಿಎ ಅಡಿ ಪ್ರಕರಣ ದಾಖಲಿಸಿದ್ದರು. ಸುಪ್ರೀಕೋರ್ಟ್ ಆದೇಶದನ್ವಯ ವರವರ ರಾವ್ ಅವರನ್ನು ಮೊದಲಿಗೆ ಗೃಹ ಬಂಧನದಲ್ಲಿರಿಸಲಾಗಿತ್ತು. 2018ರ ನವೆಂಬರ್ 17ರಂದು ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ನಂತರ ತಲೋಜಾ ಜೈಲಿಗೆ ಹಾಕಲಾಗಿತ್ತು. 2021ರ ಫೆಬ್ರವರಿ 22ರಂದು ವೈದ್ಯಕೀಯ ಆಧಾರದ ಮೇಲೆ ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.




