ಚೀನಾದೊಂದಿಗಿನ ಗಡಿ ಸಮಸ್ಯೆ, ಮಣಿಪುರದಲ್ಲಿನ ಜನಾಂಗೀಯ ಘರ್ಷಣೆಗಳ ಬಗ್ಗೆ ಮೋದಿ ಮೌನವೇಕೆ?: ಕಾಂಗ್ರೆಸ್

ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಚೀನಾದೊಂದಿಗಿನ ಗಡಿ ಸಮಸ್ಯೆಗಳು, ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಮತ್ತು ಹೆಚ್ಚುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಪ್ರಧಾನಿ ಮೋದಿ ಮೌನ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಚೀನಾದೊಂದಿಗಿನ ಗಡಿ ಸಮಸ್ಯೆ, ಮಣಿಪುರದಲ್ಲಿನ ಜನಾಂಗೀಯ ಘರ್ಷಣೆಗಳ ಬಗ್ಗೆ ಮೋದಿ ಮೌನವೇಕೆ?: ಕಾಂಗ್ರೆಸ್
ಜೈರಾಮ್ ರಮೇಶ್
ರಶ್ಮಿ ಕಲ್ಲಕಟ್ಟ

Updated on: Jul 07, 2023 | 9:04 PM

ಛತ್ತೀಸ್‌ಗಢದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ನಾನು ಹೆದರುವುದಿಲ್ಲ ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ (Congress) ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ (Manipur Violence) ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಏಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದೆ. ಭ್ರಷ್ಟಾಚಾರವೇ ಕಾಂಗ್ರೆಸ್‌ನ ಬಹುದೊಡ್ಡ ಸಿದ್ಧಾಂತ ಎಂದು ವಾಗ್ದಾಳಿ ನಡೆಸಿದ ಮೋದಿ ಕಾಂಗ್ರೆಸ್ ಪಕ್ಷ ಛತ್ತೀಸ್‌ಗಢದ ಅಭಿವೃದ್ಧಿಗೆ ತಡೆಯೊಡ್ಡುತ್ತಿದೆ ಎಂದು ಆರೋಪಿಸಿದ್ದರು.  ಜೋ ಢರ್ ಜಾಯೆ ವೋ ಮೋದಿ ನಹಿ (ಭಯಪಡುವವನು ಮೋದಿಯಲ್ಲ). ಛತ್ತೀಸ್‌ಗಢದ ಕಲ್ಯಾಣಕ್ಕಾಗಿ ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ನಾನು ಹಿಂದೆ ಸರಿಯುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಮಾಡಿದ್ದಕ್ಕಿಂತ ದುಪ್ಪಟ್ಟು ಹೂಡಿಕೆ ಮಾಡಿದ್ದೇವೆ.ಕಾಂಗ್ರೆಸ್ ಬಡವರ ಶತ್ರು ಎಂದು ರಾಯಪುರದ ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದರು.

ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಚೀನಾದೊಂದಿಗಿನ ಗಡಿ ಸಮಸ್ಯೆಗಳು, ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಮತ್ತು ಹೆಚ್ಚುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಪ್ರಧಾನಿ ಮೋದಿ ಮೌನ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಹಾಗಾದರೆ ಚೀನಾದ ಬಗ್ಗೆ ಮೌನ ಏಕೆ? ಹಾಗಾದರೆ ಮಣಿಪುರದ ಬಗ್ಗೆ ಮೌನವೇಕೆ? ಹಾಗಾದರೆ ಇಡಿ ಮತ್ತು ಸಿಬಿಐಯ ಅತಿರೇಕದ ದುರ್ಬಳಕೆ ಏಕೆ? ಹಾಗಾದರೆ ಏರುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಮೌನ ಏಕೆ? ಹಾಗಾದರೆ ಮೊದಾನಿಯ ಬಗ್ಗೆ ಮೌನವೇಕೆ? ಎಂದು ಜೈರಾಮ್ ರಮೇಶ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಮತ್ತು ಬಿಲಿಯನೇರ್ ಗೌತಮ್ ಅದಾನಿ ನಡುವಿನ ನಂಟು ಎತ್ತಿ ತೋರಿಸಲು ಕಾಂಗ್ರೆಸ್ ‘ಮೋದಾನಿ’ ಪದವನ್ನು ಬಳಸುತ್ತಿದೆ.

ಶುಕ್ರವಾರ, ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಆಡಳಿತದ ಛತ್ತೀಸ್‌ಗಢಕ್ಕೆ ಭೇಟಿ ನೀಡಿದರು. 2019 ರಲ್ಲಿ ಎರಡನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಅವರ ಮೊದಲನೆ ಭೇಟಿ ಇದಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಗ್ಯಾರಂಟಿಯಾಗಿದ್ದರೆ, ಭ್ರಷ್ಟಾಚಾರದ ವಿರುದ್ಧ ಕ್ರಮಕ್ಕೆ ನಾನೇ ಗ್ಯಾರಂಟಿ ಎಂದು ಮೋದಿ ಹೇಳಿದ್ದಾರೆ. ಛತ್ತೀಸ್‌ಗಢದಲ್ಲಿ ಹಗರಣ ಪೀಡಿತ ಕಾಂಗ್ರೆಸ್ ಸರ್ಕಾರ ದುರಾಡಳಿತದ ಮಾದರಿಯಾಗಿ ಮಾರ್ಪಟ್ಟಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದನ್ನು ಬೇರು ಸಮೇತ ಕಿತ್ತೊಗೆಯಲು ಜನರು ನಿರ್ಧರಿಸಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi in Chhattisgarh: ಕಾಂಗ್ರೆಸ್​​ನ ‘ಪಂಜ’ ನಿಮ್ಮ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ: ವಿಜಯ್​​​ ಸಂಕಲ್ಪ್​​​ ಮಹಾರ‍್ಯಾಲಿಯಲ್ಲಿ ಮೋದಿ ವಾಗ್ದಾಳಿ

ಮುಂದಿನ 25 ವರ್ಷಗಳು ಛತ್ತೀಸ್‌ಗಢದ ಅಭಿವೃದ್ಧಿಗೆ ನಿರ್ಣಾಯಕ, ಆದರೆ ದೊಡ್ಡ ‘ಪಂಜ’ (ಕಾಂಗ್ರೆಸ್‌ನ ಚುನಾವಣಾ ಚಿಹ್ನೆ) ಅದರ ವಿರುದ್ಧ ಎತ್ತರದ ಗೋಡೆಯಂತೆ ನಿಂತಿದೆ. ನಿಮ್ಮ ಹಕ್ಕನ್ನು ಕಸಿದುಕೊಳ್ಳಲು ಕಾಂಗ್ರೆಸ್‌ನ ಪಂಜ ನಿರ್ಧರಿಸಿದೆ. ಅದು ರಾಜ್ಯವನ್ನು ಲೂಟಿ ಮಾಡಿ ನಾಶಪಡಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us