ಕೇಸ್​ಗಳನ್ನು ಹಿಂಪಡೆಯದಿದ್ದರೆ ನಾಳೆಯಿಂದ ಮತ್ತೆ ಪ್ರತಿಭಟನೆ; ಕೇಂದ್ರ ಸರ್ಕಾರಕ್ಕೆ ಸಿಜೆಪಿ ಎಚ್ಚರಿಕೆ

ದೇಶಾದ್ಯಂತ ನಡೆದ ವಾರಗಳ ಸುದೀರ್ಘ ಪ್ರತಿಭಟನೆಗಳಲ್ಲಿ ವಶಕ್ಕೆ ಪಡೆಯಲಾದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೊಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (CJP), ನಾಳೆಯಿಂದಲೇ ಮತ್ತೆ ಪ್ರತಿಭಟನೆ ಆರಂಭಿಸುವುದಾಗಿ ಎಚ್ಚರಿಸಿದೆ. ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೊಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದದ ಸಂಪೂರ್ಣ ಉಲ್ಲಂಘನೆಯಾಗುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಬಿಹಾರ ಮತ್ತು ಬಂಗಾಳದಲ್ಲಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಸಿಜೆಪಿ ನಾಯಕರು ಆರೋಪಿಸಿದ್ದಾರೆ.

ಕೇಸ್​ಗಳನ್ನು ಹಿಂಪಡೆಯದಿದ್ದರೆ ನಾಳೆಯಿಂದ ಮತ್ತೆ ಪ್ರತಿಭಟನೆ; ಕೇಂದ್ರ ಸರ್ಕಾರಕ್ಕೆ ಸಿಜೆಪಿ ಎಚ್ಚರಿಕೆ
Saurav Das And Ashutosh Ranka
Image Credit source: PTI

Updated on: Jul 27, 2026 | 10:42 PM

ನವದೆಹಲಿ, ಜುಲೈ 27: ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲಿನ ಎಫ್‌ಐಆರ್‌ಗಳನ್ನು ಹಿಂಪಡೆಯುವ ಬೇಡಿಕೆ ಈಡೇರದಿದ್ದರೆ ಹೊಸದಾಗಿ ಮತ್ತೆ ಪ್ರತಿಭಟನೆ ಆರಂಭಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಸಿದೆ. ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ, ದೆಹಲಿಯಲ್ಲೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ ಹೇಳಿದ್ದಾರೆ. ಕೇಂದ್ರ ಸರ್ಕಾರ ಸಂಧಾನದ ಮಾತುಕತೆಯ ವೇಳೆ ಭರವಸೆ ನೀಡಿದಂತೆ ಪ್ರತಿಭಟನಾಕಾರರ ಮೇಲೆ ಯಾವುದೇ ಎಫ್​ಐಆರ್​ ಹಾಕದಿದ್ದರೆ ಮಾತ್ರ ಪ್ರತಿಭಟನೆಯನ್ನು ನಿಲ್ಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ಚಳವಳಿಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿಗಳ ಗುಂಪಿನ ಪ್ರಮುಖ ಬೇಡಿಕೆಗಳಲ್ಲೊಂದಾದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಬಾರದು ಎಂಬ ಒಪ್ಪಂದವನ್ನು ಸರ್ಕಾರ ಉಲ್ಲಂಘಿಸಿದೆ ಎಂದು ಸಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.


“ಆತ್ಮೀಯ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೇ, ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೊಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದದ ಸಂಪೂರ್ಣ ಉಲ್ಲಂಘನೆಯಾಗುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಬಿಹಾರ ಮತ್ತು ಬಂಗಾಳದಲ್ಲಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ನೂರಾರು ಜನರಿಗೆ ಕಿರುಕುಳ ನೀಡಲಾಗುತ್ತಿದೆ. ದೆಹಲಿಯಲ್ಲಿ ಪ್ರತಿಭಟನಾಕಾರರಿಗೆ ಅಗತ್ಯ ನೆರವು ನೀಡುತ್ತಿದ್ದ ಸ್ವಯಂಸೇವಕರನ್ನು ವಶಕ್ಕೆ ಪಡೆಯುತ್ತಿರುವ ಬಗ್ಗೆ ಹಲವು ವರದಿಗಳು ಬರುತ್ತಿವೆ” ಎಂದು ಅಶುತೋಶ್ ರಾಂಕಾ ಸಾಮಾಜಿಕ ಜಾಲತಾಣ ಎಕ್ಸ್​​ನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾಕಾರರ ಕಾನೂನು ನೆರವಿಗೆ ಸಿಜೆಪಿಯಿಂದ ವೆಬ್​ಸೈಟ್ ಆರಂಭ; 1 ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್

“ಪ್ರತಿಭಟನಾಕಾರರ ಮೇಲಿನ ಎಲ್ಲಾ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂಪಡೆಯಬೇಕು, ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಬೇಕು. ನಮ್ಮ ಒಪ್ಪಂದದಂತೆ ದೆಹಲಿ ಪೊಲೀಸರು ಅಥವಾ ಕೇಂದ್ರ ತನಿಖಾ ಸಂಸ್ಥೆಗಳು ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳ ಪೊಲೀಸರು ಭವಿಷ್ಯದಲ್ಲಿ ಯಾವುದೇ ಎಫ್‌ಐಆರ್ ದಾಖಲಿಸಬಾರದು ಎಂದು ನಾವು ಆಗ್ರಹಿಸುತ್ತೇವೆ. ಅದಕ್ಕೆ ತಪ್ಪಿದರೆ ನಾವು ಮತ್ತೆ ಧರಣಿ ಕುಳಿತುಕೊಳ್ಳಲು ನಿರ್ಧರಿಸಬೇಕಾಗುತ್ತದೆ. ಕಾನೂನು ಪ್ರಕರಣಗಳಿಗೆ ಸಂಬಂಧಿಸಿದ ಲಿಖಿತ ಒಪ್ಪಂದದ ಪ್ರತಿ ಹಾಗೂ ಭಾರತ ಸರ್ಕಾರದೊಂದಿಗಿನ ಕಾಲಮಿತಿಯ ವಿವರಗಳನ್ನು ನಾಳೆಯೊಳಗೆ ನಮಗೆ ತಲುಪಿಸಬೇಕೆಂದು ನಾವು ಆಗ್ರಹಿಸುತ್ತೇವೆ” ಎಂದು ಅವರು ಬರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us