Congress Protest: ಸಂಸದ ಸ್ಥಾನದಿಂದ ರಾಹುಲ್ ಅನರ್ಹ, ರಾಜ್​ಘಾಟ್​ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

|

Updated on: Mar 26, 2023 | 10:51 AM

ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ.

Congress Protest: ಸಂಸದ ಸ್ಥಾನದಿಂದ ರಾಹುಲ್ ಅನರ್ಹ, ರಾಜ್​ಘಾಟ್​ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ
ಕಾಂಗ್ರೆಸ್ ಪ್ರತಿಭಟನೆ
Follow us on

ಮೋದಿ ಉಪನಾಮದ ಕುರಿತು ಟೀಕಿಸಿದ್ದಕ್ಕಾಗಿ ರಾಹುಲ್ ಗಾಂಧಿ(Rahul Gandhi)ಯನ್ನು ದೋಷಿ ಎಂದು ಸೂರತ್ ನ್ಯಾಯಾಲಯ ತೀರ್ಪು ನೀಡಿದ್ದು, 2 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ, ಸಧ್ಯ ರಾಹುಲ್ 30 ದಿನಗಳ ಜಾಮೀನಿನ ಮೇಲೆ ಹೊರಗಿದ್ದಾರೆ. ಇದೀಗ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಈ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ.

ರಾಜ್​ಘಾಟ್​ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಬಿಜೆಪಿ ರಾಹುಲ್ ಗಾಂಧಿಗೆ ಮಾತನಾಡಲು ಬಿಡುತ್ತಿಲ್ಲ. ರಾಹುಲ್ ಗಾಂಧಿ ಅವರು ರಾಷ್ಟ್ರಕ್ಕಾಗಿ ಮತ್ತು ಸಾರ್ವಜನಿಕರ ಹಕ್ಕಿಗಾಗಿ ಹೋರಾಡುತ್ತಿದ್ದಾರೆ ಇಂದು ನಾವು ಗಾಂಧಿ ಸ್ಮಾರಕಕ್ಕೆ ಹೋಗುತ್ತೇವೆ ಮತ್ತು ಅಲ್ಲಿ ಸತ್ಯಾಗ್ರಹ ಮಾಡುತ್ತೇವೆ ಎಂದು ಖರ್ಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Rahul Gandhi: ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ; ಮೋದಿ ಉಪನಾಮ ಹೇಳಿಕೆ ಸಂಬಂಧಿಸಿ ಶಿಕ್ಷೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ, ಜೈರಾಮ್ ರಮೇಶ್, ಕೆಸಿ ವೇಣುಗೋಪಾಲ್ ಮತ್ತು ಇತರ ನಾಯಕರು ರಾಜ್‌ಘಾಟ್‌ಗೆ ಆಗಮಿಸಿ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.

2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್  2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.  ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.

ಜನಪ್ರತಿನಿಧಿಗಳ ಕಾಯ್ದೆ ಏನು ಹೇಳುತ್ತೆ?
ಜನಪ್ರತಿನಿಧಿಗಳ ಕಾಯ್ದೆಯಂತೆ ಶಾಸಕರು/ ಸಂಸದರು ಎರಡು ನಿದರ್ಶನಗಳಲ್ಲಿ ತಮ್ಮ ಸ್ಥಾನದಿಂದ ಅನರ್ಹರಾಗಬಹುದು. ಮೊದಲು ಸೆಕ್ಷನ್ 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ ಮತ್ತು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಥವಾ ಸೆಕ್ಷನ್ 171E (ಲಂಚ ತೆಗೆದುಕೊಳ್ಳುವುದು)ನಂತಹ ಪ್ರಕರಣ ಅಥವಾ ಸೆಕ್ಷನ್ 171F (ಚುನಾವಣೆಯಲ್ಲಿ ಅನಗತ್ಯ ಪ್ರಭಾವದ) ಅಪರಾಧ ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾದರೆ ತಮ್ಮ ಸ್ಥಾನವನ್ನು ಸಂಸದರು ಕಳೆದುಕೊಳ್ಳಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 10:51 am, Sun, 26 March 23