ಕಾಂಗ್ರೆಸ್ ಪಕ್ಷದಿಂದ ನವಜೋತ್ ಕೌರ್ ಸಿಧು ಉಚ್ಚಾಟನೆ; ಬಿಜೆಪಿಯತ್ತ ಮುಖ ಮಾಡಿದ ಸಿಧು ದಂಪತಿ

ಹಿರಿಯ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹಾಗೂ ಮಾಜಿ ಶಾಸಕಿ ಡಾ. ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಭೂಪೇಶ್ ಬಘೇಲ್ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದು, ನವಜೋತ್ ಕೌರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ ಎಂದು ದೃಢಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ನವಜೋತ್ ಕೌರ್ ಸಿಧು ಉಚ್ಚಾಟನೆ; ಬಿಜೆಪಿಯತ್ತ ಮುಖ ಮಾಡಿದ ಸಿಧು ದಂಪತಿ
Navjot Kaur Sidhu With Navjot Singh Sidhu
Image Credit source: PTI

Updated on: Feb 06, 2026 | 6:02 PM

ನವದೆಹಲಿ, ಫೆಬ್ರವರಿ 6: ಪಂಜಾಬ್ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ನವಜೋತ್ ಕೌರ್ ಸಿಧು (Navjot Kaur Sidhu) ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಘೋಷಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಶಿಸ್ತು ಎಲ್ಲಕ್ಕಿಂತ ಮುಖ್ಯ. ಕಾಂಗ್ರೆಸ್​​ ಹಾಕಿದ ಗೆರೆ ದಾಟುವವರು, ಪಕ್ಷದ ವಿರುದ್ಧ ಕೆಲಸ ಮಾಡುವ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕರಾಗಿದ್ದ ನವಜೋತ್ ಸಿಂಗ್ ಸಿಧು ಅವರ ಪತ್ನಿಯಾಗಿರುವ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷ ತೊರೆದ ಕೆಲವು ದಿನಗಳ ನಂತರ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ನವಜೋತ್ ಕೌರ್ ಸಿಧು ರಾಹುಲ್ ಗಾಂಧಿಯನ್ನು ಪಪ್ಪು ಎಂದು ಕರೆದಿದ್ದರು ಎಂದು ಆರೋಪಿಸಲಾಗಿದೆ. ಪಕ್ಷದ ವಿರುದ್ಧವೇ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ವಿವಾದಕ್ಕೀಡಾದ ನವಜೋತ್ ಸಿಂಗ್ ಸಿಧು ಪತ್ನಿಯ ಸಿಎಂ ಸ್ಥಾನಕ್ಕೆ 500 ಕೋಟಿ ರೂ. ಹೇಳಿಕೆ; ಬಿಜೆಪಿ ಆಕ್ರೋಶ

ಕೆಲವು ದಿನಗಳ ಹಿಂದೆ, ನವಜೋತ್ ಕೌರ್ ಸಿಧು ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿರುವುದಾಗಿ ಸಾರ್ವಜನಿಕವಾಗಿ ಹೇಳಿಕೊಂಡಿದ್ದರು. ನಂತರ ಅವರ ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಉದ್ವಿಗ್ನತೆ ಹೆಚ್ಚಾಯಿತು. ಈ ಹಿಂದೆ “ಪಂಜಾಬ್ ಮುಖ್ಯಮಂತ್ರಿಯಾಗಲು 500 ಕೋಟಿ ರೂ. ಸೂಟ್‌ಕೇಸ್ ನೀಡಬೇಕು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನ ಉಚ್ಚಾಟಿಸಲಾಗಿದೆ.

ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ ನೀಡಿದ ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ಇದರ ನಡುವೆ ನವಜೋತ್ ಸಿಂಗ್ ಸಿಧು ಹಾಗೂ ನವಜೋತ್ ಕೌರ್ ಸಿಧು ಬಿಜೆಪಿಗೆ ಸೇರಲಿದ್ದಾರೆ ಎಂಬ ಊಹಾಪೋಹಗಳಿವೆ. ಆದರೆ, ಈ ಬಗ್ಗೆ ನವಜೋತ್ ಸಿಂಗ್ ಸಿಧು ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮತ್ತೊಂದೆಡೆ, ಸಿಧು ದಂಪತಿ ಬಿಜೆಪಿಗೆ ಸೇರುವ ಬಗ್ಗೆ ಮಾತುಕತೆಗಳು ಭರದಿಂದ ಸಾಗುತ್ತಿವೆ ಎನ್ನಲಾಗಿದೆ. ನವಜೋತ್ ಕೌರ್ ಸಿಧು ಇತ್ತೀಚೆಗೆ ಸರಣಿ ಟ್ವೀಟ್‌ಗಳಲ್ಲಿ ಬಿಜೆಪಿ ಮತ್ತು ಪ್ರಧಾನಿ ಮೋದಿಯವರನ್ನು ಹೊಗಳುತ್ತಿದ್ದಾರೆ. ಆದರೆ, ಇತ್ತೀಚೆಗೆ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮನೋರಂಜನ್ ಕಾಲಿಯಾ ಸಿಧು ದಂಪತಿಗೆ ಬಿಜೆಪಿಯ ಬಾಗಿಲು ಮುಚ್ಚಲಾಗಿದೆ ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ