ತಿರುಪತಿಯ ಇಸ್ಕಾನ್ ದೇಗುಲಕ್ಕೆ ಬಾಂಬ್ ಬೆದರಿಕೆ ಸಂದೇಶ: ಹೈ ಅಲರ್ಟ್​

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಇಸ್ಕಾನ್ ಮಂದಿರಕ್ಕೆ ಅಕ್ಟೋಬರ್ 27 ರಂದು ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಆದರೆ, ದೇವಸ್ಥಾನದ ಆವರಣದಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಸತತ ಬಾಂಬ್ ಬೆದರಿಕೆ ಸಂದೇಶಗಳಿಂದ ತಿರುಪತಿಯಲ್ಲಿ ಭಕ್ತರು ಭೀತರಾಗುವಂತಾಗಿದೆ.

ತಿರುಪತಿಯ ಇಸ್ಕಾನ್ ದೇಗುಲಕ್ಕೆ ಬಾಂಬ್ ಬೆದರಿಕೆ ಸಂದೇಶ: ಹೈ ಅಲರ್ಟ್​
ತಿರುಪತಿಯ ಇಸ್ಕಾನ್ ದೇಗುಲ
Image Credit source: Facebook

Updated on: Oct 28, 2024 | 10:19 AM

ತಿರುಪತಿ, ಅಕ್ಟೋಬರ್ 28: ಆಂಧ್ರಪ್ರದೇಶದ ತಿರುಪತಿಯ ಹೋಟೆಲ್​​ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದ ಬೆನ್ನಲ್ಲೇ ಇದೀಗ ಜಿಲ್ಲೆಯ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ದೇಗುಲದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪೊಲೀಸರ ಪ್ರಕಾರ, ಇಸ್ಕಾನ್ ದೇವಾಲಯದ ಸಿಬ್ಬಂದಿಗೆ ಅಕ್ಟೋಬರ್ 27 ರಂದು ಬೆದರಿಕೆ ಸಂದೇಶ ಬಂದಿದೆ.

ಪಾಕಿಸ್ತಾನದ ಐಎಸ್ಐ ಜತೆ ನಂಟು ಹೊಂದಿರುವ ಭಯೋತ್ಪಾದಕರು ದೇವಾಲಯವನ್ನು ಸ್ಫೋಟಿಸಲಿದ್ದಾರೆ ಎಂದು ದೇಗುಲದ ಸಿಬ್ಬಂದಿಗೆ ಇ-ಮೇಲ್ ಸಂದೇಶ ಬಂದಿದೆ.

ಬೆದರಿಕೆ ಇ-ಮೇಲ್ ಬಂದ ಬೆನ್ನಲ್ಲೇ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ತಂಡಗಳು ಸ್ಥಳಕ್ಕೆ ತಲುಪಿದ್ದು, ದೇವಾಲಯದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿವೆ. ಆದರೆ, ದೇವಸ್ಥಾನದ ಆವರಣದಲ್ಲಿ ಸ್ಫೋಟಕ ಅಥವಾ ಇತರ ಯಾವುದೇ ಆಕ್ಷೇಪಾರ್ಹ ವಸ್ತುಗಳು ಪತ್ತೆಯಾಗಿಲ್ಲ. ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಕ್ಟೋಬರ್ 26 ರಂದು, ಆಗಂತುಕರು ತಿರುಪತಿಯ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದರು. ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಕಳುಹಿಸಿದ್ದರು. ಇದರಿಂದ ಎಚ್ಚೆತ್ತ ಪೊಲೀಸರು ನಗರದ ಪ್ರತಿ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಿದ್ದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ಸಂಪೂರ್ಣ ಶೋಧದ ನಂತರ ಪೋಲಿಸರು ಹುಸಿ ಬಾಂಬ್ ಕರೆ ಎಂದು ದೃಢಪಡಿಸಿದ್ದರು.

ತಿರುಪತಿ ವಿಮಾನ ನಿಲ್ದಾಣಕ್ಕೂ ಬಂದಿತ್ತು ಬಾಂಬ್ ಬೆದರಿಕೆ

ತಿರುಪತಿ ವಿಮಾನ ನಿಲ್ದಾಣಕ್ಕೆ ಕೂಡ ಭಾನುವಾರ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿತ್ತು. ಬೆದರಿಕೆ ಇ-ಮೇಲ್ ಕುರಿತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು. ಇಮೇಲ್ ಆಧರಿಸಿ ಅಧಿಕಾರಿಗಳು ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ

ತಿರುಪತಿಯಲ್ಲಿ ಸತತ ಬಾಂಬ್ ಬೆದರಿಕೆ ಸಂದೇಶಗಳಿಂದ ಭಕ್ತರು ಭಯಭೀತರಾಗಿದ್ದಾರೆ. ಇದರಿಂದ ಬೆದರಿಕೆ ಹಾಕುತ್ತಿದ್ದವರ ಪತ್ತೆಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us