AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಭಾರೀ ಮುಖಭಂಗ; ರಾಜ್ಯಸಭೆ ಚುನಾವಣೆಗೆ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ

ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಇದರಿಂದ ಚುನಾವಣೆಗೂ ಮೊದಲೇ ಕಾಂಗ್ರೆಸ್​ಗೆ ಭಾರೀ ಹಿನ್ನಡೆಯಾಗಿದೆ. ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆ ಬಯಸಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ಮಧ್ಯಪ್ರದೇಶದ ಭೋಪಾಲ್​ ಚುನಾವಣಾಧಿಕಾರಿಯಿಂದ ತಿರಸ್ಕೃತಗೊಂಡಿದೆ. ಮೀನಾಕ್ಷಿ ಅವರ ನಾಮಪತ್ರಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು.

ಕಾಂಗ್ರೆಸ್​ಗೆ ಭಾರೀ ಮುಖಭಂಗ; ರಾಜ್ಯಸಭೆ ಚುನಾವಣೆಗೆ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ
Meenakshi NatarajanImage Credit source: TV9
ಸುಷ್ಮಾ ಚಕ್ರೆ
|

Updated on:Jun 09, 2026 | 7:38 PM

Share

ಭೋಪಾಲ್, ಜೂನ್ 9: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರಿಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ (Rajya Sabha Elections) ಸ್ಪರ್ಧಿಸಲು ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ರದ್ದುಗೊಂಡಿದೆ.

ಬಿಜೆಪಿ ಮೀನಾಕ್ಷಿ ನಟರಾಜನ್ ಅವರ ನಾಮನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು. ವರದಿಗಳ ಪ್ರಕಾರ, ಮೀನಾಕ್ಷಿ ನಟರಾಜನ್ ತೆಲಂಗಾಣದಲ್ಲಿ ಅವರ ವಿರುದ್ಧ ದಾಖಲಾಗಿದ್ದ ಕೇಸಿನ ಮಾಹಿತಿಯನ್ನು ಮರೆಮಾಚಿದ್ದರು, ಅದಕ್ಕಾಗಿಯೇ ಅವರ ನಾಮಪತ್ರ ರದ್ದುಗೊಂಡಿದೆ. ಈ ರದ್ದತಿಯು ರಾಜ್ಯದ ಮೂರು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿಯ ಮೇಲುಗೈಯನ್ನು ಸೂಚಿಸುತ್ತದೆ. ಇದರಿಂದಾಗಿ ಬಿಜೆಪಿಯ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಚುನಾವಣೆ ಇಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ, ಯಾರ್ಯಾರು?

ತೆಲಂಗಾಣದಲ್ಲಿ ಮೀನಾಕ್ಷಿ ನಟರಾಜನ್ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಿಜೆಪಿ ನಾಯಕರು ತಮ್ಮ ದೂರಿನಲ್ಲಿ ಆರೋಪಿಸಿದ್ದರು. ಮೀನಾಕ್ಷಿ ಅವರು ಉದ್ದೇಶಪೂರ್ವಕವಾಗಿ ತಮ್ಮ ಅಫಿಡವಿಟ್‌ಗಳಲ್ಲಿ ಈ ವಿವರಗಳನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿದ್ದರು. ತಮ್ಮ ಆಸ್ತಿ ಮತ್ತು ಬ್ಯಾಂಕ್ ಬ್ಯಾಲೆನ್ಸ್‌ಗಳ ಸಂಪೂರ್ಣ ವಿವರಗಳನ್ನು ತಮ್ಮ ನಾಮಪತ್ರಗಳಲ್ಲಿ ಸ್ಪಷ್ಟವಾಗಿ ಬಹಿರಂಗಪಡಿಸಲಾಗಿಲ್ಲ ಎಂದು ಬಿಜೆಪಿ ಹೇಳಿತ್ತು. ಚುನಾವಣಾ ನಿಯಮಗಳ ಪ್ರಕಾರ ಅಭ್ಯರ್ಥಿಗಳು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳು, ಅವರ ಆಸ್ತಿಗಳು ಮತ್ತು ಸಾಲಗಳ ವಿವರಗಳನ್ನು ತಮ್ಮ ಅಫಿಡವಿಟ್‌ಗಳಲ್ಲಿ ಸಂಪೂರ್ಣ ಪಾರದರ್ಶಕತೆಯೊಂದಿಗೆ ಬಹಿರಂಗಪಡಿಸಬೇಕು.

ಈ ಘಟನೆಯಿಂದಾಗಿ ರಾಜ್ಯಸಭಾ ಚುನಾವಣೆಗೆ ಮುನ್ನ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಖಭಂಗ ಉಂಟಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವು ಪರಿಶೀಲನಾ ಪ್ರಕ್ರಿಯೆಯ ವೇಳೆ ತಿರಸ್ಕೃತಗೊಂಡಿದ್ದು, ಈ ಮೂಲಕ ರಾಜ್ಯದ ಮೂರನೇ ರಾಜ್ಯಸಭಾ ಸ್ಥಾನಕ್ಕಾಗಿ ನಡೆಯಬೇಕಿದ್ದ ಸ್ಪರ್ಧೆಗೆ ತೆರೆ ಬಿದ್ದಿದೆ. ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕಾರದೊಂದಿಗೆ, ಬಿಜೆಪಿಯ ಮಹೇಶ್ ಕೇವತ್ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಕಾಂಗ್ರೆಸ್​​ನ 63 ಶಾಸಕರು ರೆಸಾರ್ಟ್​​ಗೆ

230 ಸದಸ್ಯರ ಮಧ್ಯಪ್ರದೇಶ ವಿಧಾನಸಭೆಯಲ್ಲಿ ತನ್ನ ಬಲದ ಆಧಾರದ ಮೇಲೆ ಎರಡು ರಾಜ್ಯಸಭಾ ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಸ್ಥಿತಿಯಲ್ಲಿ ಬಿಜೆಪಿ ಇತ್ತು. ಮತ್ತೊಂದೆಡೆ ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆಯುವ ನಿರೀಕ್ಷೆಯಿತ್ತು. ಒಬ್ಬ ಅಭ್ಯರ್ಥಿ ಆಯ್ಕೆಯಾಗಲು 58 ಪ್ರಥಮ ಪ್ರಾಶಸ್ತ್ಯದ ಮತಗಳ ಅಗತ್ಯವಿರುತ್ತದೆ. 164 ಶಾಸಕರನ್ನು ಹೊಂದಿರುವ ಬಿಜೆಪಿ ಎರಡು ಸ್ಥಾನಗಳನ್ನು ಸುಲಭವಾಗಿ ಗೆಲ್ಲಲು ಸಾಕಷ್ಟು ಸಂಖ್ಯಾಬಲವನ್ನು ಹೊಂದಿತ್ತು. ಇನ್ನೂ 48 ಹೆಚ್ಚುವರಿ ಮತಗಳನ್ನು ಕೈಯಲ್ಲಿ ಉಳಿಸಿಕೊಂಡಿತ್ತು. ಆದರೆ, ಮೂರನೇ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪಕ್ಷಕ್ಕೆ ಕ್ರಾಸ್ ವೋಟಿಂಗ್ ಅಥವಾ ಇತರ ಶಾಸಕರ ಬೆಂಬಲದ ಅಗತ್ಯವಿತ್ತು. ಹೀಗಾಗಿ ಈ ಸ್ಪರ್ಧೆಯು ರಾಜಕೀಯವಾಗಿ ಮಹತ್ವದ್ದಾಗಿತ್ತು.

ವಿಧಾನಸಭೆಯಲ್ಲಿ ಕಾಂಗ್ರೆಸ್ 63 ಶಾಸಕರನ್ನು ಹೊಂದಿದೆ. ಆದರೆ ಇಬ್ಬರು ಶಾಸಕರಾದ ರಾಜೇಂದ್ರ ಭಾರ್ತಿ ಮತ್ತು ಮುಖೇಶ್ ಮಲ್ಹೋತ್ರಾ ಅವರು ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಅನರ್ಹರಾಗಿದ್ದಾರೆ. ಇದು ಪಕ್ಷದ ಮತದಾನದ ಬಲವನ್ನು 61ಕ್ಕೆ ಇಳಿಸಿತ್ತು, ಇದರಿಂದಾಗಿ ಮೂರನೇ ಸ್ಥಾನದ ಸ್ಪರ್ಧೆಯು ಕಾಂಗ್ರೆಸ್‌ಗೆ ಮತ್ತಷ್ಟು ಸವಾಲಾಗಿ ಪರಿಣಮಿಸಿತ್ತು. ಆದರೆ ಇದೀಗ ಕಾಂಗ್ರೆಸ್​ ಅಭ್ಯರ್ಥಿಯ ನಾಮಪತ್ರವೇ ತಿರಸ್ಕೃತಗೊಂಡಿರುವುದರಿಂದ ಸ್ಪರ್ಧೆಯಿಲ್ಲದೆಯೇ ಬಿಜೆಪಿ ಆ ಸ್ಥಾನವನ್ನು ಕೂಡ ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 9 June 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More