Cyclone Fengal: ತಮಿಳುನಾಡು ಕರಾವಳಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ಹೈ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತವು ತಮಿಳುನಾಡು ಮತ್ತು ಪುದುಚೇರಿಯ ಕರಾವಳಿಗೆ ಇಂದು ಅಪ್ಪಳಿಸಲಿದೆ. ಐಎಂಡಿ ರೆಡ್ ಅಲರ್ಟ್ ಘೋಷಿಸಿದ್ದು, ಗಾಳಿಯ ವೇಗ ಗಂಟೆಗೆ 90 ಕಿಮೀ ತಲುಪುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳು ಹೆಚ್ಚು ಪೀಡಿತವಾಗುವ ನಿರೀಕ್ಷೆಯಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಮತ್ತು ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ.

Cyclone Fengal: ತಮಿಳುನಾಡು ಕರಾವಳಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ಹೈ ಅಲರ್ಟ್
ಚೆನ್ನೈ ಬೀಚ್​ ಬಳಿ ಸಮುದ್ರದಲ್ಲಿ ಕಂಡುಬಂದ ಭಾರಿ ಗಾತ್ರದ ಅಲೆ
Image Credit source: PTI

Updated on: Nov 30, 2024 | 10:15 AM

ನವದೆಹಲಿ, ನವೆಂಬರ್ 30: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಫೆಂಗಲ್’ ಚಂಡಮಾರುತ ಇಂದು ತಮಿಳುನಾಡು ಹಾಗೂ ಪುದುಚೇರಿಯ ಕರಾವಳಿಗೆ ಅಪ್ಪಳಿಸಲಿದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡಿನ ಹಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಇಂದು ಮಧ್ಯಾಹ್ನ ಪುದುಚೇರಿ ಕರಾವಳಿಗೆ ‘ಫೆಂಗಲ್’ ತಲುಪಬಹುದು. ಇದರ ಪರಿಣಾಮದಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಮತ್ತು ಗಾಳಿಯ ವೇಗ ಗಂಟೆಗೆ 90 ಕಿಲೋಮೀಟರ್ ವರೆಗೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಈ ಅವಧಿಯಲ್ಲಿ ಸಮುದ್ರದಲ್ಲಿ ಭಾರಿ ಅಲೆಗಳು ಏಳಬಹುದು. ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶ, ಕೇರಳ ಮತ್ತು ಕರ್ನಾಟಕದ ಒಳನಾಡಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.

ಪುದುಚೇರಿ ಬಳಿಯ ಕಾರೈಕಲ್ ಮತ್ತು ಮಹಾಬಲಿಪುರಂ ನಡುವಿನ ಕ್ರಾಸಿಂಗ್ ಪಾಯಿಂಟ್‌ನಲ್ಲಿರುವ ಬಹುತೇಕ ಕರಾವಳಿ ಜಿಲ್ಲೆಗಳ ಮೇಲೆ ಫೆಂಗಲ್ ಸೈಕ್ಲೋನ್‌ನ ಪರಿಣಾಮ ಹೆಚ್ಚಾಗಿರಲಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ನಿರ್ದೇಶಕ ಡಾ. ಎಸ್ ಬಾಲಚಂದ್ರನ್ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಭಾರಿ ಮಳೆ

ತಮಿಳುನಾಡು ಕರಾವಳಿಯಲ್ಲಿ ಜೋರಾದ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 60-70 ಕಿ.ಮೀ ನಿಂದ 90 ಕಿ.ಮೀ. ವರೆಗೆ ಇರಲಿದೆ. ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ಭಾರೀ ಮಳೆಯಾಗಲಿದೆ.

ತಮಿಳುನಾಡಿನ ವಿವಿಧೆಡೆ ಶಾಲಾ ಕಾಲೇಜುಗಳಿಗೆ ರಜೆ

ಪುದುಚೇರಿ ಮತ್ತು ಕಾಂಚೀಪುರಂ ಸೇರಿದಂತೆ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಏತನ್ಮಧ್ಯೆ, ಪುದುಚೇರಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಇಲಾಖೆ ಮೀನುಗಾರರಿಗೆ ಸೂಚನೆ ನೀಡಿದೆ.

ಎನ್​ಡಿಆರ್​ಎಫ್, ಎಸ್​ಡಿಆರ್​ಎಫ್ ಸಿಬ್ಬಂದಿ ಸನ್ನದ್ಧ

ಕಾಮೇಶ್ವರಂ, ವಿರುಂಧಮಾವಾಡಿ, ಪುದುಪಲ್ಲಿ, ವೆಡ್ರಪ್ಪು, ವನ್ಮಾದೇವಿ, ವಲ್ಲಪಳ್ಳಂ, ಕಳ್ಳಿಮೇಡು, ಎರವಯಲ್ ಮತ್ತು ಚೆಂಬೋಡಿ ಕೂಡ ಪೀಡಿತ ಪ್ರದೇಶಗಳಲ್ಲಿ ಸೇರಿವೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಎನ್​ಡಿಆರ್​​ಎಫ್ ಮತ್ತು ಎಸ್​​ಡಿಆರ್​ಎಫ್ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ಸಹಾಯವಾಣಿ ಆರಂಭ

ತುರ್ತು ಸ್ಥಿತಿಯಲ್ಲಿ ಜನರಿಗೆ ಸಹಾಯ ಮಾಡಲು ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯು ಟೋಲ್ ಫ್ರೀ ಸಂಖ್ಯೆ 112 ಮತ್ತು 1077 ಅನ್ನು ಆರಂಭಿಸಿದೆ. ಜನರು ವಾಟ್ಸಾಪ್ ಸಂಖ್ಯೆ 9488981070 ಮೂಲಕ ಸಹಾಯಕ್ಕಾಗಿ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಸಾಧ್ಯತೆ

ಇದುವರೆಗೆ ತಿರುವರೂರ್ ಮತ್ತು ನಾಗಪಟ್ಟಣಂ ಜಿಲ್ಲೆಗಳ ಆರು ಪರಿಹಾರ ಕೇಂದ್ರಗಳಲ್ಲಿ 164 ಕುಟುಂಬಗಳ ಒಟ್ಟು 471 ಜನರನ್ನು ಇರಿಸಲಾಗಿದೆ. ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ಚೆನ್ನೈ ಮತ್ತು ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಶನಿವಾರ ಬೆಳಿಗ್ಗೆ ಲಘು ಮಳೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us