AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಬಿಜೆಪಿ ಭರವಸೆ ನೀಡಿತ್ತು, ಎಷ್ಟು ಮಂದಿಗೆ ಉದ್ಯೋಗ ನೀಡಿದ್ದಾರೆ?: ಮಲ್ಲಿಕಾರ್ಜುನ ಖರ್ಗೆ

Parliament Budget Session ಕೇಂದ್ರ ಸರ್ಕಾರದಲ್ಲಿ ಒಂಬತ್ತು ಲಕ್ಷ ಹುದ್ದೆಗಳು ಖಾಲಿ ಇವೆ. ರೈಲ್ವೇಯಲ್ಲಿ ಶೇ 15, ರಕ್ಷಣೆಯಲ್ಲಿ ಶೇ 40 ಮತ್ತು ಗೃಹ ವ್ಯವಹಾರಗಳಲ್ಲಿ ಶೇ 12 ಹುದ್ದೆಗಳು ಖಾಲಿ ಇವೆ. ಇಂದು ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ 9 ಮತ್ತು ಗ್ರಾಮೀಣ ಪ್ರದೇಶದಲ್ಲಿ ಶೇ 7.2 ಆಗಿದೆ ಎಂದು ಖರ್ಗೆ ಹೇಳಿದ್ದಾರೆ.

ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಬಿಜೆಪಿ ಭರವಸೆ ನೀಡಿತ್ತು, ಎಷ್ಟು ಮಂದಿಗೆ ಉದ್ಯೋಗ ನೀಡಿದ್ದಾರೆ?: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
TV9 Web
| Edited By: |

Updated on: Feb 02, 2022 | 7:00 PM

Share

ದೆಹಲಿ:  ದೇಶದಲ್ಲಿ ವ್ಯಾಪಕ ನಿರುದ್ಯೋಗ ಬಿಕ್ಕಟ್ಟು ಉಂಟಾಗಿದೆ ಎಂದು ಹೇಳಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge), ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ಒದಗಿಸುವ ಭರವಸೆಯನ್ನು ಅನುಸರಿಸಲು ಬಿಜೆಪಿ(BJP) ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ನೀವು ಇಷ್ಟೊತ್ತಿಗಾಗಲೇ 15 ಕೋಟಿ ಉದ್ಯೋಗಗಳನ್ನು ಒದಗಿಸಬೇಕಿತ್ತು. ಆದರೆ ನೀವು ನಿಜವಾಗಿಯೂ ಎಷ್ಟು ಉದ್ಯೋಗಗಳನ್ನು ಒದಗಿಸಿದ್ದೀರಿ? ಈ ವರ್ಷದ ಬಜೆಟ್ ಮುಂದಿನ 5 ವರ್ಷಗಳಲ್ಲಿ ಕೇವಲ 60 ಲಕ್ಷ ಉದ್ಯೋಗಗಳನ್ನು ನೀಡುತ್ತದೆ ಎಂದು ಹೇಳಿದೆ ಎಂದು ಖರ್ಗೆ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಲು, ಉದ್ಯೋಗಗಳನ್ನು ಒದಗಿಸಲು ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ತಲುಪಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಅಖಿಲ ಭಾರತ ಸೇವಾ ಕೇಡರ್ ನಿಯಮಗಳಲ್ಲಿನ ಪ್ರಸ್ತಾವಿತ ಬದಲಾವಣೆಗಳು ಮತ್ತು ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ರಾಜ್ಯಗಳಲ್ಲಿ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಮೀ ವಿಸ್ತರಿಸುವ ನಿರ್ಧಾರವನ್ನು ಅವರು ವಿರೋಧಿಸಿದ್ದು ಕೇಂದ್ರವು ರಾಜ್ಯಗಳ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ. ಇದು ದೇಶದ ಫೆಡರಲ್ ರಚನೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಆರೋಪಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಬಗ್ಗೆ ಮಾತನಾಡಿದ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಸೇರಿದಂತೆ ವಿವಿಧ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದಲ್ಲಿ ಒಂಬತ್ತು ಲಕ್ಷ ಹುದ್ದೆಗಳು ಖಾಲಿ ಇವೆ. ರೈಲ್ವೇಯಲ್ಲಿ ಶೇ 15, ರಕ್ಷಣೆಯಲ್ಲಿ ಶೇ 40 ಮತ್ತು ಗೃಹ ವ್ಯವಹಾರಗಳಲ್ಲಿ ಶೇ 12 ಹುದ್ದೆಗಳು ಖಾಲಿ ಇವೆ. ಇಂದು ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ 9 ಮತ್ತು ಗ್ರಾಮೀಣ ಪ್ರದೇಶದಲ್ಲಿ ಶೇ 7.2 ಆಗಿದೆ ಎಂದು ಖರ್ಗೆ ಹೇಳಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಮೇಲ್ಮನೆಯಲ್ಲಿ ಕಳೆದ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಖರ್ಗೆ ಅವರು, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ದೈನಂದಿನ ಆಹಾರ ಪದಾರ್ಥಗಳಂತಹ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ತೃಣಮೂಲ ಕಾಂಗ್ರೆಸ್ ಸಂಸದ ಸುಖೇಂದು ಶೇಖರ್ ರೇ ಅವರು ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು “ಫತ್ವಾ” ಹೊರಡಿಸಿದೆ, ಇದು ನಿರಂಕುಶ ಮತ್ತು ರಾಜ್ಯಗಳ ಕಾರ್ಯಾಂಗದ ಅಧಿಕಾರವನ್ನು ಕೇಂದ್ರೀಕರಿಸುವ ಮುಸುಕಿನ ಪ್ರಯತ್ನವಾಗಿದೆ.ಈ ನಿರ್ಧಾರವನ್ನು ಒಂಬತ್ತು ಮುಖ್ಯಮಂತ್ರಿಗಳು, 100 ನಿವೃತ್ತ IAS, IFS ಅಧಿಕಾರಿಗಳು ವಿರೋಧಿಸಿದ್ದಾರೆ ಎಂದಿದ್ದಾರೆ.

“ಗೃಹ ಸಚಿವಾಲಯವು ಇತ್ತೀಚೆಗೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ರಾಜ್ಯಗಳಲ್ಲಿ ಸಂಬಂಧಿಸಿದ ರಾಜ್ಯಗಳೊಂದಿಗೆ ಯಾವುದೇ ಚರ್ಚೆ ನಡೆಸದೆ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 15 ಕಿಲೋಮೀಟರ್‌ಗಳಿಂದ 50 ಕಿಲೋಮೀಟರ್‌ಗಳಿಗೆ ವಿಸ್ತರಿಸಿದೆ. ಕೇಂದ್ರ ಸರ್ಕಾರದ ಈ ಏಕಪಕ್ಷೀಯ ನಿರ್ಧಾರವು ಅಂತರರಾಷ್ಟ್ರೀಯ ಗಡಿಗಳನ್ನು ಹೊಂದಿರುವ ಚುನಾಯಿತ ರಾಜ್ಯ ಸರ್ಕಾರಗಳ ಮೇಲೆ ದಬ್ಬಾಳಿಕೆ ಮಾಡುವ ಪ್ರಯತ್ನವಾಗಿದೆ ಎಂದು ರೇ ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದಾಗಿ ಕೊವಿಡ್ ಸಂಕಷ್ಟದಲ್ಲೂ ಎಲ್ಲರ ಮನೆಗೆ ಲಕ್ಷ್ಮಿ ಪ್ರವೇಶವಾಗಿದೆ; ಅಮಿತ್ ಶಾ