ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಸೇವಾ ಕಾರ್ಯದರ್ಶಿಯನ್ನು ಹುದ್ದೆಯಿಂದ ತೆಗೆದುಹಾಕಿದ ಕೇಜ್ರಿವಾಲ್ ಸರ್ಕಾರ

ಸುಪ್ರೀಂ ತೀರ್ಪಿನ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಾರ್ವಜನಿಕ ಕಾರ್ಯಗಳಿಗೆ ಅಡಚಣೆ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಸೇವಾ ಕಾರ್ಯದರ್ಶಿಯನ್ನು ಹುದ್ದೆಯಿಂದ ತೆಗೆದುಹಾಕಿದ ಕೇಜ್ರಿವಾಲ್ ಸರ್ಕಾರ
ಅರವಿಂದ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ

Updated on: May 11, 2023 | 8:06 PM

ಎಎಪಿ (AAP) ನೇತೃತ್ವದ ದೆಹಲಿ ಸರ್ಕಾರವು ಗುರುವಾರ ಸೇವೆಗಳ ಕಾರ್ಯದರ್ಶಿ ಆಶಿಶ್ ಮೋರ್ (Ashish More)ಅವರನ್ನು ಹುದ್ದೆಯಿಂದ ತೆಗೆದುಹಾಕಿದೆ. ಸುಪ್ರೀಂಕೋರ್ಟ್ (Supreme Court) ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಮೇಲೆ ಎಎಪಿ ವಿತರಣಾ ನಿಯಂತ್ರಣವನ್ನು ನೀಡಿದ ಗಂಟೆಗಳ ನಂತರ ಈ ಕ್ರಮ ಬಂದಿದೆ. ಸುಪ್ರೀಂ ತೀರ್ಪಿನ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಾರ್ವಜನಿಕ ಕಾರ್ಯಗಳಿಗೆ ಅಡಚಣೆ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದರು. ಕಳೆದ ಒಂದೂವರೆ ವರ್ಷಗಳಲ್ಲಿ ದೆಹಲಿಯ ಜನರ ಕೆಲಸಕ್ಕೆ ಅಡ್ಡಿಪಡಿಸಿದ ಕೆಲವು ಅಧಿಕಾರಿಗಳು, ಮೊಹಲ್ಲಾ ಚಿಕಿತ್ಸಾಲಯಗಳು ಮತ್ತು ಆಸ್ಪತ್ರೆಗಳಿಗೆ ಔಷಧಿಗಳ ಪೂರೈಕೆಯನ್ನು ನಿಲ್ಲಿಸಿದರು, ಕೆಲವು ಸ್ಥಳಗಳಲ್ಲಿ ನೀರು ಸರಬರಾಜು ನಿಲ್ಲಿಸಿದರು. ಅವರು ಇದಕ್ಕಾಗಿ ಬೆಲೆ ತೆರಬೇಕಾಗುತ್ತದೆ. ದಕ್ಷ, ಪ್ರಾಮಾಣಿಕ, ಸ್ಪಂದಿಸುವ ಮತ್ತು ಸಹಾನುಭೂತಿಯುಳ್ಳ ಅಧಿಕಾರಿಗಳಿಗೆ ದೆಹಲಿಯ ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಒತ್ತಿ ಹೇಳಿದರು.

ಆಡಳಿತ ವ್ಯವಸ್ಥೆಯ ಕೂಲಂಕುಷ ಪರೀಕ್ಷೆಯೂ ನಡೆಯಲಿದೆ. ಇಡೀ ವ್ಯವಸ್ಥೆಯೇ ಕೊಳೆತು ಹೋಗಿದೆ. ನಾವು ಸಾರ್ವಜನಿಕರಿಗೆ ಜವಾಬ್ದಾರಿಯುತ ವ್ಯವಸ್ಥೆಯನ್ನು ರಚಿಸುತ್ತೇವೆ ಎಂದು ಅವರು ಹೇಳಿದರು.

ಎಎಪಿ ಸರ್ಕಾರವು ತನ್ನ ಕೆಲಸಕ್ಕೆ ಅಡ್ಡಿಪಡಿಸಿದ್ದಕ್ಕೆ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಮತ್ತು ಪ್ರಧಾನ ಕಾರ್ಯದರ್ಶಿ (ಹಣಕಾಸು) ಆಶಿಶ್ ಚಂದ್ರ ವರ್ಮಾ ಸೇರಿದಂತೆ ಉನ್ನತ ಅಧಿಕಾರಿಗಳನ್ನು ದೂಷಿಸಿದೆ.

ಇದನ್ನೂ ಓದಿ: ತಪ್ಪು ಮಾಡಿದರೆ ಬೆಲೆ ತೆರಬೇಕಾಗುತ್ತದೆ: ಸುಪ್ರೀಂಕೋರ್ಟ್ ತೀರ್ಪು ನಂತರ ಅಧಿಕಾರಿಗಳಿಗೆ ಕೇಜ್ರಿವಾಲ್ ಎಚ್ಚರಿಕೆ

ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿಗೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ ಸೇವೆಗಳ ಆಡಳಿತದ ಮೇಲೆ ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಕಾರಿ ಅಧಿಕಾರವನ್ನು ಹೊಂದಿದೆ ಸುಪ್ರೀಂಕೋರ್ಟ್ ಘೋಷಿಸಿತು. ನ್ಯಾಯಾಲಯದ ತೀರ್ಪಿನ ಮೊದಲು, ಸೇವೆಗಳ ಇಲಾಖೆಯು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರ ನಿಯಂತ್ರಣದಲ್ಲಿತ್ತು.

ರಾಷ್ಟ್ರ ರಾಜಧಾನಿಯಲ್ಲಿ ಸೇವೆಗಳ ಮೇಲೆ ನಿಯಂತ್ರಣವನ್ನು ಪ್ರತಿಪಾದಿಸುವ ಕೇಂದ್ರ ಗೃಹ ಸಚಿವಾಲಯದ 2015 ರ ಅಧಿಸೂಚನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯನ್ನುಟೀಕಿಸಿದ ಕೇಜ್ರಿವಾಲ್, ಕೇಂದ್ರ ಸರ್ಕಾರ ಕೈ ಕಟ್ಟಿ ನೀರಿನಲ್ಲಿ ಎಸೆದರೂ ದೆಹಲಿ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ ಎಂದು ಹೇಳಿದ್ದಾರೆ. ದೆಹಲಿ ಸರ್ಕಾರದ ಪರವಾಗಿ ಸರ್ವಾನುಮತದ ತೀರ್ಪು ನೀಡಿದ್ದಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ದೆಹಲಿ ಸಿಎಂ ಧನ್ಯವಾದ ಅರ್ಪಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಅಭಿವೃದ್ಧಿ ಕಾರ್ಯಗಳ ವೇಗವು ಹಲವಾರು ಪಟ್ಟು ಹೆಚ್ಚಾಗುತ್ತದೆ ಎಂದು ಭರವಸೆ ನೀಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us