2020 Delhi Riots: ದೆಹಲಿ ಗಲಭೆ ಪ್ರಕರಣ, ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಜಾ
ದೆಹಲಿ ಗಲಭೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಜೈಲಿನಲ್ಲಿರುವ ಶಾರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಅವರ ಜಾಮೀನು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ದೆಹಲಿ ಗಲಭೆ ಪ್ರಕರಣದಲ್ಲಿ ಇತರ ಐದು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಾಲಯವು ಇದಕ್ಕೆ ಕಾರಣಗಳನ್ನು ಸಹ ವಿವರಿಸಿದೆ.

ನವದೆಹಲಿ, ಜನವರಿ 05: ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ(Riots) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಡಿಸೆಂಬರ್ 10 ರಂದು, ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಸಿದ್ಧಾರ್ಥ ದವೆ, ಸಲ್ಮಾನ್ ಖುರ್ಷಿದ್ ಮತ್ತು ಸಿದ್ಧಾರ್ಥ್ ಲೂಥ್ರಾ ಅವರ ವಾದಗಳನ್ನು ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿತ್ತು.
ದೆಹಲಿ ಗಲಭೆಯ ಏಳು ಆರೋಪಿಗಳಲ್ಲಿ ಐವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ,. ಆದರೆ ಇಬ್ಬರು ಶಾರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ಗೆ ಜಾಮೀನು ನೀಡಲು ನಿರಾಕರಿಸಿದೆ. ಪ್ರತಿಯೊಂದು ಪ್ರಕರಣವನ್ನು ಪ್ರತ್ಯೇಕವಾಗಿ ಪರಿಶೀಲಿಸಿರುವುದಾಗಿ ನ್ಯಾಯಾಲಯ ಹೇಳಿದೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ, ಈ ಗಲಭೆಯಲ್ಲಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಪ್ರಮುಖ ಪಾತ್ರವಿದೆ ಎಂಬುದು ತಿಳಿದುಬಂದಿದೆ. ಇಬ್ಬರೂ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನುಗಾಗಿ ಮೇಲ್ಮನವಿ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.
ತೀರ್ಪನ್ನು ಓದುವಾಗ, ಪೀಠವು ಜಾಮೀನು ಕೋರುವವರಿಗೆ ಕಠಿಣ ಷರತ್ತುಗಳನ್ನು ವಿಧಿಸಬಹುದು ಎಂದು ಹೇಳಿದೆ. ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಪಾತ್ರಗಳು ಇತರರಿಗಿಂತ ಭಿನ್ನವಾಗಿವೆ. ಎಲ್ಲಾ ಆರೋಪಿಗಳ ಪಾತ್ರಗಳು ಒಂದೇ ಆಗಿಲ್ಲ ಎಂದು ದಾಖಲೆ ತೋರಿಸುತ್ತದೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪಗಳು ಬಲವಾಗಿವೆಯೇ ಎಂದು ನಾವು ಪರಿಶೀಲಿಸಬೇಕು. ಎಲ್ಲಾ ಆರೋಪಿಗಳ ಪಾತ್ರಗಳ ಕುರಿತು ಪ್ರಸ್ತುತಪಡಿಸಲಾದ ಸಂಗತಿಗಳನ್ನು ಸಹ ನಾವು ಪರಿಗಣಿಸಬೇಕು ಎಂದು ಪೀಠ ಹೇಳಿದೆ.
ಮತ್ತಷ್ಟು ಓದಿ: ಬಳ್ಳಾರಿ ಗಲಭೆ: ಪೊಲೀಸ್ ವಶದಲ್ಲಿದ್ದ 9 ಗನ್ಮ್ಯಾನ್ ಪೈಕಿ ಓರ್ವ ಅರೆಸ್ಟ್
2020 ರ ದೆಹಲಿ ಗಲಭೆಗೆ ಪ್ರಚೋದನೆ ನೀಡಲು ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಅಲಿಯಾಸ್ ರೆಹಮಾನ್, ಶಹದಾಬ್ ಅಹ್ಮದ್ ಮತ್ತು ಮೊಹಮ್ಮದ್ ಸಲೀಂ ಐದು ವರ್ಷಗಳಿಂದ ಜೈಲಿನಲ್ಲಿರಿಸಲಾಗಿದೆ.
ಡಿಸೆಂಬರ್ 10, 2025 ರಂದು ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ಜಾಮೀನಿನ ಮೇಲಿನ ತನ್ನ ನಿರ್ಧಾರವನ್ನು ಕಾಯ್ದಿರಿಸಿತ್ತು. ದೆಹಲಿ ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಅವರಿಗೆ ಜಾಮೀನು ನಿರಾಕರಿಸಿದೆ. ಸೆಪ್ಟೆಂಬರ್ 2 ರಂದು, ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ಜಾಮೀನಿನ ಅಂಶಗಳನ್ನು ಉಲ್ಲೇಖಿಸಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:35 am, Mon, 5 January 26
