ಅನಂತ್​​ನಾಗ್​, ಬಾರಾಮುಲ್ಲಾದಲ್ಲಿ ಮುಂದುವರಿದ ಎನ್​ಕೌಂಟರ್; ಒಬ್ಬ ಉಗ್ರನ ಹತ್ಯೆ

ಅನಂತನಾಗ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಎನ್​ಕೌಂಟರ್​​ನಲ್ಲಿ ಉಗ್ರರ ಗುಂಡಿನ ದಾಳಿಗೆ ಒಟ್ಟು ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿಎಸ್‌ಪಿ ಹುಮಾಯೂನ್ ಭಟ್ ಸೇರಿದಂತೆ ನಾಲ್ವರು ಅಧಿಕಾರಿಗಳು ಹುತಾತ್ಮರಾಗಿದ್ದಾರೆ.

ಅನಂತ್​​ನಾಗ್​, ಬಾರಾಮುಲ್ಲಾದಲ್ಲಿ ಮುಂದುವರಿದ ಎನ್​ಕೌಂಟರ್; ಒಬ್ಬ ಉಗ್ರನ ಹತ್ಯೆ
ಸಾಂದರ್ಭಿಕ ಚಿತ್ರ

Updated on: Sep 16, 2023 | 9:51 AM

ಶ್ರೀನಗರ, ಸೆಪ್ಟೆಂಬರ್ 16: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ (Encounter) ಭಯೋತ್ಪಾದಕನನ್ನು (Terrorist) ಹತ್ಯೆ ಮಾಡಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಮುಂಚೂಣಿ ಪ್ರದೇಶದಲ್ಲಿ ಭಯೋತ್ಪಾದಕರು, ಸೇನೆ ನಡುವೆ ಎನ್‌ಕೌಂಟರ್ ಪ್ರಾರಂಭವಾಯಿತು. ಬಾರಾಮುಲ್ಲಾ ಪೊಲೀಸರು ಸೇನೆ ಜತೆ ಕಾರ್ಯಾಚರಣೆಯಲ್ಲಿ ಸಾಥ್ ನೀಡಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ. ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ, ಅವಿತಿರುವವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಟ್ವೀಟ್​​ನಲ್ಲಿ ಉಲ್ಲೇಖಿಸಲಾಗಿದೆ.

ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ನಡೆಯುತ್ತಿರುವ ಎನ್‌ಕೌಂಟರ್ ಶನಿವಾರ 4 ನೇ ದಿನಕ್ಕೆ ಕಾಲಿಟ್ಟಿದೆ. ಭಯೋತ್ಪಾದಕರ ಪತ್ತೆಗೆ ಡ್ರೋನ್​ಗಳನ್ನು ಕೂಡ ಬಳಸಲಾಗುತ್ತಿದೆ.

ಅನಂತನಾಗ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಎನ್​ಕೌಂಟರ್​​ನಲ್ಲಿ ಉಗ್ರರ ಗುಂಡಿನ ದಾಳಿಗೆ ಒಟ್ಟು ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿಎಸ್‌ಪಿ ಹುಮಾಯೂನ್ ಭಟ್ ಸೇರಿದಂತೆ ನಾಲ್ವರು ಅಧಿಕಾರಿಗಳು ಹುತಾತ್ಮರಾಗಿದ್ದಾರೆ.

ಮತ್ತೊಂದೆಡೆ, ಕಾಶ್ಮೀರದ ಕೋಕರ್ನಾಗ್ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆಯುತ್ತಿರುವ ಎನ್‌ಕೌಂಟರ್ ಇನ್ನೂ ಮುಂದುವರೆದಿದೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ಬಿಗಿ ಬಂದೋಬಸ್ತ್ ಮಾಡುತ್ತಿವೆ. ಕೊಕರ್ನಾಗ್‌ನ ಗಡೋಲ್‌ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶೀಘ್ರದಲ್ಲೇ ಭಯೋತ್ಪಾದಕರನ್ನು ಪತ್ತೆಹಚ್ಚಿ ಹತ್ಯೆ ಮಾಡಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಸದ್ಯ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಭಯೋತ್ಪಾದಕರ ಹುಡುಕಾಟಕ್ಕೆ ಸೇನೆಯು ಡ್ರೋನ್‌ಗಳನ್ನು ಸಹ ಬಳಸುತ್ತಿದೆ, ಅವರ ಕ್ಯಾಮೆರಾಗಳು ಭಯೋತ್ಪಾದಕರ ಚಲನವಲನವನ್ನು ಸಹ ಸೆರೆಹಿಡಿದಿವೆ. ಭಯೋತ್ಪಾದಕರು ಬೆಟ್ಟಗಳು ಮತ್ತು ಅರಣ್ಯಗಳಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅನಂತ್​ನಾಗ್​ನಲ್ಲಿ ಮುಂದುವರೆದ ಎನ್​ಕೌಂಟರ್​ನಲ್ಲಿ ಮತ್ತೋರ್ವ ಯೋಧ ಹುತಾತ್ಮ

ಕ್ವಾಡ್‌ಕಾಪ್ಟರ್‌ಗಳು, ಡ್ರೋನ್‌ಗಳು ಮತ್ತು ಇತರ ಆಧುನಿಕ ಉಪಕರಣಗಳೊಂದಿಗೆ ಭಯೋತ್ಪಾದಕರ ಮೇಲೆ ನಿಗಾ ಇರಿಸಲಾಗಿದೆ. ಪ್ಯಾರಾ ಕಮಾಂಡೋಗಳು ಕೂಡ ಕಾರ್ಯಾಚರಣೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ದಟ್ಟ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶವಾದ್ದರಿಂದ ಈ ವಿಶೇಷ ತುಕಡಿಯನ್ನು ನಿಯೋಜಿಸಲಾಗಿದೆ. ಇದಲ್ಲದೇ ಬೆಟ್ಟದ ಮೇಲಿರುವ ಭಯೋತ್ಪಾದಕರ ಅಡಗುತಾಣದ ಮೇಲೆ ರಾಕೆಟ್ ದಾಳಿ ನಡೆಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us