ಪ್ರಶ್ನೆಗಾಗಿ ನಗದು ಪ್ರಕರಣ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಆದೇಶ

Cash for Query Case: ‘ನನ್ನ ದೂರಿನ ಆಧಾರದ ಮೇಲೆ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಆರೋಪಿ ಸಂಸದ ಮಹುವಾ ಮೊಯಿತ್ರಾ ಅವರ ಭ್ರಷ್ಟಾಚಾರದ ಬಗ್ಗೆ ಇಂದು ಲೋಕಪಾಲ್ ಸಿಬಿಐ ತನಿಖೆಗೆ ಆದೇಶಿಸಿದೆ’ ಎಂದು ನಿಶಿಕಾಂತ್ ದುಬೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಶ್ನೆಗಾಗಿ ನಗದು ಪ್ರಕರಣ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಆದೇಶ
ಮಹುವಾ ಮೊಯಿತ್ರಾ

Updated on: Nov 08, 2023 | 5:26 PM

ನವದೆಹಲಿ, ನವೆಂಬರ್ 8: ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ (Cash for Query Case) ಆರೋಪಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಲಾಗಿದೆ. ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ ಸಿಬಿಐ ತನಿಖೆಗೆ (CBI inquiry) ಆದೇಶಿಸಿದೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ (Nishikant Dubey) ಬುಧವಾರ ಹೇಳಿದ್ದಾರೆ.

‘ನನ್ನ ದೂರಿನ ಆಧಾರದ ಮೇಲೆ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಆರೋಪಿ ಸಂಸದ ಮಹುವಾ ಮೊಯಿತ್ರಾ ಅವರ ಭ್ರಷ್ಟಾಚಾರದ ಬಗ್ಗೆ ಇಂದು ಲೋಕಪಾಲ್ ಸಿಬಿಐ ತನಿಖೆಗೆ ಆದೇಶಿಸಿದೆ’ ಎಂದು ನಿಶಿಕಾಂತ್ ದುಬೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.


ಸಂಸತ್ತಿನಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆಗಳನ್ನು ಕೇಳುವುದಕ್ಕೆ ಬದಲಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಹಣಕಾಸಿನ ಅನುಕೂಲಗಳು ಮತ್ತು ಉಡುಗೊರೆಗಳ ರೂಪದಲ್ಲಿ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸ ದುಬೆ ಆರೋಪಿಸಿದ್ದರು. ಪ್ರಶ್ನೆಗಳನ್ನು ಅಪ್​ಲೋಡ್ ಮಾಡಲು ಮೊಯಿತ್ರಾ ಅವರ ಲೋಕಸಭೆ ಖಾತೆಗೆ ದುಬೈನಿಂದ ಲಾಗ್ ಇನ್ ಆಗಿರುವುದಾಗಿ ಹಿರಾನಂದನಿ ಅಫಿಡವಿಟ್‌ನಲ್ಲಿ ಹೇಳಿಕೊಂಡಿದ್ದಾರೆ. ಆದರೆ, ಲಂಚದ ಆರೋಪವನ್ನು ಟಿಎಂಸಿ ಸಂಸದೆ ನಿರಾಕರಿಸಿದ್ದರು. ಆದರೆ ಸಂಸತ್ತಿನ ಲಾಗಿನ್ ಮತ್ತು ಪಾಸ್‌ವರ್ಡ್ ವಿವರಗಳನ್ನು ಸ್ನೇಹಿತ ಮತ್ತು ಉದ್ಯಮಿ ದರ್ಶನ್ ಹಿರಾನಂದನಿಗೆ ನೀಡಿದ್ದಾಗಿ ನಂತರ ಒಪ್ಪಿಕೊಂಡಿದ್ದರು.

ಇದನ್ನೂ ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ನೈತಿಕ ಸಮಿತಿ ಮುಂದೆ ಹಾಜರಾದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದಷ್ಟೇ ಲೋಕಸಭೆಯ ನೈತಿಕ ಸಮಿತಿಯ ಮುಂದೆ ಮೊಯಿತ್ರಾ ವಿಚಾರಣೆಗೆ ಹಾಜರಾಗಿದ್ದರು. ಉದ್ಯಮಿ ದರ್ಶನ್ ಹಿರಾನಂದನಿ ಅವರೊಂದಿಗೆ ಸಂಸತ್ತಿನ ಲಾಗಿನ್ ವಿವರಗಳನ್ನು ಹಂಚಿಕೊಳ್ಳುವಾಗ ತಾನು ಯಾವುದೇ ಸಂಸದೀಯ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಸಮಿತಿಗೆ ಮೊಯಿತ್ರಾ ತಿಳಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us