ಭಯೋತ್ಪಾದಕ ಎಂಬ ಪದ ಬಳಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನರೇಂದ್ರ ಮೋದಿ ಸರ್ಕಾರ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಸಚಿವರು ಮಾಡಿದ್ದಾರೆ ಎನ್ನಲಾದ ಹೇಳಿಕೆಗಳನ್ನು ಉಲ್ಲೇಖಿಸಿರುವ ಅವರು, ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳನ್ನು ಬಗೆಹರಿಸುವ ಬದಲಿಗೆ, ನ್ಯಾಯಸಮ್ಮತವಾದ ಪರೀಕ್ಷೆಗಳು ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ಒತ್ತಾಯಿಸುತ್ತಿರುವ ಯುವಕರನ್ನು ಕೇಂದ್ರ ಸರ್ಕಾರವು ಭಯೋತ್ಪಾದಕರು ಎಂದು ಬಿಂಬಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಭಯೋತ್ಪಾದಕ ಎಂಬ ಪದ ಬಳಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ
Rahul Gandhi
Image Credit source: PTI

Updated on: Jun 25, 2026 | 3:27 PM

ನವದೆಹಲಿ, ಜೂನ್ 25: ಸಂಸತ್ತಿನಲ್ಲಿ ಮತ್ತು ರಾಜಕೀಯ ವಲಯದಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಪ್ರತಿಭಟನಾಕಾರರನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಾರೆ ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಸಚಿವ ಧರ್ಮೇಂದ್ರ ಪ್ರಧಾನ್ ಅಧಿಕಾರದ ಅಹಂಕಾರದಲ್ಲಿ ಮುಳುಗಿದ್ದಾರೆ” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದರೊಂದಿಗೆ ಧರ್ಮೇಂದ್ರ ಪ್ರಧಾನ್ ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಪರೀಕ್ಷಾ ಅಕ್ರಮಗಳ ಕುರಿತು ನ್ಯಾಯ ಕೇಳುತ್ತಿರುವ ವಿದ್ಯಾರ್ಥಿಗಳನ್ನು ನಿಂದಿಸುವ ಮಟ್ಟಿಗೆ ಸರ್ಕಾರವು ಅಹಂಕಾರದಿಂದ ಕೂಡಿದೆ ಎಂದು ದೂರಿದ್ದಾರೆ. “ಅಧಿಕಾರದ ಅಹಂಕಾರದಲ್ಲಿ ಮುಳುಗಿರುವ ಮೋದಿ ಸರ್ಕಾರವು ಈಗ ಎಂತಹ ಸ್ಥಿತಿಗೆ ತಲುಪಿದೆ ಎಂದರೆ, ಕೇವಲ ತಮ್ಮ ಹಕ್ಕುಗಳು, ಪಾರದರ್ಶಕ ಪರೀಕ್ಷೆಗಳು ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳನ್ನು ಶಿಕ್ಷಣ ಸಚಿವರೇ ‘ಭಯೋತ್ಪಾದಕರು’ ಎಂದು ಕರೆಯುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಇದನ್ನೂ ಓದಿ: ಮೋದಿಯನ್ನು ಬೆಂಬಲಿಸುವ ಮೂಲಕ ರಾಹುಲ್ ಗಾಂಧಿಗೆ ಶಶಿ ತರೂರ್​​ ಜನ್ಮದಿನದ ಗಿಫ್ಟ್ ನೀಡಿದ್ದಾರೆ; ಬಿಜೆಪಿ ಲೇವಡಿ

ಅಹಂಕಾರದ ಪರಮಾವಧಿ:

ಕೇಂದ್ರ ಸಚಿವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಬಿಜೆಪಿ ನಾಯಕರು ಅಧಿಕಾರದ ಮದ ಮತ್ತು ಅಹಂಕಾರದಲ್ಲಿ ಸಂಪೂರ್ಣವಾಗಿ ಮುಳುಗಿಹೋಗಿದ್ದಾರೆ. ಪ್ರತಿಭಟನೆ ಮಾಡುವ ಯುವಕರನ್ನು ಭಯೋತ್ಪಾದಕ ಎಂದು ಕರೆಯುವುದು ಅವರ ಸಂಸ್ಕಾರ ಮತ್ತು ಅಹಂಕಾರವನ್ನು ತೋರಿಸುತ್ತದೆ” ಎಂದು ಕಿಡಿಕಾರಿದ್ದಾರೆ.

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET) ಪರೀಕ್ಷಾ ಹಗರಣ ಮತ್ತು ಮರುಪರೀಕ್ಷೆಯ ವಿಚಾರದಲ್ಲಿ ಶಿಕ್ಷಣ ಸಚಿವಾಲಯದ ವೈಫಲ್ಯವನ್ನು ಮುಚ್ಚಿಹಾಕಲು ಬಿಜೆಪಿ ಇಂತಹ ದ್ವೇಷದ ರಾಜಕಾರಣ ಮತ್ತು ವೈಯಕ್ತಿಕ ನಿಂದನೆಗೆ ಇಳಿದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ‘ರಫೇಲ್ ಯುದ್ಧ ವಿಮಾನಗಳ ಬಗ್ಗೆ ಪಾಕಿಸ್ತಾನದ ಸುಳ್ಳು ಬಯಲು’; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ರಾಜೀನಾಮೆಗೆ ಪಟ್ಟು:

ದೇಶದ ಶಿಕ್ಷಣ ವ್ಯವಸ್ಥೆಯನ್ನು ಸರಿಯಾಗಿ ನಿಭಾಯಿಸಲಾಗದ ಮತ್ತು ವಿರೋಧ ಪಕ್ಷದ ನಾಯಕರ ವಿರುದ್ಧ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಧರ್ಮೇಂದ್ರ ಪ್ರಧಾನ್ ಅವರಿಗೆ ಸಚಿವರಾಗಿ ಮುಂದುವರಿಯುವ ಯಾವುದೇ ನೈತಿಕ ಹಕ್ಕಿಲ್ಲ, ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ರಾಹುಲ್ ಗಾಂಧಿ ಪಟ್ಟು ಹಿಡಿದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us