ಚುನಾವಣೆಯಲ್ಲಿ ಭಾರೀ ಮುಖಭಂಗ; ಐದೂ ರಾಜ್ಯಗಳ ಕಾಂಗ್ರೆಸ್​ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಆದೇಶ

| Updated By: ಸುಷ್ಮಾ ಚಕ್ರೆ

Updated on: Mar 15, 2022 | 8:04 PM

ಚುನಾವಣೆಯಲ್ಲಿ ಸೋಲು ಕಂಡಿರುವ ಐದು ರಾಜ್ಯಗಳ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಿಗೆ ರಾಜೀನಾಮೆ ನೀಡಲು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸೂಚಿಸಿದ್ದಾರೆ.

ಚುನಾವಣೆಯಲ್ಲಿ ಭಾರೀ ಮುಖಭಂಗ; ಐದೂ ರಾಜ್ಯಗಳ ಕಾಂಗ್ರೆಸ್​ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಆದೇಶ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
Follow us on

ನವದೆಹಲಿ: ಕಳೆದ ವಾರ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿ ಐದೂ ರಾಜ್ಯಗಳಲ್ಲಿ ಗೆಲ್ಲುವ ಕನಸು ಕಂಡಿದ್ದ ಕಾಂಗ್ರೆಸ್​ಗೆ (Congress) ಭಾರೀ ನಿರಾಸೆಯಾಗಿತ್ತು. ಅಧಿಕಾರದಲ್ಲಿದ್ದ ಪಂಜಾಬ್​ನಲ್ಲೂ ಹೀನಾಯ ಸೋಲು ಕಂಡಿದ್ದ ಕಾಂಗ್ರೆಸ್​ ಐದೂ ರಾಜ್ಯಗಳಲ್ಲಿ ಭಾರೀ ಮುಖಭಂಗ ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸೋಲು ಕಂಡಿರುವ ಐದು ರಾಜ್ಯಗಳ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಿಗೆ ರಾಜೀನಾಮೆ ನೀಡಲು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಇಂದು ಸೂಚಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರೂ ಈ ಪಟ್ಟಿಯಲ್ಲಿದ್ದಾರೆ.

ಪಂಜಾಬ್​ನಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ (ಎಎಪಿ) ವಿರುದ್ಧ ಕಾಂಗ್ರೆಸ್ ಹೀನಾಯ ಸೋಲು ಕಂಡಿತು. ಮತ್ತೆ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿದ್ದ 4 ರಾಜ್ಯಗಳಲ್ಲಿ ಕಾಂಗ್ರೆಸ್ ನೆಲಸಮವಾಯಿತು. ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಭರ್ಜರಿ ಪ್ರಚಾರ ನಡೆಸಿದರೂ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ನ ಸ್ಥಾನ ಮೇಲೇರಲೇ ಇಲ್ಲ. ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್​ ನಾಯಕತ್ವದ ಸಭೆ ನಡೆಸಿದ ಸೋನಿಯಾ ಗಾಂಧಿ ಐದೂ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಆದೇಶಿಸಿದ್ದಾರೆ.

ಪಂಜಾಬ್, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯ ಘಟಕಗಳ ಕಾಂಗ್ರೆಸ್ ಮುಖ್ಯಸ್ಥರಿಗೆ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಪ್ರದರ್ಶನದ ಹೊಣೆಗಾರಿಕೆಯನ್ನು ಹೊತ್ತು ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧು ಸೂಚಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಅಜಯ್ ಲಲ್ಲು, ಪಂಜಾಬ್‌ನಲ್ಲಿ ನವಜೋತ್ ಸಿಂಗ್ ಸಿಧು, ಉತ್ತರಾಖಂಡದಲ್ಲಿ ಗಣೇಶ್ ಗೋಡಿಯಾಲ್, ಗೋವಾದಲ್ಲಿ ಗಿರೀಶ್ ಚೋಡಂಕರ್ ಮತ್ತು ಮಣಿಪುರದಲ್ಲಿ ನಮೀರಕ್ಪಂ ಲೋಕೇನ್ ಸಿಂಗ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅವರೆಲ್ಲರೂ ಇದೀಗ ರಾಜೀನಾಮೆ ನೀಡಬೇಕಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದ ಪಿಸಿಸಿ ಅಧ್ಯಕ್ಷರನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಮರುಸಂಘಟನೆಗೆ ಅನುಕೂಲವಾಗುವಂತೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಇದನ್ನೂ ಓದಿ: Punjab Assembly Elections: ಅಪ್ಪ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ; ನವಜೋತ್ ಸಿಂಗ್ ಸಿಧು ಮಗಳು ಶಪಥ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲು ಹಿನ್ನೆಲೆ; ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪರಿಶೀಲನಾ ಸಭೆ