ದೆಹಲಿ ಏರ್​ಪೋರ್ಟ್​ನಲ್ಲಿ ಚಂದ್ರಬಾಬು ನಾಯ್ಡು, ಎಂಕೆ ಸ್ಟಾಲಿನ್ ಭೇಟಿ

ಎನ್​ಡಿಎ ಹಾಗೂ ಐಎನ್​ಡಿಐಎ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಚಂದ್ರಬಾಬು ನಾಯ್ಡು ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್​ ದೆಹಲಿ ಏರ್​ಪೋರ್ಟ್​ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ದೆಹಲಿ ಏರ್​ಪೋರ್ಟ್​ನಲ್ಲಿ ಚಂದ್ರಬಾಬು ನಾಯ್ಡು, ಎಂಕೆ ಸ್ಟಾಲಿನ್ ಭೇಟಿ
ಚಂದ್ರಬಾಬು ನಾಯ್ಡು, ಎಂಕೆ ಸ್ಟಾಲಿನ್ ಭೇಟಿ

Updated on: Jun 06, 2024 | 9:51 AM

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್(MK Stalin) ದೆಹಲಿ ಏರ್​ಪೋರ್ಟ್​ನಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು(N Chandrababu Naidu) ಅವರನ್ನು ಭೇಟಿಯಾದರು. ಬುಧವಾರ ಚಂದ್ರಬಾಬು ನಾಯ್ಡು ಎನ್​ಡಿಎ ಸಭೆಯಲ್ಲಿ ಭಾಗಿಯಾಗಿದ್ದರೆ, ಸ್ಟಾಲಿನ್ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿದ್ದರು, ಇಬ್ಬರೂ ಕೂಡ ತಮ್ಮ ರಾಜ್ಯಕ್ಕೆ ಹಿಂದಿರುಗುವ ಸಮಯದಲ್ಲಿ ಏರ್​ಪೋರ್ಟ್​ನಲ್ಲಿ ಭೇಟಿಯಾದರು.

ಸ್ಟಾಲಿನ್​ ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ‘‘ಕೇಂದ್ರ ಸರ್ಕಾರದಲ್ಲಿ ದಕ್ಷಿಣ ರಾಜ್ಯಗಳ ಹಕ್ಕುಗಳ ರಕ್ಷಣೆಗಾಗಿ ಪ್ರತಿಪಾದಿಸುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತಾರೆ ಎನ್ನುವ ವಿಶ್ವಾಸವಿದೆ’’ ಎಂದಿದ್ದಾರೆ.

ನಾನು ಅವರಿಗೆ ಶುಭಾಶಯ ತಿಳಿಸಿದ್ದೇನೆ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಾವು ಸಹಕರಿಸುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದೇನೆ. ದಕ್ಷಿಣ ರಾಜ್ಯಗಳ ಪರವಾಗಿ ವಕಾಲತ್ತು ವಹಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

ಮತ್ತಷ್ಟು ಓದಿ: ನಾವು ಗೆಲ್ಲಿಸುವ ಸಂಸದರ ಸಂಬಳ, ಸಿಗುವ ಸೌಲಭ್ಯಗಳ ಬಗ್ಗೆ ನಿಮಗೆಷ್ಟು ಗೊತ್ತು?

ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್​ ಸಿಂಗ್ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್​ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಶಿವಸೇನಾ ಮುಖ್ಯಸ್ಥ ಏಕನಾಥ್ ಶಿಂಧೆ, ಜೆಡಿಎಸ್​ನ ಎಚ್​ಡಿ ಕುಮಾರಸ್ವಾಮಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​, ಲೋಕಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಮತ್ತಿರರು ಹಾಜರಿದ್ದರು.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಮುಂದೂಡಿಕೆ
ಆಂಧ್ರಪ್ರದೇಶ ಮುಖ್ಯಮಂತ್ರಿ(Andhra Pradesh Chief Minister)ಯಾಗಿ ಟಿಡಿಪಿ ಮುಖ್ಯಸ್ಥ ಎನ್​ ಚಂದ್ರಬಾಬು ನಾಯ್ಡು(N Chandrababu Naidu) ಸ್ವೀಕರಿಸಬೇಕಿದ್ದ ಪ್ರಮಾಣ ವಚನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಚಂದ್ರಬಾಬು ಅವರು ಜೂನ್ 9 ರಂದು ಅಮರಾವತಿಯಲ್ಲಿ ಪ್ರಮಾಣವಚನ ಸ್ವೀಕರಿಸಬೇಕಿತ್ತು.

ಆದರೆ, ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವುದರಿಂದ ಚಂದ್ರಬಾಬು ಪ್ರಮಾಣ ವಚನ ಸ್ವೀಕಾರ ಕೊಂಚ ತಡವಾಗಿದೆ.

ಜೂನ್ 12 ರಂದು ಅಮರಾವತಿಯಲ್ಲಿ ಆಂಧ್ರದ ನೂತನ ಸಿಎಂ ಆಗಿ ಚಂದ್ರಬಾಬು ಪ್ರಮಾಣ ವಚನ ಸ್ವೀಕರಿಸಲು ದಿನಾಂಕ ನಿಗದಿಯಾಗಿದೆ ಎಂದು ವರದಿಯಾಗಿದೆ. ಚಂದ್ರಬಾಬು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮೋದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಕೇಂದ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಸಿಗದ ಕಾರಣ ನರೇಂದ್ರ ಮೋದಿ ಅವರು ಎನ್ ಡಿಎ ಮಿತ್ರಪಕ್ಷಗಳೊಂದಿಗೆ ಸಭೆ ನಡೆಸಿದರು. ಧವಾರ ದೆಹಲಿಯಲ್ಲಿ ನರೇಂದ್ರ ಮೋದಿ ಅವರು ಚಂದ್ರಬಾಬು, ಪವನ್ ಕಲ್ಯಾಣ್, ನಿತೀಶ್ ಕುಮಾರ್ ಸೇರಿದಂತೆ ಎಲ್ಲಾ ಎನ್ ಡಿಎ ನಾಯಕರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ಮೋದಿ ಎನ್‌ಡಿಎ ಪಕ್ಷದ ನಾಯಕರಾಗಿ ಆಯ್ಕೆಯಾದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us