ಕರ್ನಾಟಕ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ ಎಂದ ಕಿರಣ್ ರಿಜಿಜುಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು
ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದನ್ನು ಟೀಕಿಸಿದ್ದ ಕೇಂದ್ರ ಸಚಿವ ಕಿರಣ್ ರಿಜಿಜು, ಮಹಿಳಾ ಪ್ರಾತಿನಿಧ್ಯದ ಕುರಿತು ಕಾಂಗ್ರೆಸ್ ಹೊಂದಿರುವ ಬದ್ಧತೆಯನ್ನು ಪ್ರಶ್ನಿಸಿದ್ದರು. ಮಹಿಳಾ ಸ್ವಾತಂತ್ರ್ಯ ಮತ್ತು ಸಬಲೀಕರಣದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿಡಿಯೋ ಪೋಸ್ಟ್ ಮಾಡಿದ್ದರು. ಆ ಪೋಸ್ಟ್ಗೆ ಕಾಮೆಂಟ್ ಮಾಡಿದ್ದ ಸಚಿವ ಕಿರಣ್ ರಿಜಿಜು ಮಹಿಳಾ ಮೀಸಲಾತಿ ವಿಧೇಯಕಕ್ಕೆ ವಿರೋಧಿಸುವ ಕಾಂಗ್ರೆಸ್ ಇದೀಗ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿದೆ ಎಂದು ಟೀಕಿಸಿದ್ದರು. ಆಗ ಕರ್ನಾಟಕದ ಸಚಿವ ಸಂಪುಟದ ವಿಚಾರವಾಗಿಯೂ ಅವರು ಪ್ರಸ್ತಾಪಿಸಿದ್ದರು.

ಬೆಂಗಳೂರು, ಆಗಸ್ಟ್ 8: ಕರ್ನಾಟಕದ ಸಚಿವ ಸಂಪುಟದಲ್ಲಿ ಯಾವುದೇ ಮಹಿಳಾ ಸಚಿವರಿಲ್ಲ ಎಂಬ ವಿಷಯವಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಮಾಡಿದ ಟೀಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ (CM DK Shivakumar), “ಕಾಂಗ್ರೆಸ್ ಪಕ್ಷವು ಮಹಿಳಾ ಪ್ರಾತಿನಿಧ್ಯಕ್ಕೆ ಬದ್ಧವಾಗಿದೆ. ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ಸಂಸತ್ ಚುನಾವಣೆಯಲ್ಲಿ ನಾವು ಮಹಿಳೆಯರಿಗೆ ಎಷ್ಟು ಸೀಟುಗಳನ್ನು ನೀಡಿದ್ದೇವೆ ಎಂಬುದು ಬಿಜೆಪಿಯವರಿಗೆ ನೆನಪಿದೆ ಎಂದು ಭಾವಿಸುತ್ತೇನೆ. ಹಾಗಾಗಿ, ಕರ್ನಾಟಕದಲ್ಲಿ ನಾವು ಈ ಸಮಸ್ಯೆಯನ್ನು ಖಂಡಿತವಾಗಿಯೂ ಬಗೆಹರಿಸಲಿದ್ದೇವೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ” ಎಂದಿದ್ದಾರೆ. ಕರ್ನಾಟಕದ ಸಂಪುಟದಲ್ಲಿ 33 ಸಚಿವರಿದ್ದು, ಅವರಲ್ಲಿ ಒಬ್ಬರೂ ಮಹಿಳಾ ಸಚಿವರಿಲ್ಲ. ಇದಕ್ಕೆ ಬಿಜೆಪಿ ಟೀಕೆ ವ್ಯಕ್ತಪಡಿಸಿತ್ತು.
ಮಹಿಳಾ ಪ್ರಾಧಾನ್ಯತೆ ಮತ್ತು ಮೀಸಲಾತಿಯ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದ ರಾಹುಲ್ ಗಾಂಧಿಗೆ ಲೇವಡಿ ಮಾಡಿದ್ದ ಕೇಂದ್ರ ಸಚಿವ ಕಿರಣ್ ರಿಜಿಜು “ಮಹಿಳಾ ಮೀಸಲಾತಿ ವಿಧೇಯಕ್ಕೆ ಕಾಂಗ್ರೆಸ್ ಏಕೆ ವಿರೋಧಿಸುತ್ತಿದೆ? ಈಗ ಕಾಂಗ್ರೆಸ್ನ ಮನಸು ಬದಲಾಗಿರಬಹುದು” ಎಂದಿದ್ದರು. ಹಾಗೇ, ಕಾಂಗ್ರೆಸ್ ಸರ್ಕಾರವಿರುವ ಕರ್ನಾಟಕದ ಸಂಪುಟದಲ್ಲಿ ಯಾವುದೇ ಮಹಿಳಾ ಸಚಿವರಿಗೆ ಅವಕಾಶ ನೀಡಿಲ್ಲ ಎಂದು ಕೂಡ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
VIDEO | Bengaluru: Reacting to Union Minister Kiren Rijiju’s criticism over absence of woman minister in state Cabinet, Karnataka CM DK Shivakumar (@DKShivakumar) says, “We are the ones who piloted it. We are the ones who passed it. The Congress party believes in it. Definitely,… pic.twitter.com/KlObyIzUCf
— Press Trust of India (@PTI_News) August 8, 2026
ಇದನ್ನೂ ಓದಿ: ಮಹಿಳಾ ಮೀಸಲಾತಿ ವಿಧೇಯಕದ ಕುರಿತು ರಾಹುಲ್ ಗಾಂಧಿ- ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಕ್ಸಮರ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, “ಮಹಿಳಾ ಮೀಸಲಾತಿ ವಿಧೇಯಕವನ್ನು ತಂದವರು ನಾವು, ಅದನ್ನು ಅಂಗೀಕರಿಸಿದವರೂ ನಾವೇ. ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಆದ್ಯತೆ ನೀಡುವುದರಲ್ಲಿ ನಂಬಿಕೆ ಹೊಂದಿದೆ. ಖಂಡಿತವಾಗಿಯೂ ಸಂಪುಟದಲ್ಲಿ ಮಹಿಳೆಗೆ ಅವಕಾಶ ಸಿಗಲಿದೆ. ನಾವು ಮಹಿಳೆಯರಿಗೆ ಇನ್ನಷ್ಟು ಶಕ್ತಿ ತುಂಬಲಿದ್ದೇವೆ” ಎಂದು ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




