ದೆಹಲಿಯಲ್ಲಿ ಕಾರು ಸ್ಫೋಟದಿಂದ 11 ಜನ ಸಾವು; ಅಮಿತ್ ಶಾಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ಇಂದು ಸಂಜೆ ದೆಹಲಿಯಲ್ಲಿ ಕಾರಿನಲ್ಲಿ ಸ್ಫೋಟ ಉಂಟಾಗಿದೆ. ಈ ಘಟನೆ ನಡೆದ ತಕ್ಷಣ ಗೃಹ ಸಚಿವ ಅಮಿತ್ ಶಾ ಅವರು ದೆಹಲಿ ಪೊಲೀಸ್ ಆಯುಕ್ತರು ಮತ್ತು ಗುಪ್ತಚರ ಬ್ಯೂರೋ ಮುಖ್ಯಸ್ಥರೊಂದಿಗೆ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಗೃಹ ಸಚಿವ ಅಮಿತ್ ಶಾ ಜೊತೆ ದೂರವಾಣಿಯಲ್ಲಿ ಮಾತನಾಡಿ, ಈ ಘಟನೆಯ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಈ ಸ್ಫೋಟದ ಬಳಿಕ ದೆಹಲಿಯಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ.

ದೆಹಲಿಯಲ್ಲಿ ಕಾರು ಸ್ಫೋಟದಿಂದ 11 ಜನ ಸಾವು; ಅಮಿತ್ ಶಾಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
Amit Shah

Updated on: Nov 10, 2025 | 9:50 PM

ನವದೆಹಲಿ, ನವೆಂಬರ್ 10: ದೆಹಲಿಯ ಕೆಂಪು ಕೋಟೆಯ (Red Fort) ಮೆಟ್ರೋ ಸ್ಟೇಷನ್ ಬಳಿ ಇಂದು ಸಂಜೆ 6.55ಕ್ಕೆ ಕಾರಿನಲ್ಲಿ ಸ್ಫೋಟ (Delhi Car Blast) ಉಂಟಾಗಿದೆ. ಈ ವೇಳೆ ಅಕ್ಕಪಕ್ಕದ ಕಾರುಗಳಿಗೂ ಬೆಂಕಿ ಹೊತ್ತಿಕೊಂಡು 11 ಜನರು ಮೃತಪಟ್ಟಿದ್ದಾರೆ. ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಅಳವಡಿಸಲಾದ ಎಲ್ಲಾ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ತನಿಖೆಗಾಗಿ ಎನ್ಐಎ, ಎನ್ಎಸ್​ಜಿ ಮತ್ತು ದೆಹಲಿ ಪೊಲೀಸರ ತಂಡಗಳನ್ನು ನಿಯೋಜಿಸಲಾಗಿದೆ.

ದೆಹಲಿಯಲ್ಲಿ ಸ್ಫೋಟ ಉಂಟಾದ ಹಿನ್ನಲೆಯಲ್ಲಿ ಗುಜರಾತ್‌ನಲ್ಲಿದ್ದ ದೆಹಲಿ ಲೆಫ್ಟಿನೆಂಟ್‌ ಜನರಲ್‌ ವಿನಯ್‌ ಕುಮಾರ್‌ ಸಕ್ಸೇನಾ ಹಾಗೂ ದೆಹಲಿಯ ಸಚಿವ ಕಪಿಲ್‌ ಮಿಶ್ರಾ ದೆಹಲಿಯತ್ತ ಆಗಮಿಸಿದ್ದಾರೆ. 11 ಜನರು ಮೃತಪಟ್ಟ ಹಿನ್ನೆಲೆಯಲ್ಲಿ ಈ ಘಟನೆಯ ಕುರಿತು ತುರ್ತು ತನಿಖೆ ನಡೆಸಿ ವರದಿ ಸಲ್ಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ, ಘಟನೆಯ ಮಾಹಿತಿ ಪಡೆದಿದ್ದಾರೆ.


ಇದನ್ನೂ ಓದಿ: ದೆಹಲಿಯಲ್ಲಿ ಕಾರು ಸ್ಫೋಟ; ಧಗಧಗನೆ ಹೊತ್ತಿ ಉರಿದ ವಾಹನಗಳು

ಈ ಘಟನೆಯ ಕುರಿತು ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಅವರು ಗುಪ್ತಚರ ಬ್ಯೂರೋ (ಐಬಿ) ನಿರ್ದೇಶಕ ತಪನ್ ಕುಮಾರ್ ಅವರೊಂದಿಗೂ ಸಂಪರ್ಕದಲ್ಲಿದ್ದಾರೆ. ಈ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೆಂಪು ಕೋಟೆ ಬಳಿ ಕಾರು ಸ್ಫೋಟವಾಗಿ 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್

ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1 ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ಎನ್‌ಐಎ, ಎನ್‌ಎಸ್‌ಜಿಯಿಂದ ತನಿಖೆ ನಡೆಸಲಾಗುತ್ತಿದೆ. ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ತೆರಳುತ್ತೇನೆ. ಆ ಬಳಿಕ ಆಸ್ಪತ್ರೆಗೆ ಭೇಟಿ ನೀಡುವೆ. ಕಾರು ಸ್ಫೋಟದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು. ಆ ಸ್ಫೋಟದ ಸ್ಥಳದಲ್ಲಿ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ. i20 ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿ ಸತ್ಯಾಸತ್ಯತೆ ಜನರಿಗೆ ತಿಳಿಸ್ತೇವೆ’ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us